ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರಿಂದ 1946ರಲ್ಲಿ ಸ್ಥಾಪನೆಗೊಂಡ ರಾಷ್ಟ್ರೀಯ ಶಿಕ್ಷಣ ಸಮಿತಿ(National education society)ಯು ಅಮೃತ ಮಹೋತ್ಸವ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಅದರ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಸಮಿತಿಯ ಉಪಾಧ್ಯಕ್ಷ ಸಿ.ಆರ್.ನಾಗರಾಜ ಹೇಳಿದರು.
ಎನ್.ಇ.ಎಸ್. ಕಚೇರಿಯಲ್ಲಿ ಶುಕ್ರವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಎನ್.ಇ.ಎಸ್ ಕೇವಲ 16 ವಿದ್ಯಾರ್ಥಿಗಳಿಂದ ಪ್ರಾರಂಭಗೊಂಡು ಇಂದು 18000ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಭವಿಷ್ಯ ರೂಪಿಸಿಕೊಳ್ಳುವ ಹೆಮ್ಮರವಾಗಿ ಬೆಳೆದು ನಿಂತಿದೆ. 36 ಶಾಲಾ ಕಾಲೇಜುಗಳು 1800 ಕ್ಕು ಹೆಚ್ಚು ಸಿಬ್ಬಂದಿಗಳು ವೃತ್ತಿ ಬದುಕು ಕಟ್ಟಿಕೊಂಡಿದ್ದಾರೆ ಎಂದರು.
READ | ನೇಪಾಳದಲ್ಲಿ ನಡೆಯುವ ಪ್ಯಾರಾ ಥ್ರೋಬಾಲ್ ಟೂರ್ನಿಯಲ್ಲಿ ಶಿವಮೊಗ್ಗದ ಪಟು ಭಾಗಿ
ಗಣ್ಯರಿಂದ ಉಪನ್ಯಾಸ ಮಾಲಿಕೆ
ಪ್ರಸ್ತುತ ರಾಷ್ಟ್ರೀಯ ಶಿಕ್ಷಣ ಸಮಿತಿ ಅಮೃತ ಮಹೋತ್ಸವದ ಶುಭ ಸಂದರ್ಭದಲ್ಲಿ ಅನೇಕ ಕ್ರಿಯಾಶೀಲ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದೆ. ಪ್ರತಿ ತಿಂಗಳು ವಿವಿಧ ಕ್ಷೇತ್ರಗಳ ಸಾಧಕರಿಂದ ಉಪನ್ಯಾಸ ಮಾಲಿಕೆ ಏರ್ಪಡಿಸಿಕೊಂಡು ಬರಲಾಗುತ್ತಿದೆ. ಇಸ್ರೋ ಮಾಜಿ ಅಧ್ಯಕ್ಷರಾದ ಡಾ.ಕೆ.ಶಿವನ್ ಅವರಿಂದ ಮೊದಲ್ಗೊಂಡು ಇನ್ಫೋಸಿಸ್ ಫೌಂಡೇಶನ್ ಸುಧಾಮೂರ್ತಿ, ಶಿಕ್ಷಣ ತಜ್ಞ ವೈ.ಎಸ್.ವಿ ದತ್ತಾ, ಡಾ.ಗುರುರಾಜ ಕರಜಗಿ, ಪತ್ರಕರ್ತ ವಿಶ್ವೇಶ್ವರ ಭಟ್, ನ್ಯಾಯಮೂರ್ತಿ ಕೃಷ್ಣಾದೀಕ್ಷಿತ್, ಖಾಜಿ, ನಾಗರತ್ನ, ನ್ಯಾಯವಾದಿ ಅಶೋಕ್ ಹಾರನಹಳ್ಳಿ, ಖ್ಯಾತ ವಾಗ್ಮಿ ಪ್ರೊ.ಎಂ.ಕೃಷ್ಣೇಗೌಡ ಅವರು ಉಪನ್ಯಾಸ ನೀಡುವುದರ ಮೂಲಕ ನಮ್ಮನ್ನು ಶ್ರೀಮಂತಗೊಳಿಸಿದ್ದಾರೆ.
ಮೂರು ವಿಶೇಷ ಕಾರ್ಯಕ್ರಮಗಳು
- ಜ.23 ರ ಸೋಮವಾರ ಬೆಳಗ್ಗೆ 11 ಗಂಟೆಗೆ ಉಪನ್ಯಾಸ ಮಾಲಿಕೆಯ 9ನೇ ಸರಣಿ ಕಾರ್ಯಕ್ರಮವನ್ನು ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ. ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಪದ್ಮಭೂಷಣ ಡಾ.ಬಿ.ಎನ್.ಸುರೇಶ್ ‘ರಾಷ್ಟ್ರಕ್ಕೆ ಬಾಹ್ಯಾಕಾಶ ತಂತ್ರಜ್ಞಾನದ ಕೊಡುಗೆ: ಅಂದು, ಇಂದು, ಮುಂದು’ ವಿಷಯವಾಗಿ ಮಾತನಾಡಲಿದ್ದಾರೆ. ಎಸ್.ಆರ್.ನಾಗಪ್ಪಶೆಟ್ಟಿ ಸ್ಮಾರಕ ರಾಷ್ಟ್ರೀಯ ವಿಜ್ಞಾನ ಅನ್ವಯಿಕ ಕಾಲೇಜು ಕಾರ್ಯಕ್ರಮ ಸಂಯೋಜಿಸಲಿದ್ದಾರೆ.
- ಜ.25 ರ ಬುಧವಾರ ಬೆಳಗ್ಗೆ 11 ಗಂಟೆಗೆ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಥಾಪಿಸಿರುವ 400 ಕಿಲೊವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಘಟಕದ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ. ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮವನ್ನು ಶಾಸಕರಾದ ಕೆ.ಎಸ್.ಈಶ್ವರಪ್ಪ, ಸಂಸದರಾದ ಬಿ.ವೈ ರಾಘವೇಂದ್ರ ಉದ್ಘಾಟಿಸಲಿದ್ದಾರೆ.
- ಜ.30 ರ ಸೋಮವಾರ ಬೆಳಗ್ಗೆ 11 ಗಂಟೆಗೆ ಕಮಲಾ ನೆಹರೂ ಮಹಿಳಾ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಸರ್ವೋದಯ ಮಂಡಲದ ಸಂಯುಕ್ತಾಶ್ರಯದಲ್ಲಿ ಸರ್ವೋದಯ ದಿನಾಚರಣೆ ಮತ್ತು ಕರ್ನಾಟಕ ರಾಜ್ಯ ಸಮಾವೇಶ ಕಾರ್ಯಕ್ರಮ ಏರ್ಪಡಿಸಲಾಗಿದೆ.
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಖಜಾಂಚಿಗಳಾದ ಡಿ.ಜಿ ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಸಹಾಯಕ ಕುಲಸಚಿವರಾದ ಪ್ರೊ.ಎನ್.ಕೆ.ಹರಿಯಪ್ಪ, ಪ್ರಾಂಶುಪಾಲರಾದ ಡಾ.ಕೆ.ನಾಗೇಂದ್ರಪ್ರಸಾದ್, ಡಾ.ನಾಗಭೂಷಣ್, ಡಾ.ಕೆ.ಎಲ್.ಅರವಿಂದ, ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
https://suddikanaja.com/2023/01/05/shivamogga-city-bus-stand-dc-dr-r-selvamani-order/