ಸುದ್ದಿ ಕಣಜ.ಕಾಂ
ಬೆಂಗಳೂರು: 2023ರ ಹೊತ್ತಿಗೆ ಶಿಕ್ಷಕರು ಸೇರಿ ಎಲ್ಲ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರಿ ನೌಕರರಷ್ಟೇ ವೇತನ ದೊರಕಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಹೇಳಿದ್ದಾರೆ.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲೆ ಶಿಕ್ಷಕರ ಸಂಘವು ಆಯೋಜಿಸಿದ್ದ ಪ್ರಥಮ ರಾಜ್ಯ ಕಾರ್ಯಕಾರಿ ಸಭೆ, 2021ರ ಶಾಲೆ ಪಂಚಾಂಗ ಬಿಡುಗಡೆ ಮತ್ತು ಅಭಿನಂದನೆ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ್ದಾರೆ.
ಶಿಕ್ಷಕರ ಸಂಘ ಹಾಗೂ ಸರ್ಕಾರಿ ನೌಕರರ ಸಂಘದ ಮಧ್ಯೆ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ಒಂದೇ ಆಶಯದೊಂದಿಗೆ ಕಾರ್ಯಪ್ರವೃತ್ತರಾಗಿದ್ದೇವೆ. ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ.
– ಸಿ.ಎಸ್.ಷಡಕ್ಷರಿ, ಅಧ್ಯಕ್ಷರು, ರಾಜ್ಯ ಸರ್ಕಾರಿ ನೌಕರರ ಸಂಘ
ಈ ವಿಚಾರದ ಬಗ್ಗೆ ಸರ್ಕಾರದೊಂದಿಗೆ ಚರ್ಚಿಸಲಾಗುತ್ತಿದೆ. ಮುಂದಿನ ವೇತನ ಆಯೋಗ ಜಾರಿ ವೇಳೆಗೆ ರಾಜ್ಯ ಸರ್ಕಾರಿ ನೌಕರರಿಗೆ ನ್ಯಾಯ ಸಿಗಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ । ಲಕ್ಷಾಂತರ ಜನರಿಗೆ ಪಿಡುಗಾಗಿ ಕಾಡುತ್ತಿರುವ ಹಕ್ಕಿ ಜ್ವರ ಕಂಪ್ಲೀಟ್ ರಿಪೋರ್ಟ್
ಅರ್ಜಿ ಸಲ್ಲಿಸಿದ ವಾರದೊಳಗೆ ಸಾಲ: ಕರ್ನಾಟಕ ಸರ್ಕಾರಿ ವಿಮೆ ಇಲಾಖೆ (ಕೆಜಿಐಡಿ) ಡಿಜಟಲೀಕರಣ ಕಾರ್ಯ ಇನ್ನೇನು ಪೂರ್ಣಗೊಳ್ಳುವ ಹಂತದಲ್ಲಿದೆ. ಆದ್ದರಿಂದ, ಬರುವ ದಿನಗಳಲ್ಲಿ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ ನೌಕರರಿಗೆ ಒಂದು ವಾರದೊಳಗೆ ಸಾಲ ಸೌಲಭ್ಯ ಸಿಗಲಿದೆ. ನೇರವಾಗಿ ಖಾತೆಗೆ ಹಣ ಜಮೆ ಆಗಲಿದೆ ಎಂದು ಹೇಳಿದ್ದಾರೆ.