ಸುದ್ದಿ ಕಣಜ.ಕಾಂ
ಶಿವಮೊಗ್ಗ: ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರನ್ನು ಸದನದಿಂದ ಅಮಾನತುಗೊಳಿಸಿರುವುದನ್ನು ಕೂಡಲೆ ಹಿಂಪಡೆಯಬೇಕು ಎಂದು ಎನ್.ಎಸ್.ಯು.ಐ ಆಗ್ರಹಿಸಿದೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಶುಕ್ರವಾರ ಪ್ರತಿಭಟನೆ ನಡೆಸಿದ ಎನ್.ಎಸ್.ಯು.ಐ ಕಾರ್ಯಕರ್ತರು ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ನೋವು ತೋರಿಕೊಳ್ಳಲು ಹೋದ ಶಾಸಕರನ್ನು ಸದನದಿಂದ ಒಂದು ವಾರ ಅಮಾನತುಗೊಳಿಸಿರುವುದು ಸರಿಯಲ್ಲ. ಇದು ಸರ್ವಾಧಿಕಾರಿ ಧೋರಣೆ ಎಂದು ಕಾರ್ಯಕರ್ತರು ತಿಳಿಸಿದ್ದಾರೆ.
ಭದ್ರಾವತಿಯಲ್ಲಿ ನಡೆದ ಹಲ್ಲೆ ಪ್ರಕರಣದ ಬಗ್ಗೆ ಸದನದಲ್ಲಿ ಸತ್ಯಾಂಶ ತಿಳಿಸಲು ಮುಂದಾದ ಶಾಸಕರಿಗೆ ಈ ರೀತಿ ಒಂದು ವಾರ ಸದನದಿಂದ ಹೊರಗಿಡುವುದು ಸರಿಯಲ್ಲ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.
ಶಾಸಕರು ಮತ್ತು ಅವರ ಕುಟುಂಬದ ಸದಸ್ಯರು, ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಾಕಿರುವ ಸುಳ್ಳು ಮೊಕದ್ದಮೆಗಳನ್ನು ವಜಾಗೊಳಿಸಬೇಕು. ಉನ್ನತ ಮಟ್ಟದ ತನಿಖೆಗೆ ಒಳಪಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ರಾಜ್ಯ ಉಪಾಧ್ಯಕ್ಷ ಕೆ.ಚೇತನ್, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಸಿ.ಜಿ.ಮಧುಸೂದನ್, ರಮೇಶ್ ಹೆಗ್ಡೆ, ರವಿ, ವಿಜಯ, ವಿಜಯಕುಮಾರ್, ಗಿರೀಶ್, ಪ್ರವೀಣ್, ಅವಿನಾಶ್, ಪ್ರಸನ್ನ, ಮುದಾಸೀರ್, ಶಿವು, ಚಂದ್ರೋಜಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.