ಸುದ್ದಿ ಕಣಜ.ಕಾಂ | DISTRICT | FLOOD MEETING
ಶಿವಮೊಗ್ಗ: ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಅತಿವೃಷ್ಟಿ ಹಾನಿ ಕುರಿತಾದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಮಳೆ ಹಾನಿಯ ಬಗ್ಗೆ ಪೂರ್ಣ ಮಾಹಿತಿ ಪಡೆದು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
READ | ಭದ್ರಾವತಿ ಪೊಲೀಸರ ಕಾರ್ಯಾಚರಣೆ, ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಅರೆಸ್ಟ್
ಸೆಲ್ವಕುಮಾರ್ ನೀಡಿದ ಸೂಚನೆಗಳೇನು?
- ಇತ್ತೀಚೆಗೆ ಅತಿವೃಷ್ಟಿಯಿಂದಾಗಿ ಉಂಟಾಗಿರುವ ಅನಾಹುತಗಳು ಮುಂಬರುವ ಮಳೆಗಾಲದಲ್ಲಿ ಮರುಕಳಿಸದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತಕ್ಷಣದಿಂದಲೇ ಕೈಗೊಳ್ಳಬೇಕು.
- ಶಿವಮೊಗ್ಗ ನಗರದಲ್ಲಿ ಕಾಲುವೆಗಳು, ಚರಂಡಿಗಳಲ್ಲಿ ತುಂಬಿರುವ ಹೂಳನ್ನು ಸಂಪೂರ್ಣವಾಗಿ ತೆರವುಗೊಳಿಸಬೇಕು. ಇದೇ ರೀತಿ ನೀರು ಸರಾಗವಾಗಿ ಹರಿದುಹೋಗಲು ಅಡ್ಡಿಯಾಗುವ ಅಡೆತಡೆಗಳನ್ನು ನಿವಾರಿಸಬೇಕು.
- ಇತ್ತೀಚಿನ ಅತಿವೃಷ್ಟಿಯಿಂದ ಮತ್ತೆ ಚರಂಡಿಗಳಲ್ಲಿ ಕಸ ಕಡ್ಡಿಗಳು ತುಂಬಿರುವ ಸಾಧ್ಯತೆಯಿದ್ದು, ಆದಷ್ಟು ಬೇಗನೇ ತೆರವುಗೊಳಿಸಬೇಕು.
- ನಗರದಲ್ಲಿ ನೆರೆ ಪರಿಸ್ಥಿತಿಯನ್ನು ಎದುರಿಸಲು ವಾರ್ಡ್ ವಾರು ಕ್ರಿಯಾ ಯೋಜನೆ ಸಿದ್ಧಪಡಿಸಬೇಕು. ಕಾಲುವೆ ಪ್ರದೇಶ ಒತ್ತುವರಿಯಾಗಿದ್ದರೆ ತೆರವುಗೊಳಿಸಬೇಕು
- ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆ ಹಾನಿ ಹಾಗೂ ಕಟಾವು ನಂತರ ಹಾನಿಗೀಡಾಗಿರುವ ಬೆಳೆಗಳಿಗೆ ಎನ್.ಡಿಆರ್.ಎಫ್ ಮಾರ್ಗಸೂಚಿ ಪ್ರಕಾರ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು.
- ಇತ್ತೀಚಿಗೆ ಹಾನಿಗೀಡಾಗಿರುವ ಎಲ್ಲ ಕೆರೆಗಳ ದುರಸ್ತಿ ಕಾರ್ಯವನ್ನು ಕೈಗೊಳ್ಳಬೇಕು. ಇದೇ ರೀತಿ ಎಲ್ಲ ಕೆರೆಗಳನ್ನು ಪರಿಶೀಲಿಸಿ, ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು.
ನಾಲ್ಕು ಸಾವಿರ ಮನೆಗಳಿಗೆ ನುಗ್ಗಿದ ನೀರು, ಪರಿಹಾರಕ್ಕೆ ಕ್ರಮ
ನಗರದಲ್ಲಿ ಹಾದು ಹೋಗಿರುವ ತುಂಗಾ ಚಾನೆಲ್ನಲ್ಲಿ ತುಂಬಿರುವ ಹೂಳನ್ನು ತೆರವುಗೊಳಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ನಗರದಲ್ಲಿ ಸುಮಾರು 4 ಸಾವಿರ ಮನೆಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿದ್ದು, ಎನ್.ಡಿಆರ್.ಎಫ್ ಮಾರ್ಗಸೂಚಿ ಪ್ರಕಾರ ಪರಿಹಾರ ಒದಗಿಸಲು ಚಾಲನೆ ನೀಡಲಾಗಿದೆ. ಬೆಳೆ ಹಾನಿ ಕುರಿತು ಈಗಾಗಲೇ ಸರ್ವೇ ಕಾರ್ಯ ನಡೆಸಲಾಗಿದ್ದು, ಪರಿಹಾರವನ್ನು ಆದಷ್ಟು ಬೇಗನೇ ವಿತರಿಸಲಾಗುವುದು. ಮಾನವ ಪ್ರಾಣ ಹಾನಿ ಹಾಗೂ ಜಾನುವಾರು ಪ್ರಾಣ ಹಾನಿ ಪ್ರಕರಣಗಳಲ್ಲಿ ಪರಿಹಾರವನ್ನು ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದರು
ಮಳೆಯಿಂದ ತೊಂದರೆಗೊಳಗಾಗಬಹುದಾದ 93 ಗ್ರಾಮ ಪಂಚಾಯಿತಿಗಳನ್ನು ಗುರುತಿಸಲಾಗಿದ್ದು, ಪ್ರತ್ಯೇಕ ಕ್ರಿಯಾ ಯೋಜನೆ ರೂಪಿಸಲಾಗಿದೆ. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಎಲ್ಲಾ ಕೆರೆಗಳನ್ನು ಪರಿಶೀಲಿಸಲು ಹಾಗೂ ಮೆಶ್ ಅಳವಡಿಸಿ ಮೀನುಗಾರಿಕೆ ನಡೆಸುವ ಮೂಲಕ ಕೆರೆಗಳಿಗೆ ಹಾನಿಯಾಗುವುದನ್ನು ತಪ್ಪಿಸಲು ಸೂಚನೆ ನೀಡಲಾಗಿದೆ.
ಎಂ.ಎಲ್. ವೈಶಾಲಿ, ಮುಖ್ಯ ಕಾರ್ಯರ್ನಿಹಣಾಧಿಕಾರಿ, ಜಿಲ್ಲಾ ಪಂಚಾಯಿತಿ, ಶಿವಮೊಗ್ಗ
ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಅವರು, ನಗರದಲ್ಲಿ ನೆರೆ ಪರಿಸ್ಥಿತಿಯನ್ನು ಎದುರಿಸಲು ಕೈಗೊಳ್ಳಲಾಗಿರುವ ಕ್ರಿಯಾ ಯೋಜನೆಗಳ ಮಾಹಿತಿಯನ್ನು ನೀಡಿದರು. ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ ಸೇರಿದಂತೆ ಎಲ್ಲಾ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.