ಸುದ್ದಿ ಕಣಜ.ಕಾಂ
ಶಿವಮೊಗ್ಗ: ರಾಜ್ಯದ ಹಲವೆಡೆ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗಳನ್ನು ತಕ್ಷಣ ನಿಲ್ಲಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಶಿವಮೊಗ್ಗದ ಹೆಲಿಪ್ಯಾಡ್ ನಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯಗಳಿಗೆ ಜಲ್ಲಿ ಬೇಕು. ಕಾನೂನು ಚೌಕಟ್ಟಿನಲ್ಲಿ ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಅಧಿಕಾರಿಗಳೇ ಹೊಣೆಗಾರರು | ಸಾಂಪ್ರದಾಯಿಕವಾಗಿ ಕಲ್ಲುಗಳನ್ನು ಒಡೆದು ಜಲ್ಲಿ ಮಾಡುವವರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅಭಿವೃದ್ಧಿ ಕಾಮಗಾರಿಗಳಿಗೆ ಜಲ್ಲಿ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಅಕ್ರಮ ಗಣಿಗಾರಿಕೆ ನಡೆದರೆ ಸಂಬಂಧಪಟ್ಟ ಅಧಿಕಾರಿಗಳೇ ಜವಾಬ್ದಾರರು ಎಂದು ಹೇಳಿದರು.
ಕೆ.ಆರ್.ಎಸ್.ಗೂ ಧಕ್ಕೆ | ರಾಜ್ಯದ ಎಲ್ಲೆಡೆ ಅಕ್ರಮ ಗಣಿಗಾರಿಕೆ ಸಮಸ್ಯೆ ಇದೆ. ಮಂಡ್ಯದ ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆಯಿಂದ ಕೆ.ಆರ್.ಎಸ್ ಜಲಾಶಯಕ್ಕೆ ಧಕ್ಕೆ ಬರುವ ಅಪಾಯವಿದೆ. ಈಗಾಗಲೇ ಸಂಪೂರ್ಣವಾಗಿ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ ಎಂದರು.