ಸುದ್ದಿ ಕಣಜ.ಕಾಂ
ಸೊರಬ: ತನ್ನ ಕುರ್ಚಿ ಉಳಿಸಿಕೊಳ್ಳಬೇಕಾದರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಯ್ದೆ ವಿರೋಧಿಸಿ ಶಿವಮೊಗ್ಗದಲ್ಲಿ ನಡೆಸಲು ಉದ್ದೇಶಿಸಿರುವ ರೈತ ಸಮಾವೇಶಕ್ಕೆ ಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.
ಕಾಯ್ದೆ ಜಾರಿ ವಿಚಾರ ದೇಶದಾದ್ಯಂತ ಭಾರಿ ವಿರೋಧಕ್ಕೆ ಕಾರಣವಾಗಿದೆ. ರೈತರು, ರೈತ ಮುಖಂಡರು, ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ. ಹೀಗಿದ್ದರೂ ಸರ್ಕಾರ ಮೊಂಡುತನ ಪ್ರದರ್ಶಿಸುತ್ತಿರುವುದು ಏಕೆ ಎಂದು ಪ್ರಶ್ನಿಸಿದರು.
ತುತ್ತಿನ ಚೀಲಕ್ಕೆ ಪ್ರಧಾನಿ ನರೇಂದ್ರ ಮೋದಿ ಕೈಹಾಕಿದ್ದಾರೆ.
ರಾಷ್ಟ್ರದ ರಾಜಧಾನಿಯಲ್ಲಿ ಕಳೆದ ನೂರು ದಿನದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಚರ್ಚೆಯೇ ಇಲ್ಲದೆ ಕಾಯ್ದೆ ಜಾರಿಗೆ ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆಯಾಗಿದೆ.
– ಎಚ್.ಆರ್.ಬಸವರಾಜಪ್ಪ, ರೈತ ಮುಖಂಡ
ಹೊಟ್ಟೆಗೆ ಅನ್ನ ತಿನ್ನುವವರು ಬೆಂಬಲಿಸುತ್ತಾರೆ | ರೈತ ವಿರೋಧಿ ಸರ್ಕಾರಗಳಿಗೆ ಬುದ್ದಿ ಕಲಿಸಬೇಕಿದೆ. ಅದಕ್ಕಾಗಿಯೇ ಹೋರಾಟ ಹಮ್ಮಿಕೊಳ್ಳಲಾಗಿದೆ. ಹೊಟ್ಟೆಗೆ ಅನ್ನ ತಿನ್ನುವ ಪ್ರತಿಯೊಬ್ಬರೂ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಬೇಕು ಎಂದರು.
ಬಂಡವಾಳಶಾಹಿಗಳಿಗೆ ಲಾಭದ ಹುನ್ನಾರ | ರಾಜ್ಯ ರೈತ ಸಂಘದ ಮುಖಂಡ ಕೆ.ಟಿ.ಗಂಗಾಧರ್ ಮಾತನಾಡಿ, ಕಾಯ್ದೆಗೆ ತಿದ್ದುಪಡಿ ತಂದು ಬಂಡವಾಳಶಾಹಿಗಳಿಗೆ ಲಾಭ ಮಾಡಿಕೊಳ್ಳುವ ಹುನ್ನಾರ ಇದೆ ಎಂದು ಆರೋಪಿಸಿದರು.
ರಾಷ್ಟ್ರಮಟ್ಟದ ಮುಖಂಡರು ಭಾಗಿ | ಕಾಯ್ದೆ ವಿರೋಧೀಸಿ ಮಾರ್ಚ್ 20ರಂದು ಶಿವಮೊಗ್ಗದಲ್ಲಿ ರೈತ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಲಕ್ಷಾಂತರ ಜನ ಆಗಮಿಸಲಿದ್ದಾರೆ. ಜತೆಗೆ, ಸಮಾವೇಶದಲ್ಲಿ ರೈತ ಮುಖಂಡರಾದ ರಾಕೇಶ್ ಟಿಕಾಯತ್, ಯದ್ವೀರ್ ಸಿಂಗ್, ಯೊಗೇಂದ್ರ ಯಾದವ್ ಪಾಲ್ಗೊಳ್ಳುವರು.
ಮಾಧ್ಯಮಗೋಷ್ಠಿಯಲ್ಲಿ ಜೆಡಿಎಸ್ ಮುಖಂಡ ಎಂ.ಶ್ರೀಕಾಂತ್, ಜನಶಕ್ತಿ ಸಂಘಟನೆಯ ಕೆ.ಎಲ್.ಅಶೋಕ್, ಡಿ.ಎಸ್.ಎಸ್. ಮುಖಂಡ ಹಾಲೇಶಪ್ಪ ಉಪಸ್ಥಿತರಿದ್ದರು.