ಸುದ್ದಿ ಕಣಜ.ಕಾಂ
ಶಿವಮೊಗ್ಗ: ದುಬೈಯಿಂದ ಶಿವಮೊಗ್ಗ ಆಗಮಿಸಿದ್ದ ವ್ಯಕ್ತಿಗೆ ಕೊರೊನಾ ನೆಗಟಿವ್ ವರದಿ ಬಂದಿದ್ದು, ಜಿಲ್ಲೆಯಲ್ಲಿ ದಕ್ಷಿಣ ಆಫ್ರಿಕಾ ಮೂಲಕ ರೂಪಾಂತರ ಕೊರೊನಾ ವೈರಸ್ ಪತ್ತೆಯಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸ್ಪಷ್ಟನೆ ನೀಡಿದರು.
ನಗರದ ಮೆಗ್ಗಾನ್ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದುಬೈಯಿಂದ ಆಗಮಿಸಿದ್ದ ವ್ಯಕ್ತಿಯ ಕೊರೊನಾ ವರದಿ ನೆಗಟಿವ್ ಬಂದಿದ್ದು, ಪ್ರಾಥಮಿಕ ಸಂಪರ್ಕ ಹೊಂದಿರುವ ಎಲ್ಲರಿಗೂ ಸಹ ನೆಗಟಿವ್ ಬಂದಿದೆ ಎಂದರು.
ಇದನ್ನೂ ಓದಿ | ಮಲೆನಾಡ ಪ್ರವಾಸೋದ್ಯಮಕ್ಕೆ ಡಿಜಿಟಲ್ ಟಚ್!
ಈ ವ್ಯಕ್ತಿಯೊಂದಿಗೆ ಎರಡನೇ ಹಂತದ ಸಂಪರ್ಕ ಹೊಂದಿದ್ದ 39 ಮಂದಿಯ ತಪಾಸಣೆ ನಡೆಸಲಾಗಿದ್ದು, ಎಲ್ಲರ ವರದಿ ನೆಗೆಟಿವ್ ಇದೆ. ಈ ಹಿನ್ನೆಲೆಯಲ್ಲಿ ಯಾರೂ ಅನಗತ್ಯವಾಗಿ ಭಯಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.
60 ವರ್ಷ ಮೇಲ್ಪಟ್ಟವರಿಗೆ ಲಸಿಕೆ | ಜಿಲ್ಲೆಯಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಹಾಕಲಾಗುತ್ತಿದೆ. ಮೆಗ್ಗಾನ್ ಆಸ್ಪತ್ರೆ, ಆಯುರ್ವೇದಿಕ್ ಕಾಲೇಜು ಆಸ್ಪತ್ರೆ, 41 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 7 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗುತ್ತಿದೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಸೌತ್ ಆಫ್ರಿಕಾ ರೂಪಾಂತರ ಕೊರೊನಾ ವೈರಸ್ ಆತಂಕ, ಮೈ ಜುಮ್ಮೆನಿಸುವ ಸೋಂಕಿತನ ಟ್ರಾವೆಲ್ ಹಿಸ್ಟರಿ
ಇದಲ್ಲದೆ ಶಿವಮೊಗ್ಗ ನಗರದ 8 ಖಾಸಗಿ ಆಸ್ಪತ್ರೆಗಳಲ್ಲಿ 250 ರೂಪಾಯಿ ದರ ನಿಗದಿಪಡಿಸಿ ಲಸಿಕೆ ನೀಡಲಾಗುತ್ತಿದೆ. ಸ್ಥಳದಲ್ಲಿಯೇ ನೋಂದಣಿ ಮಾಡಲು ಅವಕಾಶವಿದ್ದು, ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ನೆರೆಯ ರಾಜ್ಯದಲ್ಲಿ ಭೀತಿ | ನೆರೆಯ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ನಮ್ಮ ರಾಜ್ಯದಲ್ಲಿ ಸಹ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸರ್ಕಾರ 1ರಿಂದ 5ನೇ ತರಗತಿ ಮಕ್ಕಳಿಗೆ ಶಾಲೆ ಆರಂಭಿಸಲು ಅನುಮತಿ ನೀಡಿಲ್ಲ. 6ನೇ ತರಗತಿಯಿಂದ ಮೇಲಿನವರಿಗೆ ಮಾತ್ರ ಶಾಲೆ ನಡೆಸಲು ಅನುಮತಿ ನೀಡಿದೆ ಎಂದು ಹೇಳಿದರು.
ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.