ಸುದ್ದಿ ಕಣಜ.ಕಾಂ | KARNATAKA | EDUCATION
ಶಿವಮೊಗ್ಗ: ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಗೆ ಒಂದು ಬಾರಿಗೆ ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶ ಕಲ್ಪಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಸಚಿವರ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರೊಂದಿಗೆ ನಡೆದ ಚರ್ಚೆ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘವು ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರನ್ನು ಒಂದು ಬಾರಿಗೆ ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶ ಕಲ್ಪಿಸುವಂತೆ ಕೋರಲಾಗಿದೆ. ಈ ಮೂಲಕ ದೀರ್ಘ ಕಾಲದ ಸಮಸ್ಯೆಯನ್ನು ಬಗೆಹರಿಸಿ, ಶಿಕ್ಷಕರು ಮುಕ್ತ ವಾತಾವರಣದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಅವಕಾಶ ಕಲ್ಪಿಸುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.
ಸಂಘದ ಮನವಿಗೆ ಸ್ಪಂದಿಸಿದ ಸಚಿವರು ಅಂತರ ಜಿಲ್ಲಾ ವರ್ಗಾವಣೆ ಬಯಸುವ ಶಿಕ್ಷಕರ ನಿಖರ ಹಾಗೂ ವಾಸ್ತವಾಂಶದ ಮಾಹಿತಿಯನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ಅದರಂತೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಿಂದ ಅಂತರ ಜಿಲ್ಲಾ ವರ್ಗಾವಣೆ ಬಯಸುವ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಂದ ಮಾಹಿತಿಯನ್ನು ಸಂಗ್ರಹಿಸಿ ಜಿಲ್ಲಾವಾರು ಕ್ರೋಡೀಕೃತ ನಿಖರ ಹಾಗೂ ವಾಸ್ತವಾಂಶದ ಅಂಕಿ-ಅಂಶಗಳ ಮಾಹಿತಿಯನ್ನು ಸಚಿವರಿಗೆ ಹಾಗೂ ಆಯುಕ್ತರಿಗೆ ಸಲ್ಲಿಸಲಾಗಿದೆ. ಮಾಹಿತಿ ಅನ್ವಯ ಒಂದು ಸಲಕ್ಕೆ ವರ್ಗಾವಣೆಗೊಳ್ಳುವ ಅವಕಾಶವನ್ನು ಕಲ್ಪಿಸಿ ಶಿಕ್ಷಕರ ದೀರ್ಘಕಾಲದ ಸಮಸ್ಯೆಯನ್ನು ಬಗೆಹರಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಂಘದ ವತಿಯಿಂದ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
https://www.suddikanaja.com/2021/01/29/not-to-be-confused-with-the-term-of-service-retirement-said-cs-shadakshari/