ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮುಂಬರುವ 2023ರ ವಿಧಾನಸಭೆ ಚುನಾವಣೆ(assembly election)ಯಲ್ಲಿ ಬಿಜೆಪಿ (BJP) ಸೋತಿರುವ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದೇ ನಮ್ಮ ಮುಂದಿರುವ ಗುರಿ ಎಂದು ಶಾಸಕ ಕೆ.ಎಸ್.ಈಶ್ವರಪ್ಪ (KS Eshwarappa) ಹೇಳಿದರು.
ನಗರದ ಹರ್ಷ ದಿ ಫರ್ನ್ ಹೋಟೆಲ್ ನಲ್ಲಿ ಬಿಜೆಪಿ ಶಿವಮೊಗ್ಗ ವಿಭಾಗದ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಶೃಂಗೇರಿ, ಭದ್ರಾವತಿ ಮತ್ತು ಹಳಿಯಾಳ ಕ್ಷೇತ್ರಗಳಲ್ಲಿ ಸೋತಿದ್ದೇವು. ಈ ಬಾರಿ ಆ ಮೂರೂ ಕ್ಷೇತ್ರಗಳನ್ನು ಗೆಲ್ಲಬೇಕು. ಈ ನಿಟ್ಟಿನಲ್ಲಿ ತಮ್ಮ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆ, ಮಾಡಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕಾರ್ಯಕರ್ತರು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.
READ | ತೆರೆದ ಚರಂಡಿಗೆ ಮಲ, ಮೂತ್ರ ವಿಸರ್ಜನೆ ಮಾಡಿದರೆ ಬೀಳಲಿದೆ ದಂಡ
2023ರ ಚುನಾವಣೆಯಲ್ಲಿ ಟಾರ್ಗೆಟ್ 150
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸೀಟುಗಳನ್ನು ಗೆಲ್ಲಬೇಕು. 2024ರ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕಾರ್ಯಕರ್ತರು, ಚುನಾಯಿತ ಜನಪ್ರತಿನಿಧಿಗಳು, ಮುಖಂಡರು ಕಾರ್ಯಗತರಾಗಬೇಕು ಎಂದು ಮನವಿ ಮಾಡಿದರು.
ಭಾರತವನ್ನು ವಿಭಜಿಸಿದ ಪಕ್ಷವೇ ಈಗ ‘ಭಾರತ್ ಜೋಡೋ’ ಮಾಡುತ್ತಿರುವುದು ಹಾಸ್ಯಾಸ್ಪದ. ಜನರು ಬಿಜೆಪಿಯನ್ನು ಸೈದ್ಧಾಂತಿಕ ಮತ್ತು ಅಭಿವೃದ್ಧಿ ಕಾರ್ಯಗಳನ್ನು ನೋಡಿ ಬೆಂಬಲಿಸುತ್ತಿದ್ದಾರೆ. ಪಕ್ಷದ ಸಿದ್ಧಾಂತ, ಸಂಘಟನೆ ಮತ್ತು ನಾಯಕತ್ವ ಕಂಡು ಜನ ಬಿಜೆಪಿ ಕಡೆಗೆ ಆಕರ್ಷಿತರಾಗುತ್ತಾರೆ.
| ಕೆ.ಎಸ್.ಈಶ್ವರಪ್ಪ, ಶಾಸಕ
ಈಗ ಅಯೋಧ್ಯೆ ಮುಂದೆ ಮಥುರಾ, ಕಾಶಿ
ಅಯೋಧ್ಯೆಯಲ್ಲಿ ಭವ್ಯ ಮಂದಿರ ನಿರ್ಮಾಣವಾಗುತ್ತಿದೆ. ಮಥುರಾ, ಕಾಶಿ ಕೂಡ ವಿಮುಕ್ತವಾಗಿ ಕೋಟ್ಯಂತರ ಭಾರತೀಯರ ಕನಸು ನನಸಾಗಲಿದೆ. ದೇಶ ಭಕ್ತಿ ಎಂಬ ಭಾವನೆ ಬಂದಾಗ ಎಲ್ಲರೂ ಒಟ್ಟಾಗಿ ಪಕ್ಷ ಬೇಧ ಮರೆತು ಬಿಜೆಪಿ ಬೆಂಬಲಿಸುತ್ತಿದ್ದಾರೆ. ಸರ್ಜಿಕಲ್ ಸ್ಟ್ರೈಕ್ ಆದಾಗ ಇಡೀ ವಿಶ್ವವೇ ಪ್ರಧಾನಿ ಮೋದಿ ಜೊತೆಗೆ ನಿಂತಿತ್ತು. ಈಗ ಜನ ಬಿಜೆಪಿಯವರು ರಾಷ್ಟ್ರವಾದಿಗಳು. ಕಾಂಗ್ರೆಸ್ ನವರೇ ಕೋಮುವಾದಿಗಳು ಎಂದು ಜನ ತೀರ್ಮಾನಿಸಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಮೂರು ಜಿಲ್ಲೆಗಳ ಶಾಸಕರು, ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.