ಸುದ್ದಿ ಕಣಜ.ಕಾಂ
ಶಿವಮೊಗ್ಗ: ಗ್ರಾಮ ಪಂಚಾಯಿತಿಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ತಮ್ಮ ವ್ಯಾಪ್ತಿಯಲ್ಲಿರುವ ಕೆರೆ ಕುಂಟೆಗಳನ್ನು ಅಭಿವೃದ್ಧಿಪಡಿಸುವ ಜವಾಬ್ದಾರಿಯನ್ನು ಗ್ರಾಪಂಗಳಿಗೆ ವಹಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ನೆಹರೂ ರಸ್ತೆಯಲ್ಲಿ ಪಾರ್ಕಿಂಗ್ ಜೋನ್, ದ್ವಿಚಕ್ರ, ಕಾರು ವಾಹನಕ್ಕೆ ಪ್ರತ್ಯೇಕ ವ್ಯವಸ್ಥೆ
ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು. ಈ ವೇಳೆ ತ್ಯಾಜ್ಯ ಸಂಗ್ರಹಿಸುವ ವಾಹನಗಳಿಗೆ ಚಾಲನೆ ನೀಡಲಾಯಿತು.
ಗ್ರಾಪಂಗಳ ವ್ಯಾಪ್ತಿಗೆ ಕೆರೆ ಕುಂಟೆಗಳ ನಿರ್ವಹಣೆಯನ್ನು ವಹಿಸಿರುವುದರಿಂದ ಜಲ ಸಂರಕ್ಷಣೆ ಕಾರ್ಯದಲ್ಲಿ ಪಂಚಾಯಿತಿಗಳು ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗಲಿದೆ. ಸರ್ಕಾರದ ಹಲವು ಯೋಜನೆಗಳ ಅನುಷ್ಠಾನದ ಹೊಣೆ ಗ್ರಾಪಂ ಮೇಲಿದ್ದು, ಎಲ್ಲ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.
ಪ್ರತಿಯೊಂದು ಗ್ರಾಪಂ ಅಭಿವೃದ್ಧಿಗಾಗಿ ಸರ್ಕಾರ ವಿಶೇಷ ಒತ್ತು ನೀಡುತ್ತಿದ್ದು, ತಮ್ಮ ಗ್ರಾಮಗಳಲ್ಲಿ ಆಗಬೇಕಾಗಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತು ಪಟ್ಟಿಯನ್ನು ಸಿದ್ಧಪಡಿಸಬೇಕು. ಯೋಜನೆಗಳ ಅನುಷ್ಠಾನದ ಬಗ್ಗೆ ತರಬೇತಿಯನ್ನು ನೀಡಲು ಎಲ್ಲ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪಿಡಿಒಗಳಿಗೆ ತರಬೇತಿಯನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.
15 ದಿನಗಳಲ್ಲಿ ನರೇಗಾ ಕೂಲಿ | ಉದ್ಯೋಗ ಖಾತ್ರಿ ಯೋಜನೆಯಡಿ ಇದೀಗ 15 ದಿನಗಳ ಒಳಗಾಗಿ ಕೂಲಿಯನ್ನು ಪಾವತಿಸಲಾಗುತ್ತಿದೆ. ಕೆಲಸ ಕೇಳಿದ ತಕ್ಷಣ ಕೆಲಸವನ್ನು ನೀಡಲು ಪ್ರತಿ ಗ್ರಾಮ ಪಂಚಾಯತ್ನಲ್ಲಿ ವ್ಯವಸ್ಥೆ ಮಾಡಿರಬೇಕು. ಕಳೆದ ಸಾಲಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಿಗದಿಪಡಿಸಲಾಗಿದ್ದ 13 ಕೋಟಿ ಮಾನವ ದಿನಗಳನ್ನು ಡಿಸೆಂಬರ್ ತಿಂಗಳಲ್ಲೇ ಪೂರ್ಣಗೊಳಿಸಿದ ಕಾರಣ ಹೆಚ್ಚುವರಿಯಾಗಿ 2 ಕೋಟಿ ಮಾನವ ದಿನವನ್ನು ಪಡೆದುಕೊಳ್ಳಲು ಸಾಧ್ಯವಾಗಿದೆ ಎಂದು ಹೇಳಿದರು.
ಶಾಸಕ ಬಿ.ಕೆ.ಸಂಗಮೇಶ್ವರ್, ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನ ಕುಮಾರ್, ಜಿಪಂ ಸಿಇಒ ಎಂ.ಎಲ್.ವೈಶಾಲಿ, ತಾಲೂಕು ಕಾರ್ಯನಿರ್ವಹಣಾಧಿಕಾರಿ ರಮೇಶ್, ಗ್ರಾಪಂ ಅಧ್ಯಕ್ಷೆ ಸವಿತಾ ಉಪಸ್ಥಿತರಿದ್ದರು.