ಸುದ್ದಿ ಕಣಜ.ಕಾಂ | TALUK | FOREST
ಶಿವಮೊಗ್ಗ: ಶೆಟ್ಟಿಹಳ್ಳಿ ಪರಿಸರ ಸೂಕ್ಷ್ಮ ವಲಯಕ್ಕೆ ಹೊಂದಿಕೊಂಡಂತೆ 10 ಕಿ.ಮೀ. ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿ ಕಲ್ಲು ಗಣಿಗಾರಿಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಸದ ಏರ್ಪಡಿಸಲಾಗಿದ್ದ ಜಿಲ್ಲಾ ಟಾಸ್ಕ್ ಫೋರ್ಸ್(ಗಣಿ) ಸಮಿತಿ, ಜಿಲ್ಲಾ ಕಲ್ಲು ಪುಡಿ ಮಾಡುವ ಘಟಕಗಳ ಪರವಾನಗಿ ಮತ್ತು ನಿಯಂತ್ರಣ ಪ್ರಾಧಿಕಾರ ಹಾಗೂ ಜಿಲ್ಲಾ ಮರಳು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನ್ಯಾಯಾಲಯ ನಿರ್ದೇಶನದಂತೆ ಕ್ರಮ
ಶೆಟ್ಟಿಹಳ್ಳಿ ಸೂಕ್ಷ್ಮವಾದ ಪ್ರದೇಶಕ್ಕೆ ಹೊಂದಿಕೊಂಡಂತೆ ಗುತ್ತಿಗೆದಾರರು ನಡೆಸಲಾಗುತ್ತಿರುವ ಗಣಿಗಾರಿಕೆಗೆ ಸಂಬಂಧಪಟ್ಟಂತೆ ನ್ಯಾಯಾಲಯದಲ್ಲಿ ದಾಖಲಾಗಿರುವ ಕೆಲವು ಪ್ರಕರಣಗಳಿಗೆ ನ್ಯಾಯಾಲಯ ಆದೇಶ ಹೊರಡಿಸಿದೆ.
ಅದನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಮಾರ್ಗಸೂಚಿ ಉಲ್ಲಂಘಿಸಿದರೆ ಕೇಸ್
ಕಲ್ಲು ಮತ್ತು ಮರಳು ಗಣಿಗಾರಿಕೆ ಗುತ್ತಿಗೆ ಪಡೆದಿರುವ ಗುತ್ತಿಗೆದಾರರು ಸರ್ಕಾರದ ಆದೇಶಗಳನ್ನು ಹಾಗೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ತಪ್ಪಿದಲ್ಲಿ ಕಾನೂನು ಕ್ರಮ ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.
ಮರಳು ಮಾರ್ಗಸೂಚಿ ಉಲ್ಲಂಘಿಸಿದರೆ ಕ್ರಿಮಿನಲ್ ಕೇಸ್, ದಾಖಲಾದ ಪ್ರಕರಣಗಳೆಷ್ಟು ಗೊತ್ತಾ?
ಸಂಬಂಧಪಟ್ಟ ಇಲಾಖೆಯಿಂದ ಸೂಕ್ತ ಕ್ರಮ
ಗಾಜನೂರು ಜಲಾಶಯದ ಹಿನ್ನೀರಿನ ಪ್ರದೇಶದ ನಾಗರಿಕರು ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಪ್ರಮಾಣದ ಹೂಳು, ಮರಳು ತುಂಬಿಕೊಂಡಿರುವ ಕಾರಣದಿಂದ ಜಲಾಶಯದಲ್ಲಿ ಸಂಗ್ರಹವಾದ ನಂತರ ಹೆಚ್ಚಿನ ನೀರು ಜನವಸತಿ ಪ್ರದೇಶಗಳಿಗೆ ನುಗ್ಗುವಂತಾಗಿದೆ. ಕೆಲವೊಮ್ಮೆ ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾಳಾಗುವುದು ಮಾತ್ರವಲ್ಲ ಜಮೀನಿನಲ್ಲಿ ಮರಳು ಸಂಗ್ರಹಗೊಂಡು ಕೃಷಿ ಚಟುವಟಿಕೆಗೆ ಅಡಚಣೆ ಉಂಟು ಮಾಡುತ್ತಿದೆ ಎಂಬ ಬಗ್ಗೆ ದೂರುಗಳು ಬರುತ್ತಿವೆ.
ಆದ್ದರಿಂದ, ಸಂಬಂಧಿತ ಇಲಾಖಾ ಅಧಿಕಾರಿಗಳು ಕರ್ನಾಟಕ, ನೀರಾವರಿ ನಿಗಮ, ತುಂಗಾ ಮೇಲ್ದಂಡೆ ಯೋಜನೆ ಮತ್ತು ಅರಣ್ಯ ಇಲಾಖಾ ಅಧಿಕಾರಿಗಳಿಂದ ಅಭಿಪ್ರಾಯ ಪಡೆದು ಅಗತ್ಯ ಕ್ರಮ ವಹಿಸಬೇಕು. ಇದರಿಂದಾಗಿ ಜಲಾಶಯದಲ್ಲಿ ನೀರಿನ ಸಂಗ್ರಹಣಾ ಸಾಮರ್ಥ್ಯ ಹೆಚ್ಚಳವಾಗಲಿದೆ ಎಂದರು.
ಸಾಗರದ ಪಂಚಾಯತ್ರಾಜ್ ಇಲಾಖೆಯ ಸುಪರ್ದಿಗೆ ವಹಿಸಿಕೊಡಲಾಗಿದ್ದ ಮರಳು ಗಣಿಗಳ ನಿರ್ವಹಣೆಯಲ್ಲಿ ನಿಯಮ ಉಲ್ಲಂಘನೆಯ ಆಗಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿರುವುದಾಗಿ ತಿಳಿಸಿದ ಅವರು, ಸರ್ಕಾರಿ ಯೋಜನೆಗಳಿಗಾಗಿ ಕಾಯ್ದಿರಿಸಿದ ಗಣಿಗಳನ್ನು ಉದ್ದೇಶಿತ ಸರ್ಕಾರದ ಆಶಯಗಳಿಗೆ ಪೂರಕವಾಗಿ ಕನಿಷ್ಠ ದರದಲ್ಲಿ ಮರಳು ವಿಲೇವಾರಿಯಾಗುವಂತೆ ನೋಡಿಕೊಳ್ಳಬೇಕು.
ಕಲ್ಲಗಂಗೂರು, ಗೆಜ್ಜೇನಹಳ್ಳಿ ವ್ಯಾಪ್ತಿಯಲ್ಲಿನ ಕ್ರಷರ್, ಗಣಿಗಾರಿಕೆಯಿಂದ ಪರಿಸರದ ಮೇಲಾಗಿರುವ ಪರಿಣಾಮಗಳ ಕುರಿತು ತಜ್ಞರಿಂದ ಅಧ್ಯಯನ ನಡೆಸಿ, ವರದಿ ನೀಡುವುದಕ್ಕೆ ಸಂಬಂಧಿಸಿದ 15 ಲಕ್ಷ ರೂ.ಗಳನ್ನು ಮಂಜೂರು ಮಾಡಿರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು.
ಅಕ್ರಮ ಗಣಿಗಾರಿಕೆ ಬಗ್ಗೆ ದೂರು
ತೀರ್ಥಹಳ್ಳಿ ತಾಲೂಕು ಮೇಲಿನ ಕುರುವಳ್ಳಿ ಹಾಗೂ ಬುಕ್ಲಾಪುರ ಗ್ರಾಮದ ವಿವಿಧ ಸರ್ವೇ ನಂಬರ್ಗಳಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ನಡೆಯುತ್ತಿದ್ದು, ಮೊಕದ್ದಮೆಗಳನ್ನು ದಾಖಲಿಸಿ, ಸಂಪರ್ಕ ರಸ್ತೆ ಕಡಿತಗೊಳಿಸಿದ ಹೊರತಾಗಿಯೂ ಪುನಹ ಸಂಪರ್ಕ ಕಲ್ಪಿಸಿಕೊಂಡು ಅಕ್ರಮ ಗಣಿಗಾರಿಕೆ ಮುಂದುವರೆಸಿರುವ ಬಗ್ಗೆ ದೂರುಗಳಿದ್ದು, ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರ ತಂಡ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಡಾ. ಎಚ್.ಟಿ. ಶೇಖರ್, ಉಪ ವಿಭಾಗ ಅಧಿಕಾರಿ ಟಿ.ವಿ.ಪ್ರಕಾಶ್, ಭೂ ವಿಜ್ಞಾನಿ ಚಂದ್ರಶೇಖರ್ ಹೊಸಮನಿ ಉಪಸ್ಥಿತರಿದ್ದರು.