ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮಾಜಿ ಸಚಿವ, ಶಾಸಕ ಕೆ.ಎಸ್.ಈಶ್ವರಪ್ಪ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಕೆ.ಎಸ್.ಈಶ್ವರಪ್ಪ ಅಭಿಮಾನಿ ಬಳಗ ಆಗ್ರಹಿಸಿದೆ.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಬಳಗದ ಅಧ್ಯಕ್ಷ ಎ.ಎನ್.ಸಂತೋಷ್, ಪ್ರಧಾನ ಕಾರ್ಯದರ್ಶಿ ಅವಿನಾಶಾ ಎಲ್.ರಾಜ್, ಬಿಜೆಪಿ ಸಂಘಟನೆಯಲ್ಲಿ ಅವಿರತ ಶ್ರಮ ವಹಿಸಿರುವ ಈಶ್ವರಪ್ಪ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ಡಿಸಿಎಂ ಸ್ಥಾನದ ಆಕಾಂಕ್ಷೆಯ ಬಗ್ಗೆ ಈಶ್ವರಪ್ಪ ಹೇಳಿದ್ದೇನು, ಏನಿದು ಬಿಜೆಪಿಯ ‘ಕೃಷ್ಣ ತಂತ್ರ’ಗಾರಿಕೆ?
ಬಿಜೆಪಿ ಸಂಘಟನೆಯಲ್ಲಿ ಮುಖ್ಯ ಪಾತ್ರ
ಕೆ.ಎಸ್.ಈಶ್ವರಪ್ಪ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಸೇರಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರು, ಹಲವು ಸಲ ಶಾಸಕರು ಹಾಗೂ ಸಚಿವರಾಗಿ ನಾನಾ ಹುದ್ದೆಗಳಲ್ಲಿ ಕೆಲಸ ಮಾಡಿದ್ದಾರೆ ಎಂದು ಹೇಳಿದರು.
ಕೋವಿಡ್ ಸೋಂಕು ನಿರ್ವಹಣೆಯಲ್ಲಿ ಅವಿರತ ಶ್ರಮ
ಕೋವಿಡ್ ಮೊದಲನೇ ಮತ್ತು ಎರಡನೇ ಅಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಕೋವಿಡ್ ಸುರಕ್ಷಾ ಪಡೆಯ ಮೂಲಕ ಅಗತ್ಯ ಇರುವವರಿಗೆ ಔಷಧ ವಿತರಣೆ, ಫುಡ್ ಕಿಟ್, ಹೆಲ್ತ್ ಕಿಟ್ ಮತ್ತು ಶುಭ ಮಂಗಳದಲ್ಲಿ ಕಲ್ಯಾಣ ಮಂಟಪದಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಿದ್ದಾರೆ. ಇದರಿಂದ ಹಲವು ಬಡ ರೋಗಿಗಳಿಗೆ ಅನುಕೂಲವಾಗಿದೆ. ಪಕ್ಷ ಮತ್ತು ಕ್ಷೇತ್ರದಲ್ಲಿ ಮಾಡಿರುವ ಕೆಲಸಗಳನ್ನು ಪರಿಗಣಿಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಈಶ್ವರಪ್ಪ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಬಳಗದ ಉಪಾಧ್ಯಕ್ಷ ಅರುಣ್ (ಜಿಮ್ಮಿ) ಸೇರಿದಂತೆ ಇತರರು ಉಪಸ್ಥಿತರಿದ್ದರು.