ಸುದ್ದಿ ಕಣಜ.ಕಾಂ | DISTRICT | KDP MEETING
ಶಿವಮೊಗ್ಗ: ಶಿವಮೊಗ್ಗ-ಭದ್ರಾವತಿ ರಸ್ತೆ ಹಲವೆಡೆ ಮಳೆಯಿಂದಾಗಿ ಹಾನಿಗೀಡಾಗಿದ್ದು, ದುರಸ್ತಿ ಕಾರ್ಯ ಹಾಗೂ ರಸ್ತೆಯ ಇಕ್ಕೆಲೆಗಳಲ್ಲಿ ಸ್ವಚ್ಛತಾ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ವತಿಯಿಂದ ಕೈಗೊಳ್ಳಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ (BY Raghavendra) ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ತ್ರೈಮಾಸಿಕ ಕೆಡಿಪಿ ಸಭೆ (KDP Meeting) ಯಲ್ಲಿ ಮಾತನಾಡಿದರು.
ತುಮಕೂರು-ಶಿವಮೊಗ್ಗ ಚತುಷ್ಪಥ ರಸ್ತೆ ಕಾಮಗಾರಿ ತ್ವರಿತಗೊಳಿಸಲು ಇರುವ ಎಲ್ಲ ಅಡೆತಡೆಗಳನ್ನು ನಿವಾರಿಸಬೇಕು. ಶಿವಮೊಗ್ಗ-ಭದ್ರಾವತಿ ರಸ್ತೆಯಲ್ಲಿರುವ ಅವೈಜ್ಞಾನಿಕ ರಸ್ತೆ ಉಬ್ಬುಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಸೂಚನೆ ನೀಡಿದರು.
READ | ರೈತರಿಗೆ ಶುಭ ಸುದ್ದಿ, ರೈತ ಶಕ್ತಿ ಯೋಜನೆ ಅಡಿ 1200 ರೂ.ವರೆಗೆ ಸಬ್ಸಿಡಿ, ಯಾರೆಲ್ಲ ಅರ್ಹರು?
ಯಾರು ಏನು ಹೇಳಿದರು?
- ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಮಾತನಾಡಿ, ಜಿಲ್ಲೆಯಲ್ಲಿ ಇತ್ತೀಚೆಗೆ ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ಸೂಕ್ತ ಪರಿಹಾರವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
- ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಮಾತನಾಡಿ, ಅತಿವೃಷ್ಟಿಯಿಂದ ಸಂಭವಿಸಿದ ಎಲ್ಲ ಮಾನವ ಪ್ರಾಣ ಹಾನಿ ಹಾಗೂ ಜಾನುವಾರು ಪ್ರಾಣ ಹಾನಿಗೆ ಈಗಾಗಲೇ ಪರಿಹಾರ ಒದಗಿಸಲಾಗಿದೆ. ನೆರೆ ನೀರು ಮನೆಗೆ ನುಗ್ಗಿ ನಾಶನಷ್ಟ ಸಂಭವಿಸಿದ ಎಲ್ಲ ಪ್ರಕರಣಗಳಲ್ಲಿ 10 ಸಾವಿರ ರೂಪಾಯಿ ಪರಿಹಾರ ಒದಗಿಸಲಾಗಿದೆ. ಬೆಳೆ ಹಾನಿ ಹಾಗೂ ಮನೆ ಹಾನಿ ಪ್ರಕರಣಗಳಲ್ಲಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
- ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಾತನಾಡಿ, ಕಳೆದ ಬಾರಿ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಬಂದಾಗ ರೈತರಿಗೆ ಪರಿಹಾರ ಒದಗಿಸಲಾಗಿದ್ದು, ಈ ಬಾರಿ ಸಹ ಅದೇ ರೀತಿ ಪರಿಹಾರ ಒದಗಿಸಲು ಪ್ರಸ್ತಾವನೆ ಸಲ್ಲಿಸಬೇಕು. ಜಿಲ್ಲೆಯಲ್ಲಿ ಫೈಬರ್ ದೋಟಿಗೆ ಹೆಚ್ಚಿನ ಬೇಡಿಕೆಯಿದ್ದು, ಸಬ್ಸಿಡಿಯನ್ನು ಆದ್ಯತೆ ಮೇರೆಗೆ ಒದಗಿಸಬೇಕು.
ಮರ ಕಡಿದಿದ್ದಕ್ಕೆ ಕ್ರಿಮಿನಲ್’ನಂತೆ ವರ್ತನೆ!
ಸಾಗರ ತಾಲೂಕಿನಲ್ಲಿ ರಸ್ತೆ ಮೇಲೆ ಬಿದ್ದಿದ್ದ ಮರವನ್ನು ಕಡಿದ ರೈತನನ್ನು ದೊಡ್ಡ ಅಪರಾಧಿ ಎಂಬಂತೆ ಸ್ಲೇಟ್ ಹಿಡಿಸಿ ಮೊಕದ್ದಮೆ ದಾಖಲಿಸಿರುವ ಅರಣ್ಯ ಇಲಾಖೆ ಅಧಿಕಾರಿ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಹರತಾಳು ಹಾಲಪ್ಪ ಅವರ ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಡಾ.ನಾರಾಯಣಗೌಡ, ‘ಮರ ಕಡಿದ ರೈತನನ್ನು ಕ್ರಿಮಿನಲ್ ಎಂಬಂತೆ ವರ್ತಿಸಿ ಕೇಸು ದಾಖಲಿಸಿದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಿಸಿಎಫ್ ಅವರಿಗೆ ಸೂಚನೆ ನೀಡಿದರು.
READ | ಬಾಲ್ಯ ವಿವಾಹಕ್ಕೆ ಸಹಕರಿಸಿದ ಪ್ರಿಂಟರ್, ಪೂಜಾರಿ ಆದಿಯಾಗಿ ಎಲ್ಲರ ಮೇಲೂ ಬೀಳಲಿದೆ ಕೇಸ್
262 ಗ್ರಾಪಂಗಳಿಗೆ ಸ್ವಚ್ಛ ಸಂಕೀರ್ಣ ಘಟಕಕ್ಕೆ ಅನುದಾನ
ಗ್ರಾಮೀಣ ಭಾಗದಲ್ಲಿ ಘನತ್ಯಾಜ್ಯ ವಿಲೇವಾರಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಬೇಕು ಎಂದು ಸಚಿವ ಆರಗ ಜ್ಞಾನೇಂದ್ರ ಅವರು ಸೂಚನೆ ನೀಡಿದರು. ಜಿಲ್ಲೆಯ ಎಲ್ಲ 262 ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕಕ್ಕೆ ಅನುದಾನ ಮಂಜೂರು ಮಾಡಲಾಗಿದ್ದು, 127 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಈಗಾಗಲೇ 179 ಘಟಕಗಳನ್ನು ನಿರ್ಮಿಸಲಾಗಿದೆ. ಈ ಪಂಚಾಯಿತಿಗಳು ಸಂಗ್ರಹಿಸುವ ಕಸದಿಂದ ಪಡೆಯುವ ಆದಾಯವನ್ನು ಯೋಜನೆಯ ಯಶಸ್ವಿಯ ಮಾನದಂಡವಾಗಿ ಪರಿಗಣಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ತಿಳಿಸಿದರು.
ಶಾಸಕರಾದ ರುದ್ರೇಗೌಡ, ಕುಮಾರ ಬಂಗಾರಪ್ಪ, ಕೆ.ಬಿ.ಅಶೋಕ್ ನಾಯ್ಕ್, ಡಿ.ಎಸ್.ಅರುಣ್, ಹರತಾಳು ಹಾಲಪ್ಪ, ಎಸ್.ಪಿ. ಬಿ.ಎಂ.ಲಕ್ಷ್ಮೀಪ್ರಸಾದ್, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
https://suddikanaja.com/2022/02/27/mescom-warning-to-remove-unauthorized-pump-sets-in-shivamogga/