ಸುದ್ದಿ ಕಣಜ.ಕಾಂ| DISTRICT | 27 AUG 2022
ಶಿವಮೊಗ್ಗ: ಜಿಲ್ಲೆಯಲ್ಲಿ ಗಣಪತಿ ಮೆರವಣಿಗೆ ವೇಳೆ ಅನ್ಯಕೋಮಿನವರ ವಿರುದ್ಧ ಘೋಷಣೆಗಳನ್ನು ಕೂಗಿದರೆ ಹುಷಾರ್! ಕಾರಣ, ಅಂತಹವರ ಮೇಲೆ ಎಫ್.ಐ.ಆರ್ ದಾಖಲಾಗಲಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ‘ಹಬ್ಬವನ್ನು ಎಲ್ಲರೂ ಯಾವ ಭಯವಿಲ್ಲದೇ ಆಚರಿಸಿ. ನಿಷೇಧಾಜ್ಞೆ ಬಗ್ಗೆ ಆತಂಕವೂ ಬೇಡ. ಎಲ್ಲರೂ ಶಾಂತಿ ಮತ್ತು ಸೌಹಾರ್ದತೆಯಿಂದ ಇರಬೇಕು’ ಎಂದು ಸಲಹೆ ನೀಡಿದರು.
ಗೌರಿಗಣೇಶ ಹಬ್ಬದ ಹಿನ್ನೆಲೆಯಲ್ಲಿ ಧಾರ್ಮಿಕ ಮುಖಂಡರುಗಳೊಂದಿಗೆ ಈಗಾಗಲೇ ಜಿಲ್ಲೆಯ ವಿವಿಧಡೆ ಸಭೆ ನಡೆಸಿ ಚರ್ಚಿಸಿದ್ದೇವೆ. ಆಗಸ್ಟ್ 31 ರಂದು ಹಬ್ಬಕ್ಕೆ ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಹಾಗೂ ಸಿದ್ಧತೆ ಕೈಗೊಳ್ಳಲಾಗಿದೆ. ಹೆಚ್ಚಿನ ಸಿಸಿಟಿವಿಗಳನ್ನು ಅಳವಡಿಸುವಂತೆ ಹಾಗೂ ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ಸಿಸಿಟಿವಿ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದ್ದು, ಈ ನಿಟ್ಟಿನಲ್ಲಿ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಎಲ್ಲ ಕಡೆ ವಿಡಿಯೋ ರೆಕಾರ್ಡ್ ಮಾಡಲು ಸಿದ್ಧತೆ ನಡೆಸಲಾಗಿದೆ.
| ಡಾ.ಆರ್. ಸೆಲ್ವಮಣಿ, ಜಿಲ್ಲಾಧಿಕಾರಿ
ಎಸ್.ಪಿ ನೀಡಿದ ಸೂಚನೆಗಳಿವು
- ಬಂಟಿಂಗ್ಸ್ ಪೈಪೋಟಿ ಬೇಡ | ಒಂದೇ ಸ್ಥಳದಲ್ಲಿ ಫ್ಲೆಕ್ಸ್ ಬ್ಯಾನರ್ ಬಂಟಿಂಗ್ಸ್ ಅಳವಡಿಸುವ ವಿಚಾರಕ್ಕೆ ಯಾವುದೇ ಪೈಪೋಟಿ ಬೇಡ. ಪೊಲೀಸರ ಸಲಹೆ ಸೂಚನೆಗಳನ್ನು ಯುವಕರು ಪಾಲಿಸಬೇಕು.
- ಮೆರವಣಿಗೆಯ ಸಂಪೂರ್ಣ ವಿಡಿಯೋಗ್ರಾಫಿ | ಕಿಡಿಗೇಡಿಗಳು ಭಿನ್ನಾಭಿಪ್ರಾಯ, ಗಲಾಟೆಯಂತಹ ಸಂದರ್ಭಗಳಿಗಾಗಿ ಕಾಯುತ್ತಿರುತ್ತಾರೆ. ಗಲಭೆ ಸೃಷ್ಟಿಗೆ ಯತ್ನಿಸುತ್ತಾರೆ. ಹೀಗಾಗಿ ಗಣಪತಿ ಮೆರವಣಿಗೆ ಸಂದರ್ಭದಲ್ಲಿ ಸಂಪೂರ್ಣ ವಿಡಿಯೋಗ್ರಾಫಿ ಮಾಡಲಾಗುವುದು.
- ರಾಜಬೀದಿ ಉತ್ಸವಕ್ಕೆ ಬಂದೋಬಸ್ತ್ | ಸೆಪ್ಟೆಂಬರ್ 9ರಂದು ಶುಕ್ರವಾರ ನಡೆಯುವ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ನಗರದಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗುತ್ತಿದ್ದು, ಹೊರ ಜಿಲ್ಲೆಗಳಿಂದಲೂ ಸಿಬ್ಬಂದಿ ಕರೆಸಿಕೊಳ್ಳಲಾಗುವುದು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಕೆ.ವಿ. ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಟಿ. ಅರುಣ್, ರಾಜ್ಯಸಮಿತಿ ವಿಶೇಷ ಆಹ್ವಾನಿತ ಜಿ. ಪದ್ಮನಾಭ್, ರಾಜ್ಯಸಮಿತಿ ನಿರ್ದೇಶಕ ಎನ್. ರವಿಕುಮಾರ್, ನಗರ ಕಾರ್ಯದರ್ಶಿ ಕೆ.ಆರ್. ಸೋಮನಾಥ್ ಇದ್ದರು.
Ganesh Festival | ಶಿವಮೊಗ್ಗದಲ್ಲಿ ಗಣೇಶ ಹಬ್ಬ ಆವರಣೆ ಬಗ್ಗೆ ಡಿಸಿ ಪ್ರಮುಖ ಸಭೆ, ನೀಡಿದ 7 ಸೂಚನೆಗಳೇನು?