ಇನ್ಮುಂದೆ ದಿನದ 24 ಗಂಟೆ ಶಿವಮೊಗ್ಗದಲ್ಲಿ ನಡೆಯಲಿದೆ ಕೊರೊನಾ ಟೆಸ್ಟ್, 2ನೇ ಅಲೆಗೆ ಸಿದ್ಧತೆ ಜೋರು, ಬರಲಿವೆ ಹೆಚ್ಚುವರಿ ಆಂಬ್ಯುಲೆನ್ಸ್

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೋವಿಡ್ ಎರಡನೇ ಅಲೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ವೈದ್ಯಕೀಯ ಮೂಲಸೌಕರ್ಯ, ಮಾನವ ಸಂಪನ್ಮೂಲ ಹಾಗೂ ಹಣಕಾಸು ವ್ಯವಸ್ಥೆ ಕಲ್ಪಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಮೆಗ್ಗಾನ್ ಆಸ್ಪತ್ರೆಗೆ ಶನಿವಾರ ಭೇಟಿ ನೀಡಿ ಕೋವಿಡ್ ಎದುರಿಸಲು ಕೈಗೊಳ್ಳಲಾಗಿರುವ ಕ್ರಮಗಳನ್ನು ಪರಿಶೀಲಿಸಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

READ | ಲಖ್ನೌನಲ್ಲಿ ನಡೆದ ರೀಯಲ್ ಘಟನೆ ಆಧಾರಿತ ಸಸ್ಪೆನ್ಸ್ ಥ್ರಿಲ್ಲರ್ ಮೂವಿಯಲ್ಲಿ ಮಿಂಚಿರುವ ಶಿವಮೊಗ್ಗೆಯ ಪ್ರತಿಭೆಗಳು, ಯಾವುದೀ ಚಿತ್ರ, ಎಂದು ತೆರೆಗೆ?

ಮೆಗ್ಗಾನ್ ಗೆ ಹೆಚ್ಚುವರಿಯಾಗಿ ಅಗತ್ಯವಿರುವ 50 ನರ್ಸ್ ಹಾಗೂ ಡಿ ಗ್ರೂಪ್ ನೌಕರರನ್ನು ನೇಮಕ ಮಾಡಿಕೊಳ್ಳಲು ಅನುಮೋದನೆ ಪಡೆದುಕೊಳ್ಳಲಾಗಿದೆ. ಪ್ರಸ್ತುತ ಇರುವ ಆಕ್ಸಿಜನ್ ಬೆ?ಡ್ ಗಳ ಲಭ್ಯತೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಅಗತ್ಯ ಅನುದಾನವನ್ನು ಎನ್.ಡಿ.ಆರ್.ಎಫ್ ಅಡಿ ಪಡೆದುಕೊಳ್ಳುವ ಕುರಿತು ಪ್ರಯತ್ನಿಸಲಾಗುತ್ತಿದೆ. ಮೆಗ್ಗಾನ್ ಗೆ ಪಾಲಿಕೆಯಿಂದ ಹೆಚ್ಚುವರಿಯಾಗಿ ಆಂಬ್ಯುಲೆನ್ಸ್ ನೀಡಲು ಸೂಚನೆ ನೀಡಲಾಗುವುದು ಎಂದು ಹೇಳಿದರು.

ಹಳೆಯ ವೈದ್ಯಕೀಯ ತಂಡ ಕಾರ್ಯನಿರ್ವಹಣೆ | ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾತನಾಡಿ, ಕಳೆದ ಸೆಪ್ಟಂಬರ್ ನಲ್ಲಿ ಕೊರೊನಾ ಅತ್ಯಂತ ಹೆಚ್ಚಾಗಿದ್ದ ಸಂದರ್ಭದಲ್ಲಿ ರಚಿಸಲಾಗಿದ್ದ ವೈದ್ಯಕೀಯ ತಂಡಗಳನ್ನೇ ಈಗಲೂ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಕೊರತೆ ಇರುವುದಿಲ್ಲ. ಸರ್ಕಾರದ ಮಾರ್ಗಸೂಚಿ ಪ್ರಕಾರ ಲಸಿಕೆ ನೀಡಲಾಗುತ್ತಿದ್ದು, ಅರ್ಹ ವ್ಯಕ್ತಿಗಳು ಆಸ್ಪತ್ರೆಗೆ ತೆರಳಿ ಆನ್ ಲೈನ್ ನಲ್ಲಿ ತಮ್ಮ ಮಾಹಿತಿ ನೋಂದಣಿ ಮಾಡಿಕೊಳ್ಳಬೇಕು. ಅವರಿಗೆ ಅಲ್ಲಿಯೇ ಲಸಿಕೆ ನೀಡಲಾಗುವುದು ಅಥವಾ ಲಸಿಕೆ ನೀಡುವ ದಿನಾಂಕವನ್ನು ತಿಳಿಸಲಾಗುವುದು. ಖಾಸಗಿ ಆಸ್ಪತ್ರೆಗಳು ಸಹ ಲಸಿಕೆಯನ್ನು ಪಡೆದುಕೊಳ್ಳಲು ಮುಂದೆ ಬರಬೇಕು
– ಕೆ.ಬಿ.ಶಿವಕುಮಾರ್, ಡಿಸಿ

ಕಳೆದ ಬಾರಿ ಆಯುರ್ವೇದ ಮಹಾವಿದ್ಯಾಲಯದಲ್ಲಿ ಕೊರೊನಾ ಸೋಂಕಿತರ ಪ್ರಾಥಮಿಕ ತಪಾಸಣೆ ನಡೆಸಲಾಗುತ್ತಿತ್ತು. ಪ್ರಸ್ತುತ ಮೆಗ್ಗಾನ್ ನಲ್ಲಿ ಮಾಡಲಾಗುತ್ತಿದ್ದು, ಇದನ್ನು 24/7 ಮಾಡಲಾಗುವುದು. ಮೆಗ್ಗಾನ್ ನಲ್ಲಿ ಚಿಕಿತ್ಸೆ ಅಗತ್ಯವಿದ್ದವರನ್ನು ಮಾತ್ರ ದಾಖಲು ಮಾಡಿ ಉಳಿದವರನ್ನು ಹೋಂ ಐಸೋಲೇಷನ್ ಮಾಡಲಾಗುವುದು. ಅಗತ್ಯ ಬಿದ್ದರೆ ಕೋವಿಡ್ ಕೇರ್ ಸೆಂಟರ್ (ಸಿಸಿಸಿ) ಆರಂಭಿಸಲಾಗುವುದು. ತಾಲೂಕು ಆಸ್ಪತ್ರೆಗಳಲ್ಲಿ ಸಹ ಸೋಂಕು ಪೀಡಿತರನ್ನು ದಾಖಲು ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಹೆಚ್ಚುವರಿ 500 ಆಕ್ಸಿಜನ್ ಪಾಯಿಂಟ್ | ಪ್ರಸ್ತುತ ಮೆಗ್ಗಾನ್ ಆಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೈಪ್ ಲೈನ್ ಸೌಲಭ್ಯ ಸೇರಿದಂತೆ ಒಟ್ಟು 613 ಆಕ್ಸಿಜನ್ ಪಾಯಿಂಟ್ ಸೌಲಭ್ಯ ಕಲ್ಪಿಸಲಾಗಿದೆ. ಇನ್ನೂ 500 ಆಕ್ಸಿಜನ್ ಪಾಯಿಂಟ್ ಕಲ್ಪಿಸುವುದರ ಕುರಿತು ಪ್ರಸ್ತಾವನೆಯನ್ನು ಅನುಮೋದನೆಗಾಗಿ ಸಲ್ಲಿಸಲಾಗಿದೆ. ಇದಕ್ಕೆ 1.20 ಕೋಟಿ ರೂ. ಅನುದಾನ ಅಗತ್ಯವಿದೆ ಎಂದು ಕೆ.ಎಸ್.ಎಚ್.ಆರ್.ಡಿ.ಪಿ. ಎಇಇ ರವಿಕಿರಣ್ ಅವರು ಮಾಹಿತಿ ನೀಡಿದರು. ಹೆಚ್ಚುವರಿ ಆಕ್ಸಿಜನ್ ಸೌಲಭ್ಯ ಕಲ್ಪಿಸುವ ಪ್ರಸ್ತಾವನೆಗೆ ತಕ್ಷಣ ಅನುಮೋದನೆ ಪಡೆದುಕೊಂಡು ಕಾರ್ಯಾರಂಭ ಮಾಡುವಂತೆ ಸಚಿವರು ತಾಕೀತು ಮಾಡಿದರು.

READ | ಕೆ.ಎಸ್.ಆರ್.ಟಿ.ಸಿಗೆ ಕೋಟಿಗಟ್ಟಲೇ ನಷ್ಟ, ಯುಗಾದಿ ಸೀಸನ್ ವೊಂದರಲ್ಲೇ ₹ 10 ಲಕ್ಷ ಖೋತಾ!

ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಸಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ, ಡಾ.ಶ್ರೀಧರ್, ಸಿಮ್ಸ್ ಆಡಳಿತ ಮಂಡಳಿ ನಿರ್ದೇಶಕಿ ಡಾ.ವಾಣಿ ಕೋರಿ, ಡಾ.ಗೌತಮ್, ದಿವಾಕರ್ ಶೆಟ್ಟಿ, ಡಿ.ಎಚ್.ಒ ಡಾ.ರಾಜೇಶ್ ಸುರಗಿಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.

error: Content is protected !!