ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲೆಯಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ (lumpy skin disease) ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ನವೆಂಬರ್ 14ರಿಂದ 30ರವರೆಗೆ ಜಾನುವಾರ ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ (Dr.R.Selvamani) ಆದೇಶಿಸಿದ್ದಾರೆ.
READ | ಶಿವಮೊಗ್ಗದಲ್ಲಿ ಆಟೋ ಚಾಲಕರಿಗೆ ಟಫ್ ರೂಲ್ಸ್, ಏಳು ಪ್ರಮುಖ ಸೂಚನೆಗಳು ಇಲ್ಲಿವೆ
ಕರ್ನಾಟಕ ಅನಿಮಲ್ ಡಿಸೀಸ್(ಕಂಟ್ರೋಲ್)ಆಕ್ಟ್ 1961 ಮತ್ತು ಸಿಆರ್ ಪಿಸಿ ಕಲಂ 144 ರ ಮೇರೆಗೆ ಜಿಲ್ಲೆಯಾದ್ಯಂತ ಈ ಆದೇಶ ಜಾರಿಯಲ್ಲಿರಲಿದೆ. ಈ ಆದೇಶವು ಸಾಮೂಹಿಕವಾಗಿ ಜಾನುವಾರುಗಳು ಸೇರುವಂತಹ ಜಾನುವಾರು ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆಗೆ ಮಾತ್ರ ಅನ್ವಯವಾಗುತ್ತಿದ್ದು, ಇದನ್ನು ಹೊರತುಪಡಿಸಿ ಬೇರೆ ಯಾವ ಉದ್ದೇಶಕ್ಕೂ ಅನ್ವಯಿಸುವುದಿಲ್ಲ. ಆದೇಶ ಉಲ್ಲಂಘಿಸುವವರ ವಿರುದ್ದ ಭಾರತೀಯ ದಂಡ ಸಂಹಿತೆ ಕಲಂ 188 ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.