GOOD NEWS | ಭದ್ರಾವತಿ, ಸಾಗರದಲ್ಲಿ ಶೀಘ್ರವೇ ಆಕ್ಸಿಜನ್ ಜನರೇಟರ್ ವ್ಯವಸ್ಥೆ, ಇಳಿಯಲಿದೆ ಮೆಗ್ಗಾನ್ ಮೇಲಿನ ಹೊರೆ

 

 

ಸುದ್ದಿ‌ ಕಣಜ.ಕಾಂ
ಶಿವಮೊಗ್ಗ: ಶಿಕಾರಿಪುರ ತಾಲೂಕು ಆಸ್ಪತ್ರೆಯಲ್ಲಿ ಸ್ಥಳೀಯವಾಗಿ ಆಕ್ಸಿಜನ್ ಉತ್ಪಾದಿಸಲು ಆಕ್ಸಿಜನ್ ಜನರೇಟರ್ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಒಂದೆರಡು ದಿನಗಳಲ್ಲಿ ಕಾರ್ಯಾರಂಭವಾಗಲಿದೆ. ಭದ್ರಾವತಿ ಹಾಗೂ ಸಾಗರದಲ್ಲೂ ಈ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು.

https://www.suddikanaja.com/2021/04/19/covid-control-room-in-all-talukas-of-shivamogga/

ಸಿಮ್ಸ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕೋವಿಡ್ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳ ಕುರಿತು ಹಿರಿಯ ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ಮೆಗ್ಗಾನ್‌ನಲ್ಲಿ ಇನ್ನೂ 250 ಆಕ್ಸಿಜನ್ ಬೆಡ್ ಸಿದ್ಧಪಡಿಸಲಾಗುತ್ತಿದೆ. ಮೆಗ್ಗಾನ್ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ತಾಲೂಕು ಆಸ್ಪತ್ರೆಗಳಲ್ಲಿ ಸಹ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಅದರ ಭಾಗವಾಗಿಯೇ ಮೊದಲ‌ ಹಂತದಲ್ಲಿ‌ ಶಿಕಾರಿಪುರದಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.
ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಕನಿಷ್ಠ 50 ಆಕ್ಸಿಜನ್ ಬೆಡ್ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಸ್ತುತ ಅಗತ್ಯವಿರುವಷ್ಟು ವೈದ್ಯಕೀಯ ಸಿಬ್ಬಂದಿ ಲಭ್ಯವಿದ್ದು, ಅಗತ್ಯ ಬಿದ್ದರೆ ಖಾಸಗಿ ಆಸ್ಪತ್ರೆಯ ವೈದ್ಯರ ಸೇವೆಯನ್ನು ಸಹ ಪಡೆದುಕೊಳ್ಳಲಾಗುವುದು ಎಂದರು.
ಈ ವೇಳೆ‌ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಎದುರಿಸಲು ಸರ್ಕಾರದ ಮಟ್ಟದಲ್ಲಿ ಎಲ್ಲ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಸಾರ್ವಜನಿಕರು ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸುವ ಮೂಲಕ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದರು.
700-800 ಆಕ್ಸಿಜನ್ ಬೆಡ್ | ಪ್ರಸ್ತುತ ಮೆಗ್ಗಾನ್ ಆಸ್ಪತ್ರೆಯಲ್ಲಿ 700 ರಿಂದ 800ರ ವರೆಗೆ ಆಕ್ಸಿಜನ್ ಬೆಡ್‌ ಗಳು ಕೋವಿಡ್ ರೋಗಿಗಳಿಗಾಗಿ ಲಭ್ಯವಿದೆ. ಪ್ರಸ್ತುತ 250 ಮಂದಿ ಕೋವಿಡ್ ರೋಗಿಗಳು ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೋವಿಡೇತರ ರೋಗಿಗಳಿಗೆ ಮೆಗ್ಗಾನ್‌ ನಲ್ಲಿ ಒದಗಿಸಲಾಗುತ್ತಿರುವ ಚಿಕಿತ್ಸೆಗೆ ಯಾವುದೇ ತೊಂದರೆ ಆಗದಂತೆ ಸೌಲಭ್ಯಗಳನ್ನು ಬಳಸಿಕೊಳ್ಳಲು ಸೂಚಿಸಲಾಗಿದೆ ಎಂದರು.
ರೋಗ ಲಕ್ಷಣ ಇಲ್ಲದಿದ್ದರೆ ಹೋಮ್ ಕ್ವಾರಂಟೈನ್ | ರೋಗ ಲಕ್ಷಣ ಇಲ್ಲದವರನ್ನು ಹೋಂ ಕ್ವಾರೆಂಟೈನ್‌ ಗೆ ಕಳುಹಿಸಲಾಗುತ್ತಿದೆ. ಚಿಕಿತ್ಸೆ ಅಗತ್ಯ ಇರುವವರನ್ನು ಮಾತ್ರ ಮೆಗ್ಗಾನ್‌ ನಲ್ಲಿ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ. ನೆರೆಯ ಜಿಲ್ಲೆಗಳಿಂದಲೂ ಕೋವಿಡ್ ರೋಗಿಗಳು ಚಿಕಿತ್ಸೆಗಾಗಿ ಆಗಮಿಸುತ್ತಿರುವುದರಿಂದ ಮೆಗ್ಗಾನ್ ಮೇಲೆ ಸ್ವಲ್ಪಮಟ್ಟಿನ ಒತ್ತಡ ಬೀಳುತ್ತಿದೆ. ಮೆಗ್ಗಾನ್‌ನಲ್ಲಿ ಆಕ್ಸಿಜನ್ ಪೂರೈಕೆಗೆ ಸದ್ಯ ಯಾವುದೇ ಕೊರತೆ ಇರುವುದಿಲ್ಲ. ಇಲ್ಲಿ 16 ಸಾವಿರ ಲೀಟರ್ ಆಕ್ಸಿಜನ್ ಸಂಗ್ರಹ ಟ್ಯಾಂಕ್ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಜಿಂದಾಲ್‌ನಿಂದ ಪ್ರತಿ ಎರಡು ದಿನಗಳಿಗೊಮ್ಮೆ ಅಗತ್ಯ ಆಕ್ಸಿಜನ್ ಪೂರೈಕೆ ಆಗುತ್ತಿದೆ ಎಂದು ಹೇಳಿದರು.
24 ಗಂಟೆಯೊಳಗೆ ಸಮಸ್ಯೆಗೆ ಪರಿಹಾರ | ಜಿಲ್ಲೆಯಲ್ಲಿ ಪ್ರತಿ ದಿನ 2 ಸಾವಿರಕ್ಕೂ ಅಧಿಕ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ನೆರೆಯ ಜಿಲ್ಲೆಗಳ ಸ್ಯಾಂಪಲ್‌ ಗಳನ್ನು ಸಹ ಇಲ್ಲಿಯೇ ಪರೀಕ್ಷೆಗೆ ಕಳುಹಿಸಿದ್ದರಿಂದ ಫಲಿತಾಂಶ ಬರಲು ವಿಳಂಬವಾಗುತ್ತಿದ್ದು, ಒಂದೆರಡು ದಿನಗಳಲ್ಲಿ ಇದು ಸುಧಾರಿಸಲಿದೆ. 24 ಗಂಟೆಯ ಒಳಗಾಗಿ ಫಲಿತಾಂಶ ಒದಗಿಸಲು ಸೂಚನೆ ನೀಡಲಾಗಿದೆ. ಪ್ರಸ್ತುತ ಮೆಗ್ಗಾನ್‌ ನಲ್ಲಿ ಒಂದು ಸಿಟಿ ಸ್ಕ್ಯಾನ್ ಲಭ್ಯವಿದ್ದು, ಅಗತ್ಯ ಬಿದ್ದರೆ ಖಾಸಗಿ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಹೆಚ್ಚಿನ ಸೌಲಭ್ಯ ಪಡೆದುಕೊಳ್ಳಲು ಸೂಚಿಸಲಾಗುವುದು ಎಂದು ಹೇಳಿದರು.
ಸಿಮ್ಸ್ ನಿರ್ದೇಶಕ ಡಾ.ಸಿದ್ದಪ್ಪ, ಡಾ. ಶ್ರೀಧರ್, ಎಸ್.ಪಿ ಲಕ್ಷ್ಮೀಪ್ರಸಾದ್, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ್ ವಟಾರೆ, ಡಿ.ಎಚ್‌.ಒ ಡಾ.ರಾಜೇಶ್ ಸುರಗಿಹಳ್ಳಿ, ಸೂಡಾ ಅಧ್ಯಕ್ಷ ಎಸ್.ಎಸ್.ಜ್ಯೋತಿ ಪ್ರಕಾಶ್, ಷಡಕ್ಷರಿ ಉಪಸ್ಥಿತರಿದ್ದರು.

https://www.suddikanaja.com/2021/04/17/covid-high-alert-in-shivamogga/

error: Content is protected !!