ಸುದ್ದಿ ಕಣಜ.ಕಾಂ | DISTRICT | POLITICAL NEWS
ಶಿವಮೊಗ್ಗ: ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಮೂಡಿಸಲು ಮೇ 10ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಬೃಹತ್ ಪ್ರತಿಭಟನಾ ರ್ಯಾಲಿ ಹಾಗೂ ಬಹಿರಂಗ ಸಭೆ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಹೇಳಿದರು.
ಮಾಧ್ಯಮಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜಾಗೃತಿ ಮೂಡಿಸಲು ಈಗಾಗಲೇ ಕೆಪಿಸಿಸಿಯಿಂದ 9 ತಂಡಗಳನ್ನು ರಚಿಸಿ, ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದ್ದು, ಕೊನೆಯದಾಗಿ ಶಿವಮೊಗ್ಗದಲ್ಲಿ ರ್ಯಾಲಿ ನಡೆಸಲಾಗುತ್ತಿದೆ ಎಂದರು.
ಮೇ 10ರಂದು ಬೆಳಗ್ಗೆ 11 ಗಂಟೆಗೆ ಅಶೋಕ ವೃತ್ತದಿಂದ ಪ್ರತಿಭಟನಾ ರ್ಯಾಲಿ ಹೊರಟು ಬಿ.ಎಚ್.ರಸ್ತೆ, ನೆಹರೂ ರಸ್ತೆ, ಗೋಪಿ ವೃತ್ತದ ಮೂಲಕ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಭೋವಿ ಸಮುದಾಯ ಭವನ ತಲುಪಲಿದೆ. ನಂತರ ಅಲ್ಲಿ ಬಹಿರಂಗ ಸಭೆ ನಡೆಯಲಿದ್ದು, ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ ಎಂದರು.
ರಾಜ್ಯದಲ್ಲಿ ಬೂತ್ ಮಟ್ಟದಲ್ಲಿ ಸಂಘಟನೆ
ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಬೂತ್ ಮಟ್ಟದಿಂದ ಸಂಘಟಿಸಲಾಗುತ್ತಿದೆ. ರಾಜ್ಯದಲ್ಲಿ 75 ಲಕ್ಷ ಸದಸ್ಯತ್ವ ನೋಂದಣಿಯಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ 1.58 ಲಕ್ಷ ಸದಸ್ಯರು ನೋಂದಣಿಯಾಗಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಮಾಜಿ ಶಾಸಕರಾದ ಆರ್. ಪ್ರಸನ್ನಕುಮಾರ್, ಬೇಳೂರು ಗೋಪಾಲಕೃಷ್ಣ, ಪ್ರಮುಖರಾದ ಆರ್.ಎಂ. ಮಂಜುನಾಥಗೌಡ, ಶಾಂತವೀರಪ್ಪಗೌಡ, ಇಸ್ಮಾಯಿಲ್ ಖಾನ್, ಬಲದೇವ ಕೃಷ್ಣ, ಡಾ. ಶ್ರೀನಿವಾಸ್ ಕರಿಯಣ್ಣ, ಎಸ್.ಪಿ. ಶೇಷಾದ್ರಿ, ಸಿ.ಎಸ್. ಚಂದ್ರಭೂಪಾಲ್, ವಿಶ್ವನಾಥ್ ಕಾಶಿ, ಕಲಗೋಡು ರತ್ನಾಕರ್, ವಿಜಯಲಕ್ಷ್ಮಿ ಪಾಟೀಲ್, ಎಂ.ಚಂದನ್, ವೈ.ಎಚ್. ನಾಗರಾಜ್. ಎಚ್.ಪಿ. ಗಿರೀಶ್ ಉಪಸ್ಥಿತರಿದ್ದರು.