ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಸ್ಕಿ, ಬಸವಕಲ್ಯಾಣ, ಬೆಳಗಾವಿ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿಯೇ ಗೆಲುವು ಸಾಧಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ದೇಶದಲ್ಲಿ ಇನ್ಮುಂದೆ ಯಾವುದೇ ಚುನಾವಣೆ ನಡೆದರೂ ಬಿಜೆಪಿಯೇ ಗೆಲ್ಲಲಿದೆ ಎಂದು ಹೇಳಿದರು.
ಮುಂದಿನ ಎಂಎಲ್ಎ ಎಲೆಕ್ಷನ್ ಗೆ ಉಪ ಚುನಾವಣೆ ದಿಕ್ಸೂಚಿ: ಉಪ ಚುನಾವಣೆ ಫಲಿತಾಂಶ ಮುಂದಿನ ವಿಧಾನ ಸಭೆಗೆ ದಿಕ್ಸೂಚಿ ಎಂದು ಕಾಂಗ್ರೆಸ್ ವರಿಷ್ಠರಾದ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಅವರೇ ಹೇಳಿದ್ದರು. ಆ ಸವಾಲನ್ನು ನಾವೂ ಸ್ವೀಕರಿಸಿದ್ದೆವು. ಅದರಂತೆ, ಆರ್.ಆರ್.ನಗರ ಮತ್ತು ಶಿರಾದಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಬರುವ ಲೋಕಸಭೆ ಚುನಾವಣೆಯಲ್ಲೂ ನಾವೇ ಗೆಲ್ಲೋದು ಎಂದರು.
ಯಾವುದೇ ಚುನಾವಣೆ ನಡೆಯಲಿ ನಮ್ದೆ ಜಯ: ಬರುವ ವಿಧಾನಸಭೆ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿಯೇ ವಿಜಯ ಮುಂದುವರಿಸಲಿದೆ. ಪೂರ್ಣ ಬಹುಮತದೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ. ದೇಶದಲ್ಲಿ ಯಾವುದೇ ಚುನಾವಣೆ ನಡೆಯಲಿ. ಕಮಲಕ್ಕೆ ಜಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.