ಸುದ್ದಿ ಕಣಜ.ಕಾಂ
ಬೆಂಗಳೂರು: ರೂಪಾಂತರ ಕೊರೊನಾ ಅತ್ಯಂತ ವೇಗವಾಗಿ ಹರಡುವ ಸೋಂಕಾಗಿರುವುದರಿಂದ ಹೆಚ್ಚು ಮಂದಿಗೆ ಸೋಂಕು ತಗಲುವ ಸಾಧ್ಯತೆ ಇದೆ. ಹೀಗಾಗಿ, ಸೋಂಕಿತರ ಸಂಪರ್ಕದಲ್ಲಿದ್ದರು ಎಂಬುದನ್ನು ತ್ವರಿತವಾಗಿ ಪತ್ತೆ ಮಾಡಿ ಕೂಡಲೆ ಪರೀಕ್ಷೆಗೊಳಪಡಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ ಅವರು ಎಲ್ಲ ವಲಯ ಜಂಟಿ ಆಯುಕ್ತರಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ರೂಪಾಂತರ ಕೊರೊನಾ ಬಂದಿರುವುದು ದೃಢಪಟ್ಟಿರುವ ಹಿನ್ನೆಲೆ ಬುಧವಾರ ಪಾಲಿಕೆ ಕೇಂದ್ರ ಕಚೇರಿ ಸಭಾಂಗಣ 1ರಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
ಇದನ್ನೂ ಓದಿ | ರಾಜ್ಯದಲ್ಲಿ ಶುರುವಾಯ್ತು ರೂಪಾಂತರ ಭೀತಿ
ನಗರದಲ್ಲಿ ರೂಪಾಂತರ ಕೊರೋನಾ ಸೋಂಕು ಕಂಡುಬಂದಿದೆ. ಈ ನಿಟ್ಟಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಸೋಂಕು ಹೆಚ್ಚು ಪ್ರಮಾಣದಲ್ಲಿ ಹರಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ನಗರದಲ್ಲಿ ರೂಪಾಂತರ ಕೊರೊನಾ ಯಾವ ವಲಯದಲ್ಲಿ ಎಷ್ಟು ಪ್ರಕರಣಗಳು ಕಂಡುಬಂದಿವೆ. ಈ ಕುರಿತು ಮಾಹಿತಿ ಪಡೆದ ಅವರು, ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು ಎಂದು ನಿರ್ದೇಶನ ನೀಡಿದರು.
ಇದನ್ನೂ ಓದಿ | ಹೊಸ ವರ್ಷಕ್ಕೆ ಸರ್ಕಾರ ಗ್ರೀನ್ ಸಿಗ್ನಲ್, ಕಂಡಷನ್ ಅಪ್ಲೈ
ಆತಂಕ ಬೇಡ, ಎಚ್ಚರ ಇರಲಿ: ರೂಪಾಂತರ ಕೊರೊನಾದಿಂದ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಇದು ತ್ವರಿತವಾಗಿ ಹರಡಲಿದೆ. ಆದರೆ ಯಾವುದೇ ಅಪಾಯವಿಲ್ಲ ಎಂದು ಹೇಳಿದರು.
ಮಾಸ್ಕ್ ಧರಿಸುವುದು, ಕೈಗಳಿಗೆ ಆಗಿಂದಾಗ್ಗೆ ಸ್ಯಾನಿಟೈಸರ್ ಹಾಕುವುದು ಹಾಗೂ ಕೈಗಳನ್ನು ತೊಳೆಯುವುದು ಮಾಡಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ರಾಜೇಂದ್ರ ಚೋಳನ್, ಎಲ್ಲ ವಲಯ ಜಂಟಿ ಆಯುಕ್ತರಾದ ಪಲ್ಲವಿ, ಅಶೋಕ್, ವೀರಭದ್ರ ಸ್ವಾಮಿ, ರಾಮಕೃಷ್ಣ, ಶಿವಸ್ವಾಮಿ, ವೆಂಕಟಾಚಲಪತಿ, ನರಸಿಂಹಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.