ಶಿವಮೊಗ್ಗ ಜಿಲ್ಲೆಯ 19 ಸಾವಿರ ಕುಟುಂಬಗಳಿಗೆ ಹಕ್ಕು ಪತ್ರ, ಪ್ರಗತಿಯಲ್ಲಿದೆ ನಂಬರ್ ಹಾಕುವ ಕಾರ್ಯ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯಲ್ಲಿನ 19000 ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗುತ್ತಿದ್ದು, ಆ ಎಲ್ಲ ಕುಟುಂಬಗಳ ಪ್ರತಿನಿಧಿಗಳು ಮನೆ ಕಟ್ಟಿಕೊಳ್ಳಲು ಬ್ಯಾಂಕ್ ಸಾಲ ಸೌಲಭ್ಯಕ್ಕಾಗಿ ಶಿಫಾರಸ್ಸು ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದ ಕೊಳಚೆ ಪ್ರದೇಶದ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸುವ ಸಮೀಕ್ಷೆ ಕೈಗೊಳ್ಳುವ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಇದನ್ನೂ ಓದಿ | ಕೊಳೆಗೇರಿ ನಿವಾಸಿಗಳಿಗೆ ಸಿಹಿ ಸುದ್ದಿ

ನಗರದಲ್ಲಿ ಘೋಷಿತ ಸರ್ಕಾರಿ ಹಾಗೂ ಸ್ಥಳೀಯ ಸಂಸ್ಥೆ ಮಾಲೀಕತ್ವದಲ್ಲಿರುವ 35 ಕೊಳಚೆ ಪ್ರದೇಶಗಳಲ್ಲಿ ವಾಸವಿರುವವರಿಗೆ ಸ್ವ್ವತ್ತಿನ ಹಕ್ಕುಪತ್ರ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಅರ್ಹ ಫಲಾನುಭವಿಗಳಿಗೆ ಸರ್ಕಾರದ ಮಾರ್ಗಸೂಚಿ ಅನ್ವಯ ಹಕ್ಕುಪತ್ರ ವಿತರಿಸಲಾಗುವುದು ಎಂದು ಸಚಿವರು ಹೇಳಿದರು.
ಸಮೀಕ್ಷೆ ನಂತರ ಹಕ್ಕುಪತ್ರ ವಿತರಿಸಲಾಗುವ ಮನೆಯ ಚಕ್ಕುಬಂದಿ ಮತ್ತಿತರ ವಿವರಗಳನ್ನು ಹಕ್ಕುಪತ್ರದಲ್ಲಿ ನಮೂದಿಸಲಾಗುವುದು ಎಂದರು.
ಎಷ್ಟು ಶುಲ್ಕ ಪಾವತಿಸಬೇಕು: ಪ್ರಸ್ತುತ ಮನೆಗಳಿಗೆ ನಂಬರ್ ಹಾಕುವ ಕಾರ್ಯ ಪ್ರಗತಿಯಲ್ಲಿದೆ. ಹಕ್ಕುಪತ್ರಗಳನ್ನು ಪಡೆದುಕೊಂಡ ಫಲಾನುಭವಿಯು ಪರಿಶಿಷ್ಟ ಜಾತಿ, ಪಂಗಡಗಳಿಗೆ ಸೇರಿದ್ದಲ್ಲಿ 5000 ರೂಪಾಯಿ ಹಾಗೂ ಇತರೆ ಸಮುದಾಯವರಾಗಿದ್ದಲ್ಲಿ 10000 ರೂಪಾಯಿಗಳನ್ನು ನೋಂದಣಿ ಶುಲ್ಕ ಪಾವತಿಸಬೇಕಾಗುವುದು. ಫಲಾನುಭವಿಗಳು ಮನೆಯನ್ನು ತಮ್ಮಿಷ್ಟದಂತೆ ನಿರ್ಮಿಸಿಕೊಳ್ಳಲು ಬ್ಯಾಂಕ್ ಗಳಿಂದ ಸಾಲ ಸೌಲಭ್ಯ ಪಡೆದುಕೊಳ್ಳಲು ಸಹಕಾರಿಯಾಗಲಿದೆ ಎಂದ ತಿಳಿಸಿದರು.

ks eshwarappaಈ ಮಹತ್ವದ ಸಮೀಕ್ಷೆ ಕಾರ್ಯದಲ್ಲಿ ಕೊಳಚೆ ಅಭಿವೃದ್ಧಿ ಮಂಡಳಿ, ಮಹಾನಗರ ಪಾಲಿಕೆ, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಅನುಭವಿ ಸಿಬ್ಬಂದಿ ನೆರವು ಪಡೆಯಲಾಗುವುದು. ಈ ಕಾರ್ಯಕ್ಕೆ ತೊಡಗಿಸಿಕೊಳ್ಳುವ ನೌಕರರು ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸುವಂತೆ ಹಾಗೂ ನಡೆಸುವ ಸಮೀಕ್ಷೆ ಕಾರ್ಯ ಸಮರ್ಪಕವಾಗಿ ಇರುವಂತೆ ನೋಡಿಕೊಳ್ಳಬೇಕು. ಸಮೀಕ್ಷೆ ಸಂದರ್ಭದಲ್ಲಿ ಇತ್ಯರ್ಥಪಡಿಸಲಾಗದ ಸಮಸ್ಯೆಗಳಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಬೇಕು.
– ಕೆ.ಎಸ್.ಈಶ್ವರಪ್ಪ, ಜಿಲ್ಲಾ ಉಸ್ತುವಾರಿ ಸಚಿವ

5700 ಕುಟುಂಬಗಳಿಗೆ ನೇರ ಪ್ರಯೋಜನ: ಜಿಲ್ಲೆಯಲ್ಲಿ 5700 ಕುಟುಂಬಗಳ 15000 ಸದಸ್ಯರು ಈ ಯೋಜನೆಯ ಪೂರ್ಣ ಲಾಭ ಪಡೆದುಕೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು.

ಇದನ್ನೂ ಓದಿ | ಹಾಡುಹಕ್ಕಿಗೆ ಬಿರುದು ಸನ್ಮಾನ

ಸಮೀಕ್ಷೆಗೆ ನಿಯೋಜಿತರಾದ ಅಧಿಕಾರಿಗಳು ಪ್ರಾಮಾಣಿಕವಾಗಿ, ಅಲ್ಲಿನ ನಿವಾಸಿಗಳಿಗೆ ಮುಂದಿನ ದಿನಗಳಲ್ಲಿ ರಸ್ತೆ, ಚರಂಡಿ, ನೀರು, ಬೆಳಕು, ಗಾಳಿ ಸೇರಿದಂತೆ ಯಾವುದೇ ಸಮಸ್ಯೆಗಳು ಉಂಟಾಗದಂತೆ ಸಮೀಕ್ಷೆ ನಡೆಸಿ, ಫಲಾನುಭವಿಗಳಿಗೆ ಹಕ್ಕುಪತ್ರ ಕೊಡಿಸುವಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಪ್ರಸ್ತುತ ಸಮೀಕ್ಷೆಗೆ ಒಳಪಡಿಸುತ್ತಿರುವ ಯಾವುದೇ ಸ್ಥಳ ಸಮೀಕ್ಷೆಗೆ ಪೂರಕವಾಗಿರುವುದಿಲ್ಲ ಎಂಬ ಅರಿವು ಹೊಂದಿದ್ದು, ಮುಂದಿನ ದಿನಗಳಲ್ಲಿ ಇಲ್ಲಿನ ನಿವಾಸಿಗಳಿಗೆ ಎದುರಾಗಬಹುದಾದ ಹಾಗೂ ಸಮಸ್ಯೆ, ಸವಾಲುಗಳನ್ನು ಅರಿತು ಕೈಗೊಂಡ ಕಾರ್ಯ ಪೂರ್ಣಗೊಳಿಸುವಂತೆ ಸೂಚಿಸಿದರು.
ತರಬೇತಿ ಕಾರ್ಯಾಗಾರದಲ್ಲಿ ಮಹಾನಗರ ಪಾಲಿಕೆ ಮೇಯರ್ ಸುವರ್ಣ ಶಂಕರ್, ಆಯುಕ್ತ ಚಿದಾನಂದ್ ಎಸ್.ವಟಾರೆ, ಆಶ್ರಯ ಸಮಿತಿ ಅಧ್ಯಕ್ಷ ಶಶಿಧರ್, ಕೊಳಗೇರಿ ಅಭಿವೃದ್ಧಿ ಮಂಡಳಿಯ ಇಇ ಮಂಜುನಾಥಗೌಡ ಮುಂತಾದವರು ಉಪಸ್ಥಿತರಿದ್ದರು.

error: Content is protected !!