ಸುದ್ದಿ ಕಣಜ.ಕಾಂ
ಬೆಂಗಳೂರು: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರ ಅಸ್ತು ನೀಡಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚಿಸಿದ್ದಾರೆ.
ಇತ್ತೀಚೆಗೆ, ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಿ, 50 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ಅದರ ಬೆನ್ನಲ್ಲೇ ವೀರಶೈವ ಲಿಂಗಾಯತ ನಿಗಮಕ್ಕೂ ಸರ್ಕಾರ ಒಲವು ತೋರಿದೆ. ಆದರೆ, ಆದೇಶದಲ್ಲಿ ನಿಗಮಕ್ಕೆ ನೀಡಲಿರುವ ಅನುದಾನ ಇನ್ನಿತರ ಮಾಹಿತಿಗಳನ್ನು ನೀಡಿಲ್ಲ. ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ಕೆಲವು ನಿರ್ಣಯಗಳನ್ನು ಕೈಗೊಳ್ಳುವ ಸಾಧ್ಯತೆ ಎಂದು ಹೇಳಲಾಗುತ್ತಿದೆ.
ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮಾಜದವರು ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದವರೂ ಇದ್ದಾರೆ. ಅವರೆಲ್ಲರ ಸರ್ವತೋಮುಖ ಅಭಿವೃದ್ಧಿಗೆ ನಿಗಮ ಸ್ಥಾಪನೆ ಅಗತ್ಯ ಎಂದು ಮುಖ್ಯಮಂತ್ರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಸಿಎಂ ನಿರ್ಧಾರಕ್ಕೆ ಸ್ವಾಗತ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಯ ಬಗ್ಗೆ ಕೈಗೊಂಡಿರುವ ನಿರ್ಧಾರಕ್ಕೆ ವಸತಿ ಸಚಿವ ವಿ. ಸೋಮಣ್ಣ ಅವರು ಟ್ವೀಟ್ ಮಾಡಿ ಸ್ವಾಗತಿಸಿದ್ದಾರೆ.
ಕೆಪಿಸಿಸಿ ಕಾಯಾಧ್ಯಕ್ಷ ಈಶ್ವರ್ ಖಂಡ್ರೆ ಅವರೂ ನಿಗಮ ಘೋಷಿಸಿದ್ದನ್ನು ಸ್ವಾಗತಿಸಿದ್ದಾರೆ. ಆದರೆ, ಇದೊಂದು ರಾಜಕೀಯ ತಂತ್ರ ಎಂದು ಟೀಕಿಸಿದ್ದಾರೆ. ಜತೆಗೆ, ನಿಗಮ ಸ್ಥಾಪಿಸಿ ಅದಕ್ಕೆ ಐದು ಸಾವಿರ ಕೋಟಿ ರೂ. ಅನುದಾನ ಮಂಜೂರು ಮಾಡಬೇಕು. ರಾಜ್ಯದಲ್ಲಿ ಸಮುದಾಯ ದೊಡ್ಡ ಪ್ರಮಾಣದಲ್ಲಿ ಇರುವುದರಿಂದ ಕಡಿಮೆ ಅನುದಾನ ನೀಡಿದರೆ ಪ್ರಯೋಜನವಿಲ್ಲ ಎಂದು ಒತ್ತಾಯಿಸಿದ್ದಾರೆ.