ರಾಜ್ಯ ಸರ್ಕಾರಿ ನೌಕರರಿಗೆ ಕೊನೆಗೂ ಸಿಕ್ತು ತುಟ್ಟಿಭತ್ಯೆ, ಯಾವಾಗಿಂದ ಅನ್ವಯ?

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ರಾಜ್ಯದಲ್ಲಿ ಕೋವಿಡ್‌-19 ಕಾರಣದಿಂದ 2020ರ ಜನವರಿ 1ರಿಂದ ತಡೆಹಿಡಿದಿದ್ದ ಮೂರು ಕಂತುಗಳ ತುಟ್ಟಿಭತ್ಯೆಯನ್ನು 2021 ಜುಲೈ 1ರಿಂದ ಅನ್ವಯವಾಗುವಂತೆ ಮಂಜೂರು ಮಾಡಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ.

https://www.suddikanaja.com/2021/02/24/demands-submitted-to-cm-bs-yadiyurappa-from-cs-shadakshari/

ಈ ಸಂಬಂಧ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಾಕ್ಷ ರಿ ಮತ್ತು ಸಂಘದ ಪದಾಧಿಕಾರಿಗಳು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ತುಟ್ಟಿಭತ್ಯೆಯನ್ನು ಮಂಜೂರು ಮಾಡುವಂತೆ ಮನವಿ ಸಲ್ಲಿಸಿ ಒತ್ತಾಯಿಸಿದ್ದರು.
ಈ ಹಿನ್ನೆಲೆಯಲ್ಲಿ ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನು ಆಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ಜುಲೈ 1ರಿಂದ ಅನ್ವಯವಾಗುವಂತೆ ಶೇ.11ರ ತುಟ್ಟಿಭತ್ಯೆ ಮಂಜೂರು ಮಾಡಿರುತ್ತದೆ. ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೂ ಸಹ ಶೇ. 11ರಷ್ಟು ತುಟ್ಟಿಭತ್ಯೆ ಮಂಜೂರು ಮಾಡಿ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ.
ನೌಕರರ ಕೋರಿಕೆಯನ್ನು ಮಾನವೀಯ ನೆಲೆಯಲ್ಲಿ ಪರಿಗಣಿಸಿ, ತುಟ್ಟಿಭತ್ಯೆ ಮಂಜೂರು ಮಾಡಲು ಆರ್ಥಿಕ ಇಲಾಖೆಗೆ ಆದೇಶ ಹೊರಡಿಸಿರುವ ಬಿ.ಎಸ್‌.ಯಡಿಯೂರಪ್ಪ ಅವರು, ಸಚಿವ ಸಂಪುಟದ ಎಲ್ಲ ಸಚಿವರಿಗೆ ಹಾಗೂ ಸರ್ಕಾರದ ಉನ್ನತ ಹಂತದ ಅಧಿಕಾರಿಗಳಿಗೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಾಕ್ಷ ರಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಸರ್ಕಾರದ ಈ ಆದೇಶದಿಂದ ರಾಜ್ಯದ ಆರು ‌ಲಕ್ಷ ಸರ್ಕಾರಿ ನೌಕರರು, 4.50 ಲಕ್ಷ ಪಿಂಚಣಿದಾರರು ಹಾಗೂ 3 ಲಕ್ಷ ನಿಗಮ ಮಂಡಳಿಗಳ ನೌಕರರು ಈ ಸೌಲಭ್ಯದ ಲಾಭ ಪಡೆಯಲಿದ್ದಾರೆ.
ರಾಜ್ಯದ ಎಲ್ಲ ನೌಕರರಿಗೆ ಜುಲೈ 1ರಿಂದ ಮಂಜೂರಾಗುವ ತುಟ್ಟಿಭತ್ಯೆಯು ಮೂಲ ವೇತನದಲ್ಲಿ ಸೇರ್ಪಡೆಗೊಳ್ಳಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

https://www.suddikanaja.com/2020/11/23/railway-terminal-at-koteganguru-in-shivamogga/

error: Content is protected !!