ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ಮಾ.11 ರಿಂದ ಮಾ. 21 ರವರೆಗೆ ನಿತ್ಯ 2000 ಕ್ಯೂಸೆಕ್ಸ್’ನಂತೆ ಒಟ್ಟು 2 ಟಿ.ಎಂ.ಸಿ ಪ್ರಮಾಣದ ನೀರನ್ನು ಹರಿಸಲಾಗುವುದು ಎಂದು ಕರ್ನಾಟಕ ನೀರಾವರಿ ನಿಗಮ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಎಂಜಿನಿಯರ್ ತಿಳಿಸಿದ್ದಾರೆ.
READ | ಶಿವಮೊಗ್ಗದಲ್ಲಿ ವಿವಿಧ ಕಂಪನಿಗಳಿಂದ ಸಂದರ್ಶನ, ಎಸ್ಎಸ್ಎಲ್ಸಿ to ಡಿಗ್ರಿ ಜಾಬ್ಸ್
ತುಂಗಭದ್ರ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ನೀರಿನ ಕೊರತೆ ಇರುವುದರಿಂದ ಭದ್ರಾ ಜಲಾಶಯದಿಂದ ಏಳು ಟಿಎಂಸಿ ನೀರು ಹರಿಸುವಂತೆ ಜಲಸಂಪನ್ಮೂಲ ಇಲಾಖೆಯು ಭದ್ರಾ ಯೋಜನಾ ವೃತ್ತದ ಅಧಿಕಾರಿಗಳಿಗೆ ವರದಿ ಕಳುಹಿಸಿದ್ದರು.
ಈ ಕುರಿತು ರೈತರಿಂದ ಸಲಹೆಗಳನ್ನು ಪಡೆದು ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅವರು ಅಚ್ಚುಕಟ್ಟು ಪ್ರದೇಶದಲ್ಲಿ ಬೇಸಿಗೆಯಲ್ಲಿ ರೈತರಿಗೆ ಸಮಸ್ಯೆಯಾಗುತ್ತದೆ ಎಂಬ ಕಾರಣಕ್ಕೆ ನೀರು ಹರಿಸಲು ಸಾಧ್ಯವಿಲ್ಲ ಎಂದು ವರದಿ ನೀಡಿದ್ದರು ಎಂದು ತಿಳಿದುಬಂದಿದೆ. ಆದರೆ, ಸರ್ಕಾರ ಇದಕ್ಕೆ ಮನ್ನಣೆ ನೀಡದೇ 2 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಆದೇಶಿಸಿದೆ.
ಸಾರ್ವಜನಿಕರಿಗೆ ಸೂಚನೆ
ಭದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡುವ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆ ಸಂಬಂಧಿಸಿದ ಕೆಲಸ ಮಾಡುವುದು ಇತ್ಯಾದಿಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್ ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ ಎಂದು ಎಚ್ಚರಿಕೆ ನೀಡಲಾಗಿದೆ.