ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೇಂದ್ರ ಸರ್ಕಾರ ತುಟ್ಟಿಭತ್ಯೆ ಬಿಡುಗಡೆಗೊಳಿಸಿದ ದಿನಾಂಕದಿಂದಲೇ ಪೂರ್ವಾನ್ವಯವಾಗಿ ರಾಜ್ಯ ಸರ್ಕಾರಿ ನೌಕರರಿಗೂ ತುಟ್ಟಿಭತ್ಯೆ ಬಿಡುಗಡೆಗೊಳಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮಾಡಿದ್ದಾರೆ.
ರಾಜ್ಯ ಸರ್ಕಾರಿ ನೌಕರರು ಈ ಹಿಂದೆ ಉದ್ಭವಿಸಿದ ಹಣದುಬ್ಬರ, ನಿತ್ಯ ಬಳಕೆ ಪದಾರ್ಥಗಳ ಬೆಲೆ ಹೆಚ್ಚಳದಿಂದಾಗಿ ಎದುರಿಸುತ್ತಿರುವ ಆರ್ಥಿಕ ಸಮಸ್ಯೆಯನ್ನು ಸಹಾನುಭೂತಿಯಿಂದ ಪರಿಗಣಿಸಿ, ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ತಡೆ ಹಿಡಿಯಲಾಗಿರುವ ತುಟ್ಟಿಭತ್ಯೆ ಕಂತುಗಳನ್ನು ಮಂಜೂರು ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಕೋರಿದ್ದಾರೆ.
ಅವರು ಮಂಗಳವಾರ ಆಯವ್ಯಯ ಮಂಡನೆ ಪೂರ್ವದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸುವ ಸಂಪ್ರದಾಯದಂತೆ ಮುಖ್ಯಮಂತ್ರಿಗಳಿಗೆ ನೌಕರರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ನಿಯೋಗವನ್ನು ಚರ್ಚೆಗೆ ಆಹ್ವಾನಿಸಿದ ಸಭೆಯಲ್ಲಿ ವಿಷಯವನ್ನು ಪ್ರಸ್ತಾಪಿಸಿ ಮಾತನಾಡಿದರು.
ಇದನ್ನೂ ಓದಿ । ಶಿವಮೊಗ್ಗದ ಹಳ್ಳಿಯೊಂದನ್ನು ದತ್ತು ಪಡೆದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್
ಕೇಂದ್ರವು ತನ್ನ ನೌಕರರಿಗೆ ಪ್ರತಿ ವರ್ಷ ಜನವರಿ ಮತ್ತು ಜುಲೈ ಮಾಹೆಗಳಿಂದ ಪೂರ್ವಾನ್ವಯವಾಗಿ ತುಟ್ಟಿಭತ್ಯೆಯನ್ನು ಬಿಡುಗಡೆಗೊಳಿಸಿದ ಮಾದರಿಯಲ್ಲೆ ರಾಜ್ಯ ಸರ್ಕಾರ ಸಹ ತನ್ನ ನೌಕರರಿಗೆ ತುಟ್ಟಿ ಭತ್ಯೆ ಬಿಡುಗಡೆಗೊಳಿಸುವ ಸಂಪ್ರದಾಯವನ್ನು ಹೊಂದಿದೆ.
ವಿಶ್ವದಾದ್ಯಂತ ತಲೆದೋರಿದ ಕೋವಿಡ್-19 ಮಾರಕ ರೋಗವು ನಮ್ಮ ರಾಷ್ಟ್ರ ಹಾಗೂ ರಾಜ್ಯಕ್ಕೂ ವ್ಯಾಪಿಸಿದ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶ್ರೀಸಾಮಾನ್ಯರು ಹಿತದೃಷ್ಟಿಯಿಂದ ರಾಷ್ಟ್ರ ಹಾಗೂ ರಾಜ್ಯದಲ್ಲಿ ಲಾಕ್ಡೌನ್ ಜಾರಿಗೊಳಿಸಿದ ಪರಿಣಾಮದಿಂದ ಉಂಟಾದ ಆರ್ಥಿಕ ಬಿಕ್ಕಟ್ಟು ಸೃಷ್ಟಿಯಾದ ಕಾರಣ ಕೇಂದ್ರ ಸರ್ಕಾರವು ಆರ್ಥಿಕ ಪರಿಸ್ಥಿತಿಯಲ್ಲಿ ಸಮತೋಲನ ಕಾಯ್ದುಕೊಳ್ಳುವ ಸಲುವಾಗಿ ತನ್ನ ನೌಕರರ ಎರಡು ಕಂತುಗಳ ತುಟ್ಟಿಭತ್ಯೆಯನ್ನು ಈಗಾಗಲೇ ತಡೆ ಹಿಡಿದಿರುತ್ತದೆ.
ಇದನ್ನೂ ಓದಿ । ಶಿವಮೊಗ್ಗದಲ್ಲಿ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಉಪ ಕಚೇರಿ ಆರಂಭಕ್ಕೆ ಒತ್ತಾಯ
ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರ ಸಹ ತನ್ನ ನೌಕರರ ತುಟ್ಟಿಭತ್ಯೆಯನ್ನು ತಡೆಹಿಡಿದು, ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ನೌಕರರ ಸಹಕಾರವನ್ನು ಕೋರಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರು ರಾಷ್ಟ್ರ ಹಾಗೂ ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಗೂ ಶ್ರೀಸಾಮಾನ್ಯರ ಹಿತದೃಷ್ಟಿಯಿಂದ ತುಟ್ಟಿಭತ್ಯೆ ಕಂತುಗಳನ್ನು ಬಿಟ್ಟುಕೊಡುವ ಮೂಲಕ ಸರ್ಕಾರಗಳೊಂದಿಗೆ ಕೈಜೋಡಿಸಿದ್ದರ ಜೊತೆಗೆ ಕೋವಿಡ್ ಸಾಂಕ್ರಾಮಿಕ ರೋಗ ನಿಯಂತ್ರಣ ಕಾರ್ಯದಲ್ಲಿ ಹಗಲಿರುಳು ಶ್ರಮಿಸಿರುವುದನ್ನು ಮನಗಾಣುವಂತೆ ಅವರು ಮುಖ್ಯಮಂತ್ರಿಗಳನ್ನು ವಿನಂತಿಸಿದರು.
ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್, ಸರ್ಕಾರದ ಹಣಕಾಸು ವಿಭಾಗದ ಪ್ರಧಾನ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಹೇಮಲತಾ, ಶಾಲಿನಿ ರಜನೀಶ್, ಸಂಘದ ಬೆಂಗಳೂರು ವಿಭಾಗದ ವಿಭಾಗೀಯ ಉಪಾಧ್ಯಕ್ಷ ಆರ್.ಮೋಹನ್ ಕುಮಾರ್ ಸೇರಿದಂತೆ ಅಧಿಕಾರಿಗಳು, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.