ಸುದ್ದಿ ಕಣಜ.ಕಾಂ | KARNTAKA | EDUCATION CORNER
ಶಿವಮೊಗ್ಗ: ರಾಜ್ಯದಲ್ಲಿ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ)ಯಲ್ಲಿ ಯಾವ ಗೊಂದಲಗಳೂ ಇಲ್ಲ. ಈಗಾಗಲೇ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ್ ಸ್ಪಷ್ಟಪಡಿಸಿದರು.
ನಗರದಲ್ಲಿ ಕಾರ್ಯಕ್ರಮವೊಂದಕ್ಕೆ ಬುಧವಾರ ಆಗಮಿಸಿದ್ದ ಸಚಿವರು ಮಾಧ್ಯಮದವರೊಂದಿಗೆ ಮಾತನಾಡಿದರು.
ಎನ್.ಇ.ಪಿ ಏಕಾಏಕಿ ಜಾರಿಗೆ ತಂದಿಲ್ಲ. ಇದಕ್ಕಾಗಿ ಕಳೆದ ಐದು ವರ್ಷಗಳಿಂದ ನಿರಂತರ ಸಮಾಲೋಚನೆ ಮಾಡಲಾಗಿದೆ. ಈ ಹಿಂದೆಯೇ ಉದ್ದೇಶಿಸಿದಂತೆ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದರು.
ಸ್ವಾಯತ್ತ ವಿವಿಗಳಲ್ಲಿ ತಯಾರಿ
ರಾಜ್ಯದಲ್ಲಿರುವ ಸ್ವಾಯತ್ತ ವಿಶ್ವವಿದ್ಯಾಲಯಗಳು ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿವೆ. ಅದೇ ರೀತಿ, ಶಿವಮೊಗ್ಗದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದಲ್ಲೂ ಈ ನಿಟ್ಟಿನಲ್ಲಿ ಬೋರ್ಡ್ ನಲ್ಲಿ ಒಪ್ಪಿಗೆ ಸೂಚಿಸಲಾಗಿದ್ದು, ಇದೇ 18ರಿಂದ ಕಾರ್ಯಪ್ರವೃತ್ತರಾಗುತಿದ್ದಾರೆ ಎಂದು ತಿಳಿಸಿದರು.