ಸುದ್ದಿ ಕಣಜ.ಕಾಂ | DISTRICT | HEALTH NEWS
ಶಿವಮೊಗ್ಗ: ಕೋವಿಡ್ ಮೂರನೇ ಅಲೆಯಲ್ಲಿ ಹಲವೆಡೆ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದರೂ, ಆತಂಕಪಡದೇ ಶಾಲಾ ಕಾಲೇಜುಗಳನ್ನು ಎಂದಿನಂತೆ ಮುಂದುವರಿಸುವುದು ಉತ್ತಮ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕೋವಿಡ್ ತಜ್ಞರ ಸಭೆಯಲ್ಲಿ ಗುರುವಾರ ತಜ್ಞ ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.
ತಜ್ಞ ವೈದ್ಯರು ನೀಡಿದ ಸಲಹೆಗಳಿವು
- ಮಕ್ಕಳಿಗೆ ಕೋವಿಡ್ ಪಾಸಿಟಿವ್ ಬಂದರೆ ಗಾಬರಿಗೊಳ್ಳುವ ಅಗತ್ಯವಿಲ್ಲ. ಮೂರನೇ ಅಲೆಯಲ್ಲಿ ಕೋವಿಡ್ ಮಕ್ಕಳ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ
- ಕೋವಿಡ್ ಪಾಸಿಟಿವ್ ಮಕ್ಕಳನ್ನು ಮನೆಯಲ್ಲಿಯೇ ಐಸೋಲೇಷನ್ ಮಾಡಿಸಿ ಶಾಲಾ ಕಾಲೇಜುಗಳನ್ನು ನಡೆಸುವುದು ಉತ್ತಮ.
- ಪ್ರತಿ ಶಾಲಾ ಕಾಲೇಜುಗಳಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು. ರೋಗ ಲಕ್ಷಣವಿರುವ ಮಕ್ಕಳನ್ನು ಮನೆಗೆ ಕಳುಹಿಸಿ ಅವರ ಆರೋಗ್ಯದ ಮೇಲೆ ನಿಗಾ ಇರಿಸಬೇಕು.
- ಅಂಕಿಅಂಶಗಳನ್ನು ಗಮನಿಸಿದರೆ ಕೋವಿಡ್ ಮೂರನೇ ಅಲೆಯಲ್ಲಿ ಪಾಸಿಟಿವ್ ಆಗಿ ಆಸ್ಪತ್ರೆಗೆ ದಾಖಲಾಗಿರುವವರ ಪ್ರಮಾಣ ಅತಿ ಕಡಿಮೆ ಇದೆ. ಪ್ರಸ್ತುತ ಜಿಲ್ಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ 63 ಜನರ ಪೈಕಿ ಇಬ್ಬರಿಗೆ ಮಾತ್ರ ಆಕ್ಸಿಜನ್ ಒದಗಿಸುವ ಅಗತ್ಯ ಬಿದ್ದಿದೆ.
- ಈಗಾಗಲೇ ಬೇರೆ ರೋಗಗಳನ್ನು ಹೊಂದಿರುವ ಕೋವಿಡ್ ಪಾಸಿಟಿವ್ ವ್ಯಕ್ತಿಗಳನ್ನು ಆಸ್ಪತ್ರೆಗೆ ದಾಖಲಿಸುವ ಅಗತ್ಯ ಬಿದ್ದಿದೆ. ಜಿಲ್ಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಿದರೆ ಬಹುತೇಕ ಮಂದಿಯನ್ನು ಆಸ್ಪತ್ರೆಯ ಬದಲಿಗೆ ಅಲ್ಲಿಗೆ ಸೇರಿಸಬಹುದಾಗಿದೆ.
ಸಭೆಯಲ್ಲಿ ಮಕ್ಕಳ ತಜ್ಞರಾದ ಡಾ.ಧನಂಜಯ್ ಸರ್ಜಿ, ಡಾ.ಶ್ರೀಕಾಂತ್ ಹೆಗ್ಡೆ, ಡಾ.ಮಲ್ಲಿಕಾರ್ಜುನ್ ಕೊಪ್ಪದ್, ಡಾ.ಪಾಟೀಲ್, ಡಾ.ಸತೀಶ್ಚಂದ್ರ, ಡಾ.ನಾಗರಾಜ್ ನಾಯಕ್, ಡಾ.ಮಲ್ಲಪ್ಪ, ಸಿಮ್ಸ್ ನಿರ್ದೇಶಕ ಡಾ. ಸಿದ್ದಪ್ಪ, ಡಾ.ಕಿರಣ್ ಸೇರಿದಂತೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
https://www.suddikanaja.com/2021/06/02/covid-third-wave-may-hit-children-preparation-made-in-shivamogga/