ಸುದ್ದಿ ಕಣಜ.ಕಾಂ
ಶಿವಮೊಗ್ಗ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ದಿನ ಬಳಕೆ ವಸ್ತುಗಳ ಬೆಲೆಯಲ್ಲಿ ಏರಿಕೆಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ನಗರದ ರೈಲ್ವೆ ನಿಲ್ದಾಣದ ಎದುರು ಪ್ರತಿಭಟನೆಗಿಳಿದ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಬ್ಯಾರಿಕೆಡ್ ಹಾಕಿ ತಡೆದರು. ಇದರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಬ್ಯಾರಿಕೆಡ್ ನೂಕಿ ಮುನ್ನಗ್ಗಲು ಯತ್ನಿಸಿದರು. ನಂತರ, ರೈಲ್ವೆ ನಿಲ್ದಾಣ ಆವರಣದಲ್ಲಿಯೇ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಕೂಡಲೇ ಬೆಲೆ ಏರಿಕೆ ನಿಯಂತ್ರಿಸಬೇಕು. ಇದರಿಂದ ಜನಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ಬಡವರು ನೆಮ್ಮದಿಯ ಜೀವನ ಸಾಗಿಸಲು ಬೇಕಾದ ವಾತಾವರಣ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಗಿರೀಶ್, ಪ್ರಮುಖರಾದ ಎಚ್.ಸಿ.ಯೋಗೇಶ್, ರೇಖಾ ರಂಗನಾಥ್, ಯಮುನಾ ರಂಗೇಗೌಡ, ರಮೇಶ್ ಹೆಗ್ಡೆ, ಚಂದ್ರಭೂಪಾಲ್, ಸುವರ್ಣ ನಾಗರಾಜ್, ವಿಜಯಲಕ್ಷ್ಮಿ ಪಾಟೀಲ್, ಕೆ.ರಂಗನಾಥ್, ಶ್ರೀನಿವಾಸ್ ಕರಿಯಣ್ಣ, ಎಸ್.ಪಿ.ಶೇಷಾದ್ರಿ, ಪ್ರವೀಣ್ ಕುಮಾರ್, ಚಂದ್ರಕಲಾ, ವಿಜಯ್ ಕುಮಾರ್, ಕಾಶಿ ವಿಶ್ವನಾಥ್ ಭಾಗವಹಿಸಿದ್ದರು.