ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜನರು ಭ್ರಷ್ಟಾಚಾರದ ವಿರುದ್ಧ ಹೋರಾಟದಲ್ಲಿ ಕೈಜೋಡಿಸಬೇಕು. ಇದೇ ವೇಳೆ ಕೆಲವರು ಸುಳ್ಳು ದೂರುಗಳನ್ನು ದಾಖಲಿಸಿ ವಸೂಲಿ ದಂಧೆಗೆ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಅಂತಹ ಪ್ರಕರಣಗಳಲ್ಲಿ ಲೋಕಾಯುಕ್ತ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಎಚ್ಚರಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಗಳ ಮುಖ್ಯಸ್ಥರ ಸಭೆಯನ್ನು ನಡೆಸಿ ಮಾತನಾಡಿದರು.
ನ್ಯಾಯಮೂರ್ತಿ ಹೇಳಿದ್ದೇನು?
- ಕಡತ ವಿಲೇವಾರಿಯಲ್ಲಿ ವಿಳಂಬ, ಕರ್ತವ್ಯ ಲೋಪ, ಅಧಿಕಾರದ ದುರುಪಯೋಗ, ಭ್ರಷ್ಟಾಚಾರದಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಲಾಗುವುದು.
- ಶಿವಮೊಗ್ಗ ಜಿಲ್ಲೆಯಲ್ಲಿ ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಮತ್ತು ಪುನರುಜ್ಜೀವನ ಕುರಿತಾಗಿ ಲೋಕಾಯುಕ್ತ ಸಂಸ್ಥೆ ಸ್ವಯಂ ಪ್ರೇರಿತ ದೂರನ್ನು ದಾಖಲಿಸಿಕೊಂಡಿದೆ. ಕೆರೆಗಳ ಒತ್ತುವರಿ ತೆರವುಗೊಳಿಸಿ ಸಂರಕ್ಷಿಸಲು ಗುರಿಯನ್ನು ನಿಗದಿಪಡಿಸಲಾಗಿದ್ದು, ನಿಯಮಿತವಾಗಿ ಈ ಕುರಿತು ವಿಚಾರಣೆಯನ್ನು ನಡೆಸಲಾಗುವುದು.
- ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು 6 ಸಾವಿರಕ್ಕೂ ಅಧಿಕ ಕೆರೆಗಳಿದ್ದು, ಇವುಗಳ ಸರ್ವೇ ಕಾರ್ಯವನ್ನು ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಆದ್ಯತೆ ಮೇರೆಗೆ ಈ ಕಾರ್ಯವನ್ನು ಕೈಗೊಂಡು ವರದಿಯನ್ನು ಸಲ್ಲಿಸಬೇಕು. ಇದೇ ರೀತಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿರುವ ಕೆರೆಗಳ ಸ್ಥಿತಿಗತಿ ಕುರಿತು ವರದಿಯನ್ನು ಪ್ರತ್ಯೇಕವಾಗಿ ಸಲ್ಲಿಸಬೇಕು.
ಉದ್ಯೋಗ ಖಾತ್ರಿ ಅನುಷ್ಠಾನದಲ್ಲಿ ಲೋಪ
ಗ್ರಾಮೀಣ ಪ್ರದೇಶದಲ್ಲಿ ಪ್ರತಿಯೊಬ್ಬರಿಗೂ ಉದ್ಯೋಗ ಕಲ್ಪಿಸುವ ಉದ್ಯೋಗ ಖಾತ್ರಿ ಯೋಜನೆಯ ಅನುಷ್ಠಾನ ಸರಿಯಾಗಿ ಆಗುತ್ತಿಲ್ಲ. ಈ ಕುರಿತು 5 ಲಕ್ಷ ಪ್ರಕರಣಗಳು ಲೋಕಾಯುಕ್ತದ ಮುಂದಿವೆ. ಯುದ್ದೋಪಾಧಿಯಲ್ಲಿ ಪ್ರಕರಣಗಳ ವಿಲೇವಾರಿ ಮಾಡಲಾಗುತ್ತಿದೆ. ಉದ್ಯೋಗ ಖಾತ್ರಿ ಯೋಜನೆ ಜಾರಿಯ ಸರಿಯಾದ ದಾಖಲೆಗಳನ್ನು ನಿರ್ವಹಿಸದ ಪಿಡಿಒಗಳ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಯೋಜನೆ ಅನುಷ್ಠಾನ ಸಮರ್ಪಕವಾಗಿ ನಿರ್ವಹಿಸದಿದ್ದರೆ ಇಲಾಖೆಯ ಎಲ್ಲಾ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಹೇಳಿದರು.
READ | ಅಡಿಕೆ ಹಾಳೆಯಿಂದ ಪಾದರಕ್ಷೆ ತಯಾರಿಕೆ, ಲೋಕಲ್’ನಿಂದ ಗ್ಲೋಬಲ್’ವರೆಗೆ ಉತ್ಪನ್ನಗಳಿಗೆ ಬೇಡಿಕೆ
ವಸತಿ ಯೋಜನೆ ಅನುಷ್ಠಾನ
ವಿವಿಧ ವಸತಿ ಯೋಜನೆಗಳಲ್ಲಿ ಫಲಾನುಭವಿಗಳ ಆಯ್ಕೆಯಲ್ಲಿ ಅಕ್ರಮವಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಈ ದೂರುಗಳ ವಿಚಾರಣೆಯನ್ನು ಮಾಡಲಾಗುತ್ತಿದೆ. ಇದೇ ರೀತಿ ನೀರಾವರಿ, ಕೃಷಿ, ಆರೋಗ್ಯ ಕ್ಷೇತ್ರ ಸೇರಿದಂತೆ ಎಲ್ಲಾ ಇಲಾಖೆಗಳು ಜನಕಲ್ಯಾಣ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಹೇಳಿದರು.
ಪಟ್ಟಿ ಸಿದ್ಧಪಡಿಸಲು ಸೂಚನೆ
ಲೋಕಾಯುಕ್ತ ಸಂಸ್ಥೆಯಲ್ಲಿ ಪ್ರಸ್ತುತ ಪೂರ್ಣ ಪ್ರಮಾಣದ ಅಧಿಕಾರಿ ಸಿಬ್ಬಂದಿಯಿದ್ದು, ನ್ಯಾಯಾಂಗ ವಿಭಾಗ, ಪೊಲೀಸ್ ವಿಭಾಗ, ಆಂತರಿಕ ಗುಪ್ತಚರ ವಿಭಾಗ, ಆಡಳಿತ ವಿಭಾಗ, ತಾಂತ್ರಿಕ ವಿಭಾಗ ಕಾರ್ಯ ನಿರ್ವಹಿಸುತ್ತಿದೆ. ಪ್ರತಿ ಜಿಲ್ಲೆಯಲ್ಲಿ ಜನಕಂಟಕರಾಗಿರುವ ಸರ್ಕಾರಿ ಅಧಿಕಾರಿ, ಸಿಬ್ಬಂದಿಯ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ. ಅದರ ಪ್ರಕಾರ ದಾಳಿಗಳನ್ನು ನಡೆಸಿ ಭ್ರಷ್ಟ ವ್ಯವಸ್ಥೆಯನ್ನು ಮಟ್ಟ ಹಾಕಲು ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದೇ ರೀತಿ ಉತ್ತಮವಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವೂ ನಡೆಯಬೇಕಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಡಿ.ಪ್ರಕಾಶ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆ.ಟಿ.ಹನುಮಂತಪ್ಪ, ಲೋಕಾಯುಕ್ತ ಡಿ.ವೈ.ಎಸ್.ಪಿ ಮೃತ್ಯುಂಜಯ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
https://suddikanaja.com/2023/01/06/shivamogga-final-voter-list-released/