ಸುದ್ದಿ ಕಣಜ.ಕಾಂ | DISTRICT | FLOOD
ಶಿವಮೊಗ್ಗ: ಪ್ರವಾಹ ಪೀಡಿತ ಪ್ರದೇಶದ ವ್ಯಾಪ್ತಿಗೆ ಜಿಲ್ಲೆಯ ಮೂರು ತಾಲೂಕುಗಳನ್ನು ಸೇರ್ಪಡೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಹೊಸನಗರ, ಭದ್ರಾವತಿ ಮತ್ತು ತೀರ್ಥಹಳ್ಳಿ ತಾಲೂಕುಗಳನ್ನು ಪ್ರವಾಹ ಪೀಡಿತ ಪಟ್ಟಿಗೆ ಸೇರಿಸಲಾಗಿದೆ. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿ ಆಧರಿಸಿ ಪ್ರವಾಹ ಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ.
ಜುಲೈ ತಿಂಗಳಲ್ಲಿ ಸುರಿದ ಭಾರೀ ಮಳೆಗೆ ಹಲವು ತಾಲೂಕುಗಳಲ್ಲಿ ಭಾರೀ ಹಾನಿ ಸಂಭವಿಸಿದೆ. ಆದರೆ, ರಾಜ್ಯ ಸರ್ಕಾರ ಈ ಹಿಂದೆ ಹೊರಡಿಸಿದ ಆದೇಶದಲ್ಲಿ ನಾಲ್ಕು ತಾಲೂಕುಗಳನ್ನು ಮಾತ್ರ ಬರ ಪೀಡಿತ ಪ್ರದೇಶ ಎಂದು ಘೋಷಿಸಿತ್ತು.
ಆಗಸ್ಟ್ 11ರಂದು ಹೊರಡಿಸಿದ ಆದೇಶದಲ್ಲಿ ಸಾಗರ, ಶಿಕಾರಿಪುರ, ಸೊರಬ ಮತ್ತು ಶಿವಮೊಗ್ಗ ತಾಲೂಕುಗಳನ್ನು ಪ್ರವಾಹ ಪೀಡಿತ ಎಂದು ಘೋಷಿಸಲಾಗಿತ್ತು.