ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯಲ್ಲಿ ಇನ್ನೊಂದು ವಾರ ಲಾಕ್ ಡೌನ್ ಮಾಡುವುದಕ್ಕೆ ಜಿಲ್ಲಾಡಳಿತ ನಿರ್ಧರಿಸಿದ್ದು, ಇದನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಘೋಷಿಸಿದರು.
https://www.suddikanaja.com/2021/06/05/lock-down-extend-for-one-week-in-shivamogga/
ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಲಾಕ್ ಡೌನ್ ಮುಂದುವರಿಕೆ ಕುರಿತು ಸುದೀರ್ಘವಾಗಿ ಚರ್ಚಿಸಿ ನಂತರ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್ ಡೌನ್ ಈಗಿರುವಂತೆ ಒಂದು ವಾರ ಕಾಲ ಮುಂದುವರೆಯಲಿದ್ದು, ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಬೆಳಗ್ಗೆ 6ರಿಂದ 9ರವರೆಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿ ಪ್ರಮಾಣ ನಿಧಾನವಾಗಿ ಕಡಿಮೆಯಾಗುತ್ತಿದೆ. ಆದರೆ, ಶಿವಮೊಗ್ಗ ನಗರದಲ್ಲಿ ಈಗಲೂ ಶೇ.13ರ ಆಸುಪಾಸಿನಲ್ಲಿದ್ದು, ಭದ್ರಾವತಿಯಲ್ಲಿ ಸುಮಾರು ಶೇ.10ರಷ್ಟು ಪಾಸಿಟಿವಿಟಿ ದರ ಇದೆ. ಈ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರಗಳ ಕಾಲ ಲಾಕ್ ಡೌನ್ ಇದೇ ರೀತಿ ಮುಂದುವರೆಸಲು ಎಲ್ಲ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಿದರು.
ಮಾರ್ಗಸೂಚಿಯಲ್ಲಿನ ವ್ಯಾಪಾರಕ್ಕಷ್ಟೇ ಅವಕಾಶ | ಲಾಕ್ ಡೌನ್ ಜಾರಿಯಲ್ಲಿರುವ ಜಿಲ್ಲೆಗಳಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಅನುಮತಿ ನೀಡಲಾಗಿರುವ ಅಗತ್ಯ ವಸ್ತುಗಳ ವ್ಯಾಪಾರಕ್ಕೆ ಮಾತ್ರ ಅವಕಾಶವಿದೆ. ಪ್ರಸ್ತುತ ತರಕಾರಿ, ದಿನಸಿಯಂತಹ ಅಗತ್ಯ ವಸ್ತುಗಳ ಮಾರಾಟಕ್ಕೆ ಬೆಳಿಗ್ಗೆ 6ರಿಂದ 8ರವರೆಗೆ ಅವಕಾಶವಿದ್ದು, ಅದನ್ನು ಒಂದು ಗಂಟೆ ವಿಸ್ತರಿಸಲಾಗಿದೆ ಎಂದರು.
ಶಾಸಕರಾದ ಆರಗ ಜ್ಞಾನೇಂದ್ರ, ಅಶೋಕ ನಾಯ್ಕ್, ಆಯನೂರು ಮಂಜುನಾಥ, ಪ್ರಸನ್ನ ಕುಮಾರ್, ರುದ್ರೇಗೌಡ, ಆರ್ಯವೈಶ್ಯ ನಿಗಮದ ಅರುಣ್, ದತ್ತಾತ್ರೇಯ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಎಸ್ಪಿ ಲಕ್ಷ್ಮೀ ಪ್ರಸನ್ನ, ಸಿಇಒ ವೈಶಾಲಿ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
https://www.suddikanaja.com/2021/05/09/no-vehicles-allowed-tomorrow/