ಸುದ್ದಿ ಕಣಜ.ಕಾಂ
ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಅಕ್ರಮ ಕಸಾಯಿಖಾನೆಗಳ ವಿರುದ್ಧ ಮಹಾನಗರ ಪಾಲಿಕೆ ಸಮರ ಸಾರಿದೆ. ಇಂತಹ ಕಸಾಯಿಖಾನೆಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಸೂಚನೆ ನೀಡುವುದಾಗಿ ಮಹಾನಗರ ಪಾಲಿಕೆ ಮೇಯರ್ ಸುವರ್ಣ ಶಂಕರ್ ಹೇಳಿದರು.
ಶಿವಮೊಗ್ಗ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಅಕ್ರಮ ಕಸಾಯಿಖಾನೆ ಹಾಗೂ ಗೋ ಮಾಂಸ ರಫ್ತು ಎರಡರ ಮೇಲೆಯೂ ಕಣ್ಣಿಡಲಾಗುವುದು ಎಂದು ಸಭೆಗೆ ತಿಳಿಸಿದರು.
ಬಿಜೆಪಿ, ಕಾಂಗ್ರೆಸ್ ಸದಸ್ಯರ ಮಧ್ಯೆ ಕಿತ್ತಾಟ | ಗೋವುಗಳ ಬಗ್ಗೆ ಕಾಳಜಿ ಇದ್ದರೆ ಮೊದಲು ದೇಶದಿಂದ ಗೋ ಮಾಂಸ ರಫ್ತು ನಿಲ್ಲಿಸಿ. ಬಿಜೆಪಿ ಅವಧಿಯಲ್ಲಿಯೇ ಅತಿ ಹೆಚ್ಚು ಗೋವಿನ ಮಾಂಸ ರಫ್ತಾಗಿದೆ ಎಂದು ಪಾಲಿಕೆ ಸದಸ್ಯ ರಮೇಶ್ ಹೆಗಡೆ ಆರೋಪಿಸಿದರು. ಇದಕ್ಕೆ ಕೆಂಡಾಮಂಡಲಗೊಂಡಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ, ಗೋವಿನ ಬಗ್ಗೆ ಕಾಳಜಿ ಇದ್ದುದ್ದಕ್ಕೆ ಕಾನೂನು ಜಾರಿಗೆ ತಂದಿದ್ದೇವೆ ಎಂದು ಹೇಳಿದರು.
ಗೋವುಗಳ ರಕ್ಷಣೆಗೆ 5 ಎಕರೆ ಜಾಗ | ಐದು ಎಕರೆ ಜಾಗವನ್ನು ಗೋವುಗಳ ಸಂರಕ್ಷಣೆಗಾಗಿ ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಡಳಿತ ನೀಡಿದೆ. ಅದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. 50 ಲಕ್ಷ ರೂಪಾಯಿ ಮಂಜೂರಾಗಿದ್ದು, ಅದರ ನಿರ್ವಹಣೆ ಇತ್ಯಾದಿಗಳ ಬಗ್ಗೆ ಕ್ರಮವಹಿಸಬೇಕು ಎಂದು ಚನ್ನಬಸಪ್ಪ ಹೇಳಿದರು.
ಪಾಲಿಕೆ ಉಪ ಮೇಯರ್ ಸುರೇಖಾ ಮುರುಳೀಧರ್, ಆಯುಕ್ತ ಚಿದಾನಂದ್ ವಟಾರೆ ಇತರರಿದ್ದರು.