ಸುದ್ದಿ ಕಣಜ.ಕಾಂ
ಶಿವಮೊಗ್ಗ: ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸಂಬಂಧಪಟ್ಟಂತೆ ಉಚ್ಚ ನ್ಯಾಯಾಲಯ ನೀಡಿರುವ ಸೂಚನೆಯಿಂದಾಗಿ ದೇವಸ್ಥಾನ ಆಡಳಿತ ಮಂಡಳಿ ನಿರಾಳವಾಗಿದೆ. ಸರ್ಕಾರ ನ್ಯಾಯಾಲಯ ಕೇಳಿರುವ ಮಾಹಿತಿಗೆ ಯಾವ ರೀತಿಯಲ್ಲಿ ಸ್ಪಂದಿಸುತ್ತದೆ ಎಂಬ ಅಂಶದ ಆಧಾರದ ಮೇಲೆ ಭವಿಷ್ಯದ ಬೆಳವಣಿಗೆಗಳು ನಿರ್ಧಾರವಾಗಲಿವೆ.
ಶಿವಮೊಗ್ಗದ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ದೇವಸ್ಥಾನಕ್ಕೆ ನೇಮಿಸಿರುವ ಸಲಹೆ ಮತ್ತು ಮೇಲ್ವಿಚಾರಣೆ ಸಮಿತಿ ಕುರಿತು ಆಕ್ಷೇಪಣೆ ಸಲ್ಲಿಸುವಂತೆ ಸರಕಾರಕ್ಕೆ ಉಚ್ಚ ನ್ಯಾಯಾಲಯ ಸೂಚಿಸಿದೆ.
ನಡೆದಿದ್ದೇನು?: ಜಿಲ್ಲಾಡಳಿತದ ಕ್ರಮವನ್ನು ಪ್ರಶ್ನಿಸಿ ಆಡಳಿತ ಮಂಡಳಿ ಉಚ್ಛ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದಿನೇಶ್ ಕುಮಾರ್ ಅವರಿದ್ದ ಏಕ ಸದಸ್ಯ ಪೀಠ ಸರಕಾರಕ್ಕೆ ಸೂಚನೆ ನೀಡಿದೆ.
ಖಾಸಗಿ ಟ್ರಸ್ಟ್ ಅಡಿ ದೇವಸ್ಥಾನ ನಡೆಯುತ್ತಿದ್ದು, ಇದರಲ್ಲಿ ಸರಕಾರದ ಪಾತ್ರದ ಕುರಿತು ನ್ಯಾಯಪೀಠ ಪ್ರಶ್ನಿಸಿದೆ. ಪ್ರಕರಣದಲ್ಲಿ ಆಡಳಿತ ಮಂಡಳಿಯ ಮನವಿ ಪರಿಗಣಿಸಿದ ನ್ಯಾಯಾಲಯ ಧರ್ಮದರ್ಶಿ ರಾಮಪ್ಪ ನೇತೃತ್ವದ ಆಡಳಿತ ಮಂಡಳಿ ದೇವಸ್ಥಾನದ ಆಡಳಿತವನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಿಕೊಂಡು ಹೋಗುವಂತೆ ಮೌಖಿಕ ಆದೇಶ ನೀಡಿದೆ.