ಸುದ್ದಿ ಕಣಜ.ಕಾಂ
ಶಿವಮೊಗ್ಗ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಹುತಾತ್ಮರಾದ ದಿನವಾದ ಶನಿವಾರ ನಗರದ ಗಾಂಧಿ ಪಾರ್ಕ್ ನಲ್ಲಿರುವ ಗಾಂಧೀಜಿ ಅವರ ಪ್ರತಿಮೆಯ ಎದುರು ಉಪವಾಸ ಸತ್ಯಾಗ್ರಹ ಮಾಡಲಾಗುತ್ತಿದೆ.
VIDEO ROPORT
ಸಂಯುಕ್ತ ಕಿಸಾನ್ ಮೋರ್ಚಾ ಹೋರಾಟ ಬೆಂಬಲಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕರ್ನಾಟಕ ಜನಶಕ್ತಿ, ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ)ಯಿಂದ ಸತ್ಯಾಗ್ರಹ ನಡೆಯುತ್ತಿದೆ.
ಕೇಂದ್ರ ಸರ್ಕಾರ ಜರಿಗೆ ತಂದಿರುವ ಕಾಯ್ದೆಗಳ ವಿರುದ್ಧ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದು, ರೈತರ ಪಾಲಿಗೆ ಮರಣ ಶಾಸನವಾಗಲಿರುವ ಅವುಗಳನ್ನು ಹಿಂಪಡೆಯುವವರೆ ಪ್ರತಿಭಟನೆ ಮುಂದುವರಿಯಲಿದೆ ಎಂದು ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ತಿಳಿಸಿದ್ದಾರೆ.
ರೈತ ಸಂಘ ಯಾವುದೇ ಕಾರಣಕ್ಕೂ ಹಿಂಸೆಯನ್ನು ಪ್ರಚೋದಿಸುವುದಿಲ್ಲ. ಅಹಿಂಸೆಯನ್ನು ಪ್ರೀತಿಸುತ್ತಿದೆ. ಸತ್ಯಕ್ಕಾಗಿ ಹೋರಾಟ ಮಾಡುತ್ತಿದೇವೆ. ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯುವವರೆಗೆ ಇದು ನಿಲ್ಲುವುದಿಲ್ಲ. ಬೇರೆಯವರ ಕುಮ್ಮಕ್ಕಿನಿಂದ ಚಳವಳಿ ನಡೆಯುತ್ತಿದೆ ಎಂದು ಆರೋಪಿಸಲಾಗುತ್ತಿದೆ. ಇದಕ್ಕೆ ಯಾರ ಕುಮ್ಮಕ್ಕು ಇಲ್ಲ. ರೈತರು ಎಲ್ಲ ಸರ್ಕಾರಗಳು ಅಧಿಕಾರದಲ್ಲಿದ್ದಾಗಲೂ ಪ್ರತಿಭಟನೆ ಮಾಡುತ್ತಾ ಬಂದಿವೆ.
– ಬಸವರಾಜಪ್ಪ, ಗೌರವಾಧ್ಯಕ್ಷರು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ
ರಾಷ್ಟ್ರದ ಎಲ್ಲ ರಾಜ್ಯಗಳಲ್ಲಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಬೃಹತ್ ಸಂಖ್ಯೆಯಲ್ಲಿ ಹೋರಾಟ ಮಾಡಲಾಗುತ್ತಿದೆ. ಆದರೆ, ಕೇಂದ್ರ ಸರ್ಕಾರ ಮಾತ್ರ ತನ್ನ ಹಠಮಾರಿತನ ಮುಂದುವರಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೆಹಲಿ ಘಟನೆಯ ಹಿಂದೆ ಷಡ್ಯಂತ್ರ | ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ಶಾಂತಿಯುತವಾಗಿ ನಡೆಯುತ್ತಿದ್ದ ಅಹಿಂಸಾತ್ಮಕ ಚಳವಳಿಗೆ ಏನು ಮಾಡಲು ಸಾಧ್ಯವಿಲ್ಲ ಎಂಬ ಕಾರಣದಿಂದಲೇ ಯಾರೋ ಷಡ್ಯಂತ್ರ ರೂಪಿಸಿ ಹಿಂಸತ್ಮಕ ಕೆಲಸ ಮಾಡಿದ್ದಾರೆ. ಕೇಂದ್ರದ ಕುಮ್ಮಕ್ಕೋ ಅಥವಾ ಪೊಲೀಸರ ಷಡ್ಯಂತ್ರವೋ ಇದು ಅರ್ಥವಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಯಲಿ | ಕೆಂಪು ಕೋಟೆಯ ಮೇಲೆ ಬಾವುಟ ಹಾರಿಸಿದ್ದು ಅಕ್ಷಮ್ಯ. ಅದನ್ನು ರೈತ ಸಂಘ ಕೂಡ ಒಪ್ಪುವುದಿಲ್ಲ. ಈ ಘಟನೆಯ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಧೀಶರಿಂದ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.