ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೋಚಿಂಗ್ ಡಿಪೋ, ಶಿವಮೊಗ್ಗ-ರಾಣೆಬೆನ್ನೂರು ರೈಲ್ವೆ ಕಾಮಗಾರಿಗಳು ತ್ವರಿತವಾಗಿ ಆರಂಭಗೊಂಡು 2022ರ ಹೊತ್ತಿಗೆ ಪೂರ್ಣಗೊಳ್ಳಲಿವೆ ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯೆಲ್ ಘೋಷಿಸಿದರು.
ವರ್ಚುವಲ್ ಮೀಡಿಯಾ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಮಾತನಾಡಿದರು.
ರಾಜ್ಯದಲ್ಲಿ ರೈಲ್ವೆ ಕ್ಷೇತ್ರದ ವಿಕಾಸಕ್ಕಾಗಿ ಕೈಗೊಂಡಿರುವ ಎಲ್ಲ ಕಾಮಗಾರಿಗಳು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಅನುದಾನದ ಕೊರತೆ ಉಂಟಾಗದಂತೆ ನೋಡಿಕೊಳ್ಳಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ತಿರುಪತಿ, ಚೆನ್ನೈ ಸಂಪರ್ಕ ಕಲ್ಪಿಸುವ ರೈಲ್ವೆ ಮಾರ್ಗಗಳು ಎಂದಿನಂತೆ ಮುಂದುವರೆಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮೂರು ಮೇಲ್ಸೇತುವೆ | ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ವೇಗವಾಗಿ ಬೆಳೆಯುತ್ತಿರುವ ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಿ, ಪ್ರಯಾಣಿಕರಿಗೆ ಆಗುತ್ತಿರುವ ಕಿರಿಕಿರಿ ಕಡಿಮೆ ಮಾಡಲು ಮೇಲ್ಸೇತುವೆ ಮಾಡಲಾಗುತ್ತಿದೆ. 26 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ ಸಮೀಪದ ಕಡದಕಟ್ಟೆ ಬಳಿ, 60.76 ಕೋಟಿ ರೂಪಾಯಿ ವೆಚ್ಚದಲ್ಲಿ ಉಷಾನರ್ಸಿಂಗ್ ಹೋಂ ಬಳಿ ಮತ್ತು 29.76 ಕೋಟಿ ರೂ. ವೆಚ್ಚದಲ್ಲಿ ಕಾಶೀಪುರ ಸೇರಿ ಮೂರು ಮೇಲ್ಸೇತುವೆಗಳನ್ನು ನಿರ್ಮಿಸಲಾಗುತ್ತಿದೆ ಎಂದರು.
ಶಾಸಕರಾದ ಆಯನೂರು ಮಂಜುನಾಥ್, ಬಿ.ಕೆ.ಸಂಗಮೇಶ್ವರ್, ಎಸ್.ಕುಮಾರ್ ಬಂಗಾರಪ್ಪ, ಎಸ್.ರುದ್ರೇಗೌಡ, ಭಾರತಿಶೆಟ್ಟಿ, ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಮೇಯರ್ ಶ್ರೀಮತಿ ಸುವರ್ಣ ಶಂಕರ್, ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ಸೂಡ ಅಧ್ಯಕ್ಷ ಜ್ಯೋತಿ ಪ್ರಕಾಶ್, ಚನ್ನಬಸಪ್ಪ, ಮೂಲಭೂತ ಸೌಕರ್ಯ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಕಪಿಲ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್, ಕೆ.ಪಿ.ಸ್ವಾಮಿ, ವಿಜಯ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಮುಂತಾದವರು ಉಪಸ್ಥಿತರಿದ್ದರು.