ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ರಾಜ್ಯದಾದ್ಯಂತ ಒಟ್ಟು 100 ಗೋಶಾಲೆಗಳನ್ನು ಸರ್ಕಾರದ ವತಿಯಿಂದಲೇ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ (Prabhu chauhan) ಹೇಳಿದರು.
ಶಿವಮೊಗ್ಗ ಸಮೀಪದ ಹುಣಸೋಡು ಗ್ರಾಮದಲ್ಲಿ ಕರ್ಕಿ ಶ್ರೀಮಠದ ಸಹಕಾರದೊಂದಿಗೆ ನಡೆಯುತ್ತಿರುವ ಜ್ಞಾನೇಶ್ವರಿ ಗೋಶಾಲೆಗೆ ಭೇಟಿ ನೀಡಿ, ಗೋಪೂಜೆ ನೆರವೇರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಗೋವುಗಳ ರಕ್ಷಣೆಗಾಗಿ ಗೋಶಾಲೆಗಳ ನಿರ್ಮಾಣ ಕಾರ್ಯ ಮಂದಗತಿಯಲ್ಲಿ ಸಾಗಿದ್ದು, ಅವುಗಳಿಗೆ ವೇಗ ಹೆಚ್ಚಿಸಲಾಗುವುದು. ಈಗಾಗಲೇ ಘೋಷಿಸಿರುವಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗೋಶಾಲೆಗಳ ಆರಂಭಕ್ಕೆ ಸ್ಥಳ ನಿವೇಶನ ಗುರುತಿಸುವ ಕಾರ್ಯ ನಡೆದಿದೆ. ಕೆಲವು ಕಡೆ ಸ್ಥಳ ಗುರುತಿಸಲಾಗಿದ್ದು, ಭೌತಿಕವಾಗಿ ಕಟ್ಟಡ ನಿರ್ಮಿಸುವ ಕಾರ್ಯ ಪ್ರಗತಿಯಲ್ಲಿದೆ. ಸರ್ಕಾರದ ಈ ಮಹತ್ವದ ಕಾರ್ಯದೊಂದಿಗೆ ಸಾಕಷ್ಟು ಸಂಖ್ಯೆಯ ದಾನಿಗಳು ಗೋಶಾಲೆಗಳಿಗೆ ಉದಾರ ದಾನ ನೀಡಲು ಆಸಕ್ತಿ ತೋರಿಸಿದ್ದಾರೆ ಎಂದರು.
ಗೋಹತ್ಯೆ ನಿಷೇಧ ಕಾನೂನು ಜಾರಿಯಾದ ನಂತರ ಕಸಾಯಿಖಾನೆಗೆ ಹೋಗುತ್ತಿರುವ ಗೋವುಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ನಿಯಂತ್ರಣಕ್ಕೆ ಬಂದಿದ್ದು, ಗೋಶಾಲೆಗಳಿಗೆ ಬರುತ್ತಿರುವ ಜಾನುವಾರುಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ.
| ಪ್ರಭು ಚವ್ಹಾಣ್, ಪಶುಸಂಗೋಪನಾ ಸಚಿವ
ಗೋಶಾಲೆಗಳಿಗೆ ಆರ್ಥಿಕ ನೆರವು
ರಾಜ್ಯದಲ್ಲಿ ಸರ್ಕಾರಿ ಮತ್ತು ಖಾಸಗಿ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ನಡೆಯುತ್ತಿರುವ ಗೋಶಾಲೆಗಳಿಗೆ ಅಗತ್ಯವಿರುವ ಆರ್ಥಿಕ ನೆರವನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ರಾಜ್ಯ ಸರ್ಕಾರದ ಪುಣ್ಯಕೋಟಿ ವಿಶೇಷ ಯೋಜನೆಯಡಿ ಗೋವಿನ ಸಂತತಿ ರಕ್ಷಣೆ ಹಾಗೂ ಗೋಶಾಲೆಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಸರ್ಕಾರಿ ನೌಕರರಿಂದ ಸುಮಾರು ₹100 ಕೋಟಿ ಸಹಾಯಧನವನ್ನು ನೀಡುತ್ತಿರುವುದು ಈ ಯೋಜನೆಯ ಅನುಷ್ಠಾನಕ್ಕೆ ಹೆಚ್ಚಿನ ಬಲ ಬಂದಂತಾಗಿದೆ. ಪ್ರಸ್ತುತ ಗೋಶಾಲೆಗಳಲ್ಲಿ ಪ್ರತಿ ಜಾನುವಾರಿಗೆ ಪ್ರತಿ ದಿನಕ್ಕೆ ನೀಡಲಾಗುತ್ತಿರುವ ₹17 ಗಳನ್ನು ಗುಜರಾತ್ ರಾಜ್ಯದಲ್ಲಿರುವಂತೆ ₹30 ಗಳಿಗೆ ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ. ಈ ಸಂಬಂಧ ಶೀಘ್ರವೇ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿ, ಅನುಷ್ಠಾನಕ್ಕೆ ತರಲಾಗುವುದು ಎಂದರು.
READ | ಚಿನ್ನದ ಬೆಲೆ ನಿರಂತರ ಇಳಿಕೆ ಬಳಿಕ ಮತ್ತೆ ಏರಿಕೆ, ಇಂದಿನ ಬೆಲೆಯೆಷ್ಟು?
ಯಾವುದೇ ಫಲಾಪೇಕ್ಷೆಯಿಲ್ಲದೇ ಗೋವುಗಳನ್ನು ಸಂರಕ್ಷಿಸುತ್ತಿರುವ, ಗೋಶಾಲೆಗಳನ್ನು ನಡೆಸುತ್ತಿರುವ ಸಂಘ-ಸಂಸ್ಥೆಗಳ ಪ್ರತಿನಿಧಿಗಳಿಗೆ ಅಭಿನಂದನೆ ಸಲ್ಲಿಸಿದರು.
ಶಿವಮೊಗ್ಗದ ಸುರಭಿ ಗೋಶಾಲೆಯ ಮುಖ್ಯಸ್ಥ ನಟರಾಜ್ ಭಾಗ್ವತ್, ಮಹಾವೀರ ಗೋಶಾಲೆಯ ಮುಖ್ಯಸ್ಥ ಬಾಬುಲಾಲ್ ಜೈನ್, ಜ್ಞಾನೇಶ್ವರಿ ಗೋಶಾಲೆಯ ಮುಖ್ಯಸ್ಥ ಚಂದ್ರಹಾಸ ರಾಯ್ಕರ್ ಹಾಗೂ ಸೋಮೇಶ್ ಮತ್ತಿತರರು ಉಪಸ್ಥಿತರಿದ್ದರು.