ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮಾರ್ಚ್ 13 ರಿಂದ 25 ರವರೆಗೆ ಜಿಲ್ಲೆಯಾದ್ಯಂತ ರಾಷ್ಟ್ರೀಯ ಜಂತುಹುಳು ನಿವಾರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಸಮಾರಂಭವನ್ನು ಮಾ.13 ರ ಬೆಳಗ್ಗೆ 10.30 ಕ್ಕೆ ಗುರುಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೇರವೇರಿಸಲಾಗುವುದು.
ಜಿಲ್ಲೆಯಲ್ಲಿರುವ 1 ರಿಂದ 19 ವರ್ಷದ ಎಲ್ಲ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆಗಳನ್ನು ಅಂಗನವಾಡಿ, ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳು, ಐಟಿಐ ಕಾಲೇಜ್, ಟೆಕ್ನಿಕಲ್ ಕಾಲೇಜ್ (ಡಿಪ್ಲೊಮಾ, ಬಿಇ), ನರ್ಸಿಂಗ್ ಕಾಲೇಜ್, ಪ್ರಥಮ ಬಿ.ಎ. ಕಾಲೇಜ್, ಮೆಡಿಕಲ್ ಕಾಲೇಜ್ ಮತ್ತು ಆಯುರ್ವೇದಿಕ್ ಕಾಲೇಜುಗಳಲ್ಲಿ ಉಚಿತವಾಗಿ ನೀಡಲಾಗುವುದು. ಅಲ್ಲದೆ ಸದರಿ ವಯಸ್ಸಿನ ಶಾಲೆ ಬಿಟ್ಟ ಮಕ್ಕಳಿಗೆ ಸಂಬಂಧಪಟ್ಟ ಅಂಗನವಾಡಿಗಳಲ್ಲಿ ಆಲ್ಬೆಂಡಝೋಲ್ ಮಾತ್ರೆಗಳನ್ನು ಉಚಿತವಾಗಿ ವಿತರಿಸಲಾಗುವುದು. ಇದರ ಉಪಯೋಗವನ್ನು ಜಿಲ್ಲೆಯ ಎಲ್ಲಾ 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಪೋಷಕರು ಕೊಡಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜೇಶ್ ಸುರಗೀಹಳ್ಳಿ ಕೋರಿದ್ದಾರೆ.