ಕೊರೊನಾ ವೇಳೆ ಶಿವಮೊಗ್ಗದಲ್ಲಿ ಕೌಟುಂಬಿಕ ಕಲಹ ಏರಿಕೆ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೊರೊನಾದಿಂದಾಗಿ ಮಾರ್ಚ್ 23ರ ನಂತರ ದೇಶದಲ್ಲಿ ಸರ್ಕಾರ ಘೋಷಿಸಿದ ಲಾಕ್ ಡೌನ್ ಅವಧಿಯಲ್ಲಿ ಜಿಲ್ಲೆಯ ಸಾಂತ್ವನ ಕೇಂದ್ರಗಳಲ್ಲಿ ದಾಖಲಾದ ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ಅತ್ಯಂತ ಹೆಚ್ಚಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅನುಷ್ಠಾನಗೊಳ್ಳುತ್ತಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಅವಧಿಯಲ್ಲಿ ಕೌಟುಂಬಿಕ ವ್ಯವಸ್ಥೆ ಸಾಮರಸ್ಯದಿಂದ ಕೂಡಿರಬೇಕಾಗಿತ್ತು. ಬದಲಾಗಿ ಒಟ್ಟು ಕುಟುಂಬದ ವಾತಾವರಣ ಕಲುಷಿತವಾಗುತ್ತಿರುವುದು ಬೇಸರವೆನಿಸಿದೆ ಎಂದರು.

ಕೊರೊನಾ ಸಂದರ್ಭದಲ್ಲಿ ವಿಧಿಸಲಾದ ಲಾಕ್ ಡೌನ್ ವೇಳೆ ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗಿವೆ. ದಾಖಲಾದ ದೂರುಗಳಲ್ಲಿ ಆರ್ಥಿಕ ಸಂಕಷ್ಟ ಹಾಗೂ ಮದ್ಯವ್ಯಸನ ಮುಂತಾದ ಕಾರಣಗಳು ಪ್ರಮುಖವಾಗಿವೆ.
-ಎಂ.ಎಲ್.ವೈಶಾಲಿ, ಸಿಇಒ, ಜಿಲ್ಲಾ ಪಂಚಾಯಿತಿ

ದಿನ 24 ಗಂಟೆ ಕಾರ್ಯನಿರ್ವಹಿಸಿ | ಸಾಂತ್ವನ ಕೇಂದ್ರಗಳು ದಿನದ 24 ಗಂಟೆ ಕಾರ್ಯನಿರ್ವಹಿಸಬೇಕು. ಕೆಲವು ಕೇಂದ್ರಗಳು ನಿಯಮಾನುಸಾರ ಕಾರ್ಯನಿರ್ವಹಿಸದಿರುವ ಬಗ್ಗೆ ದೂರುಗಳು ಬರುತ್ತಿವೆ. ಮುಂದಿನ ದಿನಗಳಲ್ಲಿ ಸಾಂತ್ವನ ಕೇಂದ್ರಗಳಿಗೆ ಖುದ್ದು ಭೇಟಿ ನೀಡಿ ಕಾರ್ಯ ಪರಿಶೀಲಿಸಲಾಗುವುದು ಎಂದರು.

ಇದನ್ನೂ ಓದಿ । ಉಂಬ್ಳೇಬೈಲಲ್ಲಿ ಕಾಡಾನೆ ಉಪಟಳ, ಸೆರೆ ಹಿಡಿಯಲು ಕೈಗೊಂಡ ಸಿದ್ಧತೆಗಳೇನು ಗೊತ್ತಾ?

ವರದಕ್ಷಿಣೆ ಕಿರುಕುಳ, ಅತ್ಯಾಚಾರ, ಲೈಂಗಿಕ ಕಿರುಕುಳ, ದೌರ್ಜನ್ಯ ಹಾಗೂ ಇನ್ನಿತರ ರೀತಿಯ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ದೈಹಿಕವಾಗಿ ಹಾಗೂ ಮಾನಸಿಕವಾಗಿ ಹಿಂಸೆಯನ್ನು ಅನುಭವಿಸುತ್ತಿರುವ ಮಹಿಳೆಯರಿಗೆ ಕಾನೂನು ಸಲಹೆ, ಆರ್ಥಿಕ ಪರಿಹಾರ, ತಾತ್ಕಾಲಿಕ ಆಶ್ರಯ, ರಕ್ಷಣೆ ನೀಡುವುದರ ಜೊತೆಗೆ ಸ್ವಪ್ರೇರಣೆಯಿಂದ ಸ್ವಾವಲಂಬಿಗಳಾಗಲು ಅನುಕೂಲವಾಗುವಂತೆ ತರಬೇತಿ ನೀಡುವುದರೊಂದಿಗೆ ಇಂತಹ ಸಂತ್ರಸ್ತ ಮಹಿಳೆಯರಿಗೆ ಸಮಾಜದಲ್ಲಿ ಇತರೆ ಮಹಿಳೆಯರಂತೆ ಧೈರ್ಯವಾಗಿ ಬದುಕುವಂತೆ ಸಶಕ್ತರನ್ನಾಗಿ ಮಾಡುವ ಅಗತ್ಯವಿದೆ ಎಂದರು.

300ಕ್ಕೂ ಅಧಿಕ ಪೋಕ್ಸೊ ಪ್ರಕರಣ ದಾಖಲು | ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್.ಸರಸ್ವತಿ ಮಾತನಾಡಿ, ಜಿಲ್ಲೆಯಲ್ಲಿ ಪೋಕ್ಸೋ ಕಾಯ್ದೆಯಡಿ 300ಕ್ಕೂ ಹೆಚ್ಚಿನ ಪ್ರಕರಣಗಳು ನ್ಯಾಯಾಲಯದಲ್ಲಿ ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ.
ಈ ಕಾಯ್ದೆಯಡಿ ಸಂತ್ರಸ್ತ ಮಹಿಳೆಗೆ ಸಕಾಲದಲ್ಲಿ ಕಾನೂನು ಮತ್ತು ಸಾಮಾಜಿಕ ರಕ್ಷಣೆ ಒದಗಿಸಿ, ಕ್ರೌರ್ಯಕ್ಕೆ ಕಾರಣರಾದ ವ್ಯಕ್ತಿಗಳನ್ನು ನಿಯಮಾನುಸಾರ ಕಾನೂನು ಕ್ರಮಕ್ಕೆ ಒಳಪಡಿಸುವಲ್ಲಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಕ್ರಮವಹಿಸಬೇಕಾದ ತುರ್ತು ಅಗತ್ಯವಿದೆ ಎಂದು ಹೇಳಿದರು.

ತನಿಖೆ ಚುರುಕುಗೊಳಿಸಿ | ಪೋಕ್ಸೋ ಕಾಯ್ದೆಯಡಿ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳ ತನಿಖೆ ಮಂದಗತಿಯಲ್ಲಿದ್ದು, ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಅಗತ್ಯ ಕ್ರಮ ವಹಿಸುವಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ವೀರಭದ್ರಪ್ಪ ಪೂಜಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಉಪ ನಿರ್ದೇಶಕ ಸಿ.ಸುರೇಶ್, ಸಂರಕ್ಷಣಾಧಿಕಾರಿ ಗಂಗೂಬಾಯಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂರಕ್ಷಣಾಧಿಕಾರಿಗಳು, ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರಗಳ ಸಮಾಲೋಚಕರು, ಎಲ್ಲ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!