ಸುದ್ದಿ ಕಣಜ.ಕಾಂ
ಶಿವಮೊಗ್ಗ: ರಾಜ್ಯದಲ್ಲಿ ಇದೇ ಮೊದಲ ಸಲ ಏಪ್ರಿಲ್ 21ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಆಯೋಜಿಸಲಾಗಿದೆ. ಇದಕ್ಕಾಗಿ, ಪೂರ್ವ ತಯಾರಿಕೆಗಳನ್ನು ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಹೇಳಿದರು.
READ | ಶಾಸಕ ಬಿ.ಕೆ.ಸಂಗಮೇಶ್ವರ್ ಪುತ್ರ ಬಸವೇಶ್ ಗೆ ಜಾಮೀನು
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಮಟ್ಟದಲ್ಲಿ ನಡೆಯುವ ಸಮಾರಂಭಕ್ಕೆ ಚಾಲನೆ ನೀಡಲಿದ್ದಾರೆ. ಅದೇ ರೀತಿ, ಜಿಲ್ಲಾ ಮಟ್ಟದಲ್ಲಿ ಸರ್ಕಾರದ ಶಿಷ್ಟಾಚಾರ ಪ್ರಕಾರದನ್ವಯ ಕಾರ್ಯಕ್ರಮ ನಡೆಯಲಿದೆ. ಸರ್ಕಾರಿ ನೌಕರರ ಸಂಘ ಮಾಡಿಕೊಂಡಿದ್ದ ಮನವಿಯನ್ನು ಪುರಸ್ಕರಿಸಿ ಸರ್ಕಾರ ಇದೇ ಮೊದಲ ಸಲ ಸರ್ಕಾರಿ ನೌಕರರ ದಿನಾಚರಣೆಯನ್ನು ಆಯೋಜಿಸಲು ಒಪ್ಪಿಕೊಂಡಿರುವುದು ಎಲ್ಲರಿಗೂ ಸಂತಸ ತಂದಿದೆ ಎಂದರು.
ಸರ್ವೋತ್ತಮ ಪ್ರಶಸ್ತಿ | ಏಪ್ರಿಲ್ 21ರಂದು ನಡೆಯಲಿರುವ ದಿನಾಚರಣೆಯಲ್ಲಿ ಉತ್ತಮ ಸೇವೆಗಾಗಿ ನೀಡಲಾಗುವ ಸರ್ವೋತ್ತಮ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಮುಂಚೆ ಜನವರಿ 26ರಂದು ಈ ಪ್ರಶಸ್ತಿ ಕೊಡಲಾಗುತ್ತಿತ್ತು. ಆದರೀಗ, ಸರ್ಕಾರಿ ನೌಕರರದ್ದೇ ಪ್ರತ್ಯೇಕ ದಿನವನ್ನು ಆಚರಿಸುತ್ತಿರುವುದರಿಂದ ಅಂದು ಪ್ರದಾನ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.
ನಗರದ ಕುವೆಂಪು ರಂಗಮಂದಿರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಪ್ರತಿಯೊಬ್ಬರು ಕೋವಿಡ್ ಮಾರ್ಗಸೂಚಿ ಪಾಲಿಸಲೇಬೇಕು. ಮಾಸ್ಕ್ ಧಾರಣೆ, ಸ್ಯಾನಿಟೈಸರ್ ಬಳಸಬೇಕು ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಉಪಸ್ಥಿತರಿದ್ದರು.