ಸುದ್ದಿ ಕಣಜ.ಕಾಂ
ಶಿವಮೊಗ್ಗ: ನಗರದ ಜೆಡಿಎಸ್ ಕಚೇರಿಯಲ್ಲಿ ಆಯೋಜಿಸಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಹಾಗೂ ಯುವಕರನ್ನು ಒಗ್ಗೂಡಿಸಲು ಸ್ಟಾರ್ ಪ್ರಚಾರಕರಾದ ನಿಖಿಲ್ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಅವರನ್ನು ಕರೆಸುವಂತೆ ಆಗ್ರಹಿಸಲಾಯಿತು.
ಕಾರ್ಯಕರ್ತರ ಸಭೆಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ ಅವರು ಗೈರು ಹಾಜರಾಗಿದ್ದರಿಂದ ಕಾರ್ಯಕರ್ತರು ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧ್ಯಕ್ಷರನ್ನು ಬದಲಿಸುವ ಅಭಿಪ್ರಾಯ ಕೂಡ ವ್ಯಕ್ತವಾಯಿತು. ಪಕ್ಷವನ್ನು ಸಂಘಟಿಸುವವರಿಗೆ ಜಿಲ್ಲಾಧ್ಯಕ್ಷರ ಜವಾಬ್ದಾರಿ ನೀಡಬೇಕು. ಜಿಲ್ಲೆಯಲ್ಲಿ ಕಾರ್ಯಕರ್ತರನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಆರೋಪಿಸಲಾಯಿತು.
ಪಕ್ಷದಲ್ಲಿ ಪ್ರಸ್ತುತ ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿರುವ ಎಂ.ಶ್ರೀಕಾಂತ್ ಅವರಿಗೆ ಅಧ್ಯಕ್ಷರಾಗಿ ನೇಮಕ ಮಾಡಬೇಕು ಎಂದು ಆಗ್ರಹಿಸಲಾಯಿತು.
ಸಭೆಯಲ್ಲಿ ಪಕ್ಷದ ಮುಖಂಡರಾದ ಸುಂದರೇಶ್, ಕಾಂತರಾಜು, ಜಿಪಂ ಸದಸ್ಯ ಮಣಿಶೇಖರ್, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್, ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ ಉಪಸ್ಥಿತರಿದ್ದರು.