ಸುದ್ದಿ ಕಣಜ.ಕಾಂ | KARNATAKA | RAILWAY
ಶಿವಮೊಗ್ಗ: ಶಿವಮೊಗ್ಗ-ಹರಿಹರ ರೈಲ್ವೆ ಮಾರ್ಗದ ಸರ್ವೇ ಕಾರ್ಯ ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿದರು.
https://www.suddikanaja.com/2020/11/23/railway-terminal-at-koteganguru-in-shivamogga/
ಜಿಲ್ಲೆಯಲ್ಲಿ ಕೈಗೊಂಡಿರುವ ವಿಮಾನ ನಿಲ್ದಾಣ, ಸಿಗಂದೂರು ಸೇತುವೆ, ವರ್ತುಲ ರಸ್ತೆ, ರೈಲ್ವೆ ಮೇಲ್ಸೇತುವೆ, ಪ್ರವಾಸಿ ತಾಣಗಳ ಅಭಿವೃದ್ಧಿ ಸೇರಿದಂತೆ ಪ್ರಮುಖ ಯೋಜನೆಗಳ ಪ್ರಗತಿ ಪರಿಶೀಲನೆ ಕುರಿತು ಜಿಲ್ಲಾಡಳಿತ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದರು.
ದಾವಣಗೆರೆ ಜಿಲ್ಲೆಯ 7 ಗ್ರಾಮಗಳು ಹಾಗೂ ಶಿವಮೊಗ್ಗ ಜಿಲ್ಲೆಯ 21 ಗ್ರಾಮಗಳ 543 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಸಂಬಂಧ ದಾವಣಗೆರೆ ಜಿಲ್ಲೆಯ 7 ಗ್ರಾಮಗಳ ಭೂಮಾಲೀಕರಿಗೆ ತಮ್ಮ ಜಮೀನಿಗೆ ದರ ನಿಗದಿಪಡಿಸಿದ್ದು, ಪರಿಹಾರ ಧನ ಮಂಜೂರು ಮಾಡುವಂತೆ ಕೆ.ಐ.ಎ.ಡಿ.ಬಿ. ಬೆಂಗಳೂರು ಇವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಕೋಟೆಗಂಗೂರಿನಲ್ಲಿ ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.
https://www.suddikanaja.com/2020/11/04/ranibennur-smg-railwa/
2023ರೊಳಗೆ ಕಾಮಗಾರಿ ಪೂರ್ಣ
ಸಿಗಂದೂರು ಸೇತುವೆ ನಿರ್ಮಾಣ ಕಾರ್ಯ 2023ರ ಮೇ ತಿಂಗಳೊಳಗೆ ಪೂರ್ಣಗೊಳ್ಳಬೇಕಾಗಿದ್ದು, ನಿರೀಕ್ಷೆಯಂತೆ ಕಾಮಗಾರಿಗಳು ನಡೆಯುತ್ತಿವೆ ಎಂದು ಕಾರ್ಯಪಾಲಕ ಅಭಿಯಂತರರು ಸಭೆಗೆ ಮಾಹಿತಿ ನೀಡಿದರು.
ಶಾಸಕ ಕುಮಾರ್ ಬಂಗಾರಪ್ಪ ಮಾತನಾಡಿ, ಕರಾವಳಿ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಸಿಗಂದೂರಿನಿಂದ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ರಸ್ತೆ ರಾಷ್ಟ್ರೀಯ ಹೆದ್ದಾರಿಗೆ ಮೇಲ್ದರ್ಜೆಗೇರಿಸಿ ರಸ್ತೆ ಅಭಿವೃಧ್ಧಿಪಡಿಸಲು ಹಾಗೂ ಈ ನಡುವಿನ ಅರಣ್ಯ ಭೂಮಿಯಲ್ಲಿ ಕಾಮಗಾರಿಗಳನ್ನು ನಡೆಸಲು ಅನುಕೂಲವಾಗುವಂತೆ ಅರಣ್ಯ ಇಲಾಖೆಯಿಂದ ನಿರಾಕ್ಷೇಪಣ ಪತ್ರ ಪಡೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಏಷ್ಯಾ ಖಂಡದಲ್ಲಿಯೇ ಮೊದಲ ಹಾಗೂ ಯಶಸ್ವಿಯಾದ ಮೂಡಿ ಏತ ನೀರಾವರಿ ಯೋಜನೆ. ಈ ಯೋಜನೆಯಿಂದಾಗಿ ಹೊಸೂರು, ತಾಳಗುಂದ ಹಾಗೂ ಉಡುಗುಣಿ ಹೋಬಳಿಯ 255 ಕೆರೆಗಳಿಗೆ ನೀರನ್ನು ತುಂಬಿಸಲಾಗಿದೆ. 1250 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಈ ಯೋಜನೆಯನ್ನು ಅತ್ಯಲ್ಪ ಅವಧಿಯಲ್ಲಿ ಅನುಷ್ಠಾನಕ್ಕೆ ತರಲಾಗಿದೆ ಎಂದರು.
ಸಭೆಯಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ, ಏತ ನೀರಾವರಿ ಯೋಜನೆಗಳು, ಪ್ರವಾಸಿ ತಾಣಗಳ ಅಭಿವೃಧ್ಧಿ, ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಮೇಲ್ಸೇತುವೆ, ವರ್ತುಲ ರಸ್ತೆ ಮುಂತಾದ ಯೋಜನೆಗಳ ಬಗ್ಗೆಯೂ ಸುದೀರ್ಘ ಚರ್ಚೆ ನಡೆಸಿ ಮಾಹಿತಿ ಪಡೆಯಲಾಯಿತು.
ಸಭೆಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ಹರತಾಳು ಹಾಲಪ್ಪ, ಕೆ.ಬಿ.ಅಶೋಕನಾಯ್ಕ್, ರುದ್ರೇಗೌಡರು, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್.ಹೊನ್ನಳ್ಳಿ, ಕೃಷಿ ಮತ್ತು ತೋಟಗಾರಿಕೆ ವಿವಿ. ಕುಲಪತಿ ಡಾ. ಎಂ.ಕೆ.ನಾಯಕ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
https://www.suddikanaja.com/2021/04/20/encroachment-in-suda-layout-at-urdgadur-instruction-to-clearance/