ಸುದ್ದಿ ಕಣಜ.ಕಾಂ
ಶಿವಮೊಗ್ಗ: ಈ ವರ್ಷ ಅಂತ್ಯವಾಗುವುದರೊಳಗೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ್ ಎಂ.ಕಾರಜೋಳ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶನಿವಾರ ಸೋಗಾನೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿಯನ್ನು ಪರಿಶೀಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.
770 ಎಕರೆ ಪ್ರದೇಶದಲ್ಲಿ 384 ಕೋಟಿ ರೂ. ವೆಚ್ಚದಲ್ಲಿ 3.2 ಕಿ.ಮೀ ರನ್ವೇ, ಸುಸಜ್ಜಿತ ಟರ್ಮಿನಲ್ ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ನಿರ್ಮಾಣಗೊಳ್ಳುತ್ತಿವೆ. ಈ ವಿಮಾನ ನಿಲ್ದಾಣದಲ್ಲಿ ಲಘು ಮತ್ತು ಸಾಮಾನ್ಯ ವಿಮಾನಗಳ ಓಡಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು.
ವಿಜಯಪುರ ವಿಮಾನ ನಿಲ್ದಾಣ ಶಂಕುಸ್ಥಾಪನೆ: ಸಂಕ್ರಾಂತಿಯಂದು ವಿಜಯಪುರದಲ್ಲಿ 220 ಕೋಟಿ ರೂ. ವೆಚ್ಚದಲ್ಲಿ ವಿಮಾನ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ತಿಳಿಸಿದರು.
ಈ ವಿಮಾನ ನಿಲ್ದಾಣ ಕಾಮಗಾರಿಗೆ ಯಾವುದೇ ಆಕ್ಷೇಪಣೆಗಳು ಇಲ್ಲ. ಕೇಂದ್ರ ಏವಿಯೇಶನ್ ಮಂತ್ರಾಲಯದ ಅನುಮೋದನೆ ಕೂಡ ಸಿಕ್ಕಿದೆ. ಹೀಗಾಗಿ, ಬರುವ ದಿನಗಳಲ್ಲಿ ನಿಲ್ದಾಣಕ್ಕೆ ಪೂರಕವಾದ ಯಂತ್ರ ಅಳವಡಿಸುವ ಭರವಸೆ ಇದೆ. ಜತೆಗೆ, ಕಾಮಗಾರಿ ಪೂರ್ಣಗೊಳಿಸಿದ ನಂತರ ಉಡಾನ್ ಯೋಜನೆಯಡಿ ಸೌಲಭ್ಯ ಪಡೆಯಲು ಪ್ರಯತ್ನಿಸಲಾಗುವುದು ಎಂದರು.
ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.