ಸುದ್ದಿ ಕಣಜ.ಕಾಂ | DISTRICT | NSUI PROTEST
ಶಿವಮೊಗ್ಗ: ಶಿಕ್ಷಣ ಸಚಿವರನ್ನು ಕೂಡಲೇ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿ ಜಿಲ್ಲಾ ಎನ್.ಎಸ್.ಯು.ಐ(NATIONAL STUDENTS’ UNION OF INDIA) ವತಿಯಿಂದ ಶನಿವಾರ ಪ್ರತಿಭಟನೆ ಮಾಡಲಾಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಪಠ್ಯಪುಸ್ತಕವನ್ನು ಕೇಸರೀಕರಣಗೊಳಿಸುತ್ತಾ ವಿದ್ಯಾರ್ಥಿಗಳಲ್ಲಿ ಕೋಮು ದ್ವೇಷ ಭಾವನೆ ಬಿತ್ತುತ್ತಿದೆ. ಅದಕ್ಕಾಗಿ ರೋಹಿತ್ ಚಕ್ರತೀರ್ಥ ಅಂತಹವರನ್ನು ಪಠ್ಯಪುಸ್ತಕ ರಚನಾ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
READ | ಸಿಇಟಿ ಪರೀಕ್ಷೆ ಎದುರಿಸುವುದಕ್ಕೆ ಅಳುಕು ಇದೆಯೇ, ಹಾಗಾದರೆ, ಈ ಕಾರ್ಯಾಗಾರಕ್ಕೆ ಹಾಜರಾಗಿ
ರಾಷ್ಟ್ರಕವಿ, ಯುಗದ ಕವಿ ಎಂದು ಹೆಸರಾಗಿರುವ ಕುವೆಂಪು ಅವರಂತಹ ಮಹಾನ್ ವ್ಯಕ್ತಿಗಳ ಕೊಡುಗೆಯಾದ ನಾಡಗೀತೆಗೆ ಅವಮಾನ ಮಾಡುವ ಕೆಲಸ ಮಾಡಲಾಗಿದೆ. ಇಂತಹ ವ್ಯಕ್ತಿಯನ್ನು ಸಮಿತಿಯ ಅಧ್ಯಕ್ಷರಾಗಿ ನೇಮಕ ಮಾಡಿ ಅವನಿಂದ ಪಠ್ಯಪುಸ್ತಕ ರಚನೆ ಮಾಡಿಸಿ ವಿದ್ಯಾರ್ಥಿಗಳ ದಿಕ್ಕು ತಪ್ಪಿಸುತ್ತಿರುವ ಶಿಕ್ಷಣ ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು. ರೋಹಿತ್ ಚಕ್ರತೀರ್ಥನನ್ನು ಅಮಾನತುಗೊಳಿಸಿ ಕೇಸು ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.
ಪಠ್ಯಪುಸ್ತಕ ಕೇಸರೀಕರಣಗೊಳಿಸುತ್ತಿರುವ ಕ್ರಮ ಖಂಡಿಸಿ ಶಿಕ್ಷಣ ಸಚಿವರ ಮನೆ ಮುಂದೆ ಪ್ರತಿಭಟನೆ ನಡಸುತ್ತಿದ್ದ ಎನ್.ಎಸ್.ಯು.ಐ. ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಸೇರಿ 20 ಜನ ಕಾರ್ಯಕರ್ತರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ ಜೈಲಿಗಟ್ಟುವ ಮೂಲಕ ರಾಜ್ಯ ಸರ್ಕಾರ ಅಧಿಕಾರದ ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಇದನ್ನು ತೀವ್ರವಾಗಿ ಖಂಡಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಕೂಡಲೇ ಎನ್.ಎಸ್.ಯು.ಐ. ಕಾರ್ಯಕರ್ತರ ಮೇಲೆ ದಾಖಲಿಸಿರುವ ಸುಳ್ಳು ಮೊಕದ್ದಮೆಯನ್ನು ವಜಾಗೊಳಿಸಿ, ಬಿಡುಗಡೆಗೊಳಿಸಬೇಕು. ಇಲ್ಲವಾದಲ್ಲಿ ರಾಜ್ಯದಾದ್ಯಂತ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆಯಲ್ಲಿ ಚರಣ, ಹರ್ಷಿತ್, ವಿಜಯ ಕುಮಾರ್, ರವಿ ಕಾಟಿಕೆರೆ, ಚಂದ್ರೋಜಿರಾವ್, ಪ್ರಮೋದ್, ಆಕಾಶ್, ಅಭಿ, ತೌಫಿಕ್, ಉಲ್ಲಾಸ್, ಸೂರಜ್, ಶಾಬಾಸ್ ಇತರರಿದ್ದರು.