ಸುದ್ದಿ ಕಣಜ.ಕಾಂ | DISTRICT | WESTERN GHAT
ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ (Karnataka state Western Ghats Task Force) ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಅವರು, ಕಾರ್ಯಪಡೆ ಕಾರ್ಯಕ್ರಮಗಳ ಅನುಷ್ಠಾನ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯನ್ನು ಸೋಮವಾರ ನಡೆಸಿದರು.
READ | ಶಿವಮೊಗ್ಗ ಜಿಲ್ಲೆಯಾದ್ಯಂತ ರಾತ್ರಿಯಿಡೀ ಭಾರಿ ಮಳೆ, ಜನಜೀವನ ಅಸ್ತವ್ಯಸ್ತ, ಯೆಲ್ಲೋ ಅಲರ್ಟ್ ಮುನ್ಸೂಚನೆ
ನೀಡಿದ ಸೂಚನೆಗಳೇನು?
- ಅರಣ್ಯ ಒತ್ತುವರಿ ತೆರವು ಪ್ರಕರಣಗಳಲ್ಲಿ ನ್ಯಾಯಾಲಯದ ಆದೇಶಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು
- ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಸೇರಿದಂತೆ ಅಕ್ರಮ ಚಟುವಟಿಕೆಗಳನ್ನು ತಡೆಯುವ ನಿಟ್ಟಿನಲ್ಲಿ ಕಾರ್ಯಪಡೆ ಕಾರ್ಯನಿರ್ವಹಿಸುತ್ತಿದೆ. ಅರಣ್ಯ ಸಂರಕ್ಷಣೆ ಕುರಿತಾಗಿ ಅರಿವು ಮೂಡಿಸಲು ಗ್ರಾಮ ಅರಣ್ಯ ಸಮಿತಿಗಳನ್ನು ಇನ್ನಷ್ಟು ಸಕ್ರಿಯಗೊಳಿಸಬೇಕು.
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಮೂಡಿದರೆ ಮಾತ್ರ ಅರಣ್ಯ ಸಂರಕ್ಷಣೆ ಪರಿಣಾಮಕಾರಿಯಾಗಿ ಮಾಡಲು ಸಾಧ್ಯ
- ಅರಣ್ಯ ಇಲಾಖೆಯಿಂದ ಗಿಡಗಳನ್ನು ನೆಟ್ಟು ಬೆಳೆಸದಿದ್ದರೆ ಪ್ರಯೋಜನ ಶೂನ್ಯ. ಸಮುದಾಯದ ಸಹಭಾಗಿತ್ವದಲ್ಲಿ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ.
- ಆದಿವಾಸಿಗಳ ಹಾಡಿಗಳಲ್ಲಿ ವಿದ್ಯುತ್ ಸಂಪರ್ಕ ಸೇರಿದಂತೆ ಮೂಲಸೌಲಭ್ಯಗಳನ್ನು ಒದಗಿಸುವ ಕಾರ್ಯ ಮಾಡಬೇಕು. ಕಾವಾಡಿಗರು ಸೇವಾ ಭದ್ರತೆ ಒದಗಿಸುವ ಕುರಿತು ಮನವಿಯನ್ನು ನೀಡಿದ್ದು, ಈ ಕುರಿತು ಪರಿಶೀಲಿಸಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು.
ಯಾವ ತಾಲೂಕಿನಲ್ಲಿ ಎಷ್ಟು ಅರ್ಜಿ ಬಾಕಿ?
ಒತ್ತುವರಿಗೆ ಸಂಬಂಧಿಸಿದಂತೆ ಶಿವಮೊಗ್ಗ ವಲಯದಲ್ಲಿ 12,700 ಪ್ರಕರಣಗಳಿದ್ದು 12,300 ಎಕರೆ ಅರಣ್ಯ ಪ್ರದೇಶ ಒತ್ತುವರಿಯಾಗಿದೆ. ಭದ್ರಾವತಿ ವಲಯದಲ್ಲಿ 972 ಪ್ರಕರಣಗಳಿದ್ದು 18,049 ಎಕರೆ ಒತ್ತುವರಿಯಾಗಿದೆ. ಒತ್ತುವರಿ ತೆರವು ಪ್ರಕರಣಗಳಲ್ಲಿ ನ್ಯಾಯಾಲಯದ ಯಾವುದೇ ಆದೇಶ ಅನುಷ್ಠಾನಕ್ಕೆ ಜಿಲ್ಲೆಯಲ್ಲಿ ಬಾಕಿಯಿರುವುದಿಲ್ಲ. ಅರಣ್ಯ ಹಕ್ಕುಗಳಿಗಾಗಿ ಒಟ್ಟು 97,085 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 2,444 ಪ್ರಕರಣಗಳಲ್ಲಿ 3,127 ಎಕರೆ ಜಮೀನಿಗೆ ಹಕ್ಕುಪತ್ರ ನೀಡಲಾಗಿದೆ. ಇನ್ನು 42,422 ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತಿದೆ.
READ | ಡಿಸಿ ಗ್ರಾಮ ವಾಸ್ತವ್ಯಕ್ಕೆ ಡೇಟ್ ಫಿಕ್ಸ್, ಯಾವ ಹಳ್ಳಿಯ ಕಡೆ ಡಿಸಿ ನಡೆ?
ಶೇ.90ರಷ್ಟು ಜಮೀನು ಸರ್ವೇ ಕಾರ್ಯ ಪೂರ್ಣ
ಶಿವಮೊಗ್ಗ ಜಿಲ್ಲೆಯಲ್ಲಿ ಅರಣ್ಯ ಇಲಾಖೆಗೆ ಒಳಪಟ್ಟ ಶೇ.90ರಷ್ಟು ಜಮೀನು ಸರ್ವೇ ಕಾರ್ಯ ಪೂರ್ಣಗೊಂಡಿದೆ. ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ನಡುವೆ ಜಮೀನು ಕುರಿತು ಗೊಂದಲ ಇರುವುದಿಲ್ಲ. ಪಹಣಿ ಇಂಡೀಕರಣ ಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಹೇಳಿದರು.
ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ, ಶಿವಮೊಗ್ಗ ವಲಯ ಡಿಎಫ್ಒ ಶಂಕರ್ ಇತರರು ಉಪಸ್ಥಿತರಿದ್ದರು.