ಸುದ್ದಿ ಕಣಜ.ಕಾಂ
ಶಿವಮೊಗ್ಗ: ಶಿಕಾರಿಪುರ-ಶಿವಮೊಗ್ಗ ರೈಲ್ವೆ ಮಾರ್ಗದ ನಿರ್ಮಾಣಕ್ಕೆ ಅಗತ್ಯವಾಗಿರುವ ಭೂಸ್ವಾಧೀನ ಪ್ರಕ್ರಿಯೆ ಮುಂದಿನ ಎರಡು ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದರು.
ಇದನ್ನೂ ಓದಿ । ಮುಕ್ತ ಕಂಠದಿಂದ ಯಡಿಯೂರಪ್ಪ ಅವರನ್ನು ಹೊಗಳಿದ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ವರ್
ಶಿವಮೊಗ್ಗದ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ಏರ್ಪಡಿಸಿದ್ದ ಎಲ್.ಸಿ.ಗೇಟ್ ನಂ.34, 49 ಮತ್ತು 52ರ ಬದಲಾಗಿ ನಿರ್ಮಾಣಗೊಳ್ಳುತ್ತಿರುವ ಮೂರು ರೈಲ್ವೆ ಮೇಲ್ಸೇತುವೆಗಳ ಅಡಿಗಲ್ಲು ಸಮಾರಂಭದಲ್ಲಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಶಿವಮೊಗ್ಗ-ರಾಣೆಬೆನ್ನೂರು ನೂತನ ರೈಲು ಮಾರ್ಗವು ಸ್ವಾತಂತ್ರ್ಯ ನಂತರದ ದಿನಗಳಲ್ಲಿ ಶಿವಮೊಗ್ಗ ಜಿಲ್ಲೆಗೆ ಮಂಜೂರಾಗಿರುವ ಮೊದಲನೆಯ ರೈಲು ಮಾರ್ಗವಾಗಿದೆ. ಕೇಂದ್ರವು ಈ ಯೋಜನೆಗೆ 2021-22ರ ಮುಂಗಡ ಪತ್ರದಲ್ಲಿ 100 ಕೋಟಿ ರೂ.ಗಳ ಅನುದಾನವನ್ನು ಮೀಸಲಿಟ್ಟಿರುವುದು ಶ್ಲಾಘನೀಯ. ಉತ್ತಮ ರೈಲ್ವೆ ಸಂಪರ್ಕ ಹಾಗೂ ವಿಮಾನ ನಿಲ್ದಾಣದಿಂದ ಶಿವಮೊಗ್ಗ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಆರ್ಥಿಕ ಪ್ರಗತಿಯ ಚಿತ್ರಣವೇ ಬದಲಾಗಲಿದೆ ಎಂದರು.
ಶೇ.50ರಷ್ಟು ರಾಜ್ಯದ ಪಾಲು | ಗಿಣಿಗೆರಾ-ರಾಯಚೂರು, ಗದಗ-ವಾಡಿ, ತುಮಕೂರು-ಚಿತ್ರದುರ್ಗ-ದಾವಣಗೆರೆ, ತುಮಕೂರು-ರಾಯದುರ್ಗ, ಚಿಕ್ಕಮಗಳೂರು-ಬೇಲೂರು, ಧಾರವಾಡ-ಬೆಳಗಾವಿ, ಶಿವಮೊಗ್ಗ-ರಾಣೆಬೆನ್ನೂರು ನೂತನ ರೈಲು ಮಾರ್ಗಗಳಿಗೆ ರಾಜ್ಯ ಸರ್ಕಾರವು ರೈಲ್ವೆ ಇಲಾಖೆಯೊಂದಿಗೆ ಶೇ.50 ರಷ್ಟು ವೆಚ್ಚವನ್ನು ಹಂಚಿಕೆ ಮಾಡಿಕೊಂಡಿದೆ. ಆರ್ಥಿಕ ವರ್ಷದಲ್ಲಿ 148 ಕೋಟಿ ರೂ.ಗಳ ಅನುದಾನವನ್ನು ಈ ಕಾಮಗಾರಿಗಾಗಿ ರಾಜ್ಯದಿಂದ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು. ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.