ಸುದ್ದಿ ಕಣಜ.ಕಾಂ
ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮಂಗಳವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಭೇಟಿ ಮಾಡಿ ಸರ್ಕಾರಿ ನೌಕರರ ಬೇಡಿಕೆಗಳನ್ನು ಸಲ್ಲಿಸಿದ್ದಾರೆ.
ಇದನ್ನೂ ಓದಿ । ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಮಂಜೂರು ಮಾಡಲು ಸಿಎಂಗೆ ಸಿ.ಎಸ್.ಷಡಾಕ್ಷರಿ ಮನವಿ
ಆಯವ್ಯಯ ಮಂಡನೆ ಪೂರ್ವದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲು ಸಂಪ್ರದಾಯದಂತೆ, ನೌಕರರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ನಿಯೋಗ ಸಿಎಂಗೆ ಭೇಟಿ ಮಾಡಿದೆ. ಸಭೆಯಲ್ಲಿ ಸಲ್ಲಿಸಿದ ಬೇಡಿಕೆಗಳ ಪಟ್ಟಿ ಇಲ್ಲಿದೆ.
ಬೇಡಿಕೆಗಳೇನು?
- ಮೈಸೂರು ಆಡಳಿತ ತರಬೇತಿ ಕೇಂದ್ರದ ಮಾದರಿಯಲ್ಲಿ ರಾಜ್ಯದ ವಿಭಾಗಗಳಲ್ಲಿ ವಸತಿ ಸಹಿತ ಸರ್ಕಾರಿ ನೌಕರರ ತರಬೇತಿ ಕೇಂದ್ರಗಳನ್ನು ಸ್ಥಾಪಿಸಬೇಕು.
- ಜಿಲ್ಲಾ ಕೇಂದ್ರಗಳಲ್ಲಿ ಸರ್ಕಾರಿ ವಸತಿ ಗೃಹ ನಿರ್ಮಾಣ, ನಿರ್ವಹಣೆಗೆ ಅನುದಾನ ಮಂಜೂರು ಮಾಡಬೇಕು.
- ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಸರ್ಕಾರಿ ನೌಕರರ ಭವನ ನಿರ್ಮಾಣ ಹಾಗೂ ನಿರ್ವಹಣೆಗೆ ಅನುದಾನ ಮಂಜೂರು ಮಾಡಬೇಕು.
- ರಾಜ್ಯ ಸರ್ಕಾರಿ ನೌಕರರ ಕ್ರೀಡಾ ಮತ್ತು ಸಾಂಸ್ಕøತಿಕ ಹಾಗೂ ಇನ್ನಿತರ ಸಂಘದ ಕಾರ್ಯಕ್ರಮ, ನಿರ್ವಹಣೆ ಉದ್ದೇಶಕ್ಕೆ ಸಹಾಯಾನುದಾನ ಮಂಜೂರು ಮಾಡಬೇಕು.
- ಸರ್ಕಾರಿ ನೌಕರರಿಗೆ ಕುಟುಂಬದ ಸದಸ್ಯರಿಗೆ ನಗದು ರಹಿತ ಚಿಕಿತ್ಸಾ ಯೋಜನೆ ಹಾಗೂ ನೌಕರರಿಗೆ ಸುಗಮ ಸೇವೆಗಾಗಿ ಕೆ.ಜಿ.ಐ.ಡಿ. ಕಚೇರಿಗಳ ಗಣಕೀಕರಣ ಕಾರ್ಯವನ್ನು ಏಪ್ರಿಲ್ 2021ರಿಂದ ಜಾರಿಗೆ ತರಬೇಕು.
- ನೌಕರರ ಎಲ್ಲ ಸೇವೆಗಳನ್ನು ಆನ್ ಲೈನ್ ಮೂಲಕ ಜಾರಿಗೊಳಿಸಬೇಕು.
- ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಿ ಹಾಲಿ ನೌಕರರ ಮೇಲಿನ ಕಾರ್ಯಭಾರ ಒತ್ತಡವನ್ನು ತಗ್ಗಿಸಬೇಕು.
- ಶಿಕ್ಷಣ ಇಲಾಖೆಯಲ್ಲಿನ ನೌಕರರ ವೇತನ ತಾರತಮ್ಯವನ್ನು ಸರಿಪಡಿಸಬೇಕು. ಪ್ರಾಥಮಿಕ ಶಾಲಾ ಶಿಕ್ಷಕರು, ಪ್ರೌಢ ಶಾಲಾ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ 15, 20, 25 ಮತ್ತು 30 ವರ್ಷಗಳ ವೇತನ ಬಡ್ತಿಯಲ್ಲಿ ಉಂಟಾಗಿರುವ ತಾರತಮ್ಯವನ್ನು ಸರಿಪಡಿಸಬೇಕು.
- ಕೇಂದ್ರ ಸರ್ಕಾರಿ ನೌಕರರ ಮಾದರಿಯಲ್ಲಿ ರಾಜ್ಯದ ನೌಕರರಿಗೂ ವೇತನ ಪರಿಷ್ಕರಣೆ ಮಾಡಬೇಕು.
- ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು.
- ಮಾಸಿಕ ವೇತನ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಸಹಾಯಕರಿಗೆ 21,000 ರೂಪಾಯಿ ಕನಿಷ್ಟ ವೇತನ ನಿಗದಿಪಡಿಸಬೇಕು.
- ಕರ್ನಾಟಕ ದಿನಗೂಲಿ ಕ್ಷೇಮಾಭಿವೃದ್ಧಿ ಅಧಿನಿಯಮ-2012ರಲ್ಲಿ ಅಧಿಸೂಚಿಸಲ್ಪಟ್ಟ ಕ್ಷೇಮಾಭಿವೃದ್ಧಿ ದಿನಗೂಲಿ ನೌಕರರಿಗೆ ಸರ್ಕಾರದ ಆದೇಶದಂತೆ ಪೂರ್ಣಪ್ರಮಾಣದಲ್ಲಿ ಮನೆ ಬಾಡಿಗೆ ಭತ್ಯೆ, ವಾರ್ಷಿಕ ವೇತನ ಬಡ್ತಿ ಹಾಗೂ ನಗದು ರಹಿತ ಆರೋಗ್ಯ ಸೌಲಭ್ಯವನ್ನು ನೀಡಬೇಕು.
- ಬಿ.ಬಿ.ಎಂ.ಪಿ. ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸರ್ಕಾರಿ ನೌಕರರಿಗೆ ನೀಡುತ್ತಿರುವ ಮನೆ ಬಾಡಿಗೆ ಭತ್ಯೆ ದರ ಶೇ.24ರಷ್ಟನ್ನು ಬೆಂಗಳೂರು ನಗರ ಜಿಲ್ಲೆಗೂ ವಿಸ್ತರಿಸಬೇಕು.
ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್, ಸರ್ಕಾರದ ಹಣಕಾಸು ವಿಭಾಗದ ಪ್ರಧಾನ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಹೇಮಲತಾ, ಶಾಲಿನಿ ರಜನೀಶ್, ಸಂಘದ ಬೆಂಗಳೂರು ವಿಭಾಗದ ವಿಭಾಗೀಯ ಉಪಾಧ್ಯಕ್ಷ ಆರ್.ಮೋಹನ್ ಕುಮಾರ್ ಸೇರಿದಂತೆ ಅಧಿಕಾರಿಗಳು, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.