ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೃಷಿ ಇಲಾಖೆಯು ಜಿಲ್ಲೆಯಲ್ಲಿ ಯಾವುದೇ ರಸಗೊಬ್ಬರ ಮಾರಾಟಗಾರರು ರಸಗೊಬ್ಬರ ಚೀಲದ ಮೇಲೆ ನಮೂದಿಸಿರುವ ಗರಿಷ್ಠ ಮಾರಾಟ ಬೆಲೆಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ತಪ್ಪದೇ ಹತ್ತಿರದ ರೈತ ಸಂಪರ್ಕ ಕೇಂದ್ರ, ಕೃಷಿ ಇಲಾಖೆಯ ಕಚೇರಿಯನ್ನು ಸಂಪರ್ಕಿಸಿ ದೂರು ನೀಡುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾವುದೇ ರಸಗೊಬ್ಬರ ಮಾರಾಟಗಾರರು ಏಪ್ರಿಲ್ 1 ರಿಂದ ರಸಗೊಬ್ಬರ ಧಾರಣೆ ಏರಿಕೆಯಾಗಿದೆ ಎಂಬ ನೆಪವೊಡ್ಡಿ ಲಭ್ಯವಿರುವ ದಾಸ್ತಾನಿನ ರಸಗೊಬ್ಬರಗಳನ್ನು ಚೀಲದ ಮೇಲಿನ ಮುದ್ರಿತ ದರಕ್ಕಿಂತ ಹೆಚ್ಚಿನ ದರದಲ್ಲಿ ರೈತರಿಗೆ ಮಾರಾಟ ಮಾಡುವಂತಿಲ್ಲ. ಈ ರೀತಿ ಮಾರಾಟ ಮಾಡುವುದು ರಸಗೊಬ್ಬರ ನಿಯಂತ್ರಣ ಆದೇಶ 1985ರ ಅನ್ವಯ ಕಾನೂನು ರೀತ್ಯಾ ವಂಚನೆಯ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ದರದಲ್ಲಿ ಮಾರಾಟ ಮಾಡಿದ್ದಲ್ಲಿ ಅಂತಹ ಮಾರಾಟಗಾರರ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.