
ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕಾಂಗ್ರೆಸ್ ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದಂತೆ ಐದು ಗ್ಯಾರಂಟಿಗಳನ್ನೂ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದು, ಕಾಂಗ್ರೆಸ್ ಗ್ಯಾರಂಟಿಗಳನ್ನು ಘೋಷಣೆ ಮಾಡಿದ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರಕ್ಕೆ ಜಿಲ್ಲಾ ಎನ್.ಎಸ್.ಯು.ಐ. ಹಾಗೂ ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ನಗರದ ಅಶೋಕ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಅಂಚಿ ಸಂಭ್ರಮಿಸಿ ಅಭಿನಂದಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಮಾತನಾಡಿ, ಕಾಂಗ್ರೆಸ್ ಜನಪರ, ಪ್ರಗತಿಪರ ಹಾಗೂ ನುಡಿದಂತೆ ನಡೆಯುವ ಸರ್ಕಾರ ಎನ್ನುವುದು ಮತ್ತೊಮ್ಮೆ ಸಾಬೀತು ಮಾಡಿದೆ. ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ 5 ವರ್ಷಗಳ ಸುಭದ್ರ ಸರ್ಕಾರ ನಡೆಸಿದ್ದರು. ಆಡಳಿತದಲ್ಲಿ ಪಾರದರ್ಶಕತೆ ಕಾಪಾಡಿಕೊಂಡಿದ್ದರು. ಅಂದಿನ ಚುನಾವಣೆಯಲ್ಲಿ ನೀಡಿದ್ದ 165 ಭರವಸೆಗಳ ಪೈಕಿ 153 ಭರವಸೆಗಳನ್ನು ಈಡೇರಿಸಿ, ಕಾಂಗ್ರೆಸ್ ನುಡಿದಂತೆ ನಡೆಯುತ್ತದೆ ಎಂದು ತೋರಿಸಿದ್ದರು ಎಂದರು.
ಈ ಬಾರಿ ಚುನಾವಣೆಯಲ್ಲಿ ರಾಜ್ಯದ ಜನತೆಗೆ 5 ಗ್ಯಾರಂಟಿಗಳನ್ನು ನೀಡಿತ್ತು. ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ನಿರುದ್ಯೋಗ ಭತ್ಯೆ ಹಾಗೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಗ್ಯಾರಂಟಿಗಳನ್ನು ಕೊಟ್ಟಿದ್ದರು. ಅವುಗಳನ್ನು ಈಡೇರಿಸಲಾಗಿದೆ.
– ಆರ್.ಪ್ರಸನ್ನ ಕುಮಾರ್, ಮಾಜಿ ಎಂ.ಎಲ್.ಸಿ.
ಮಹಾನಗರ ಪಾಲಿಕೆ ಸದಸ್ಯ ರಮೇಶ್ ಹೆಗ್ಡೆ, ಎಸ್.ಪಿ.ದಿನೇಶ್ ಮಾತನಾಡಿ, ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ, ಡಿ.ಕೆ. ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನ ನಡೆದ ಮೊದಲ ಸಚಿವ ಸಂಪುಟ ಸಭೆಯಂದೇ ಎಲ್ಲಾ 5 ಗ್ಯಾರಂಟಿಗಳನ್ನೂ ಈಡೇರಿಸಲು ತೀರ್ಮಾನಿಸಿದ್ದರು. ಶುಕ್ರವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಎಲ್ಲ 5 ಗ್ಯಾರಂಟಿಗಳನ್ನು ಈಡೇರಿಸಲು ತೀರ್ಮಾನ ತೆಗೆದುಕೊಂಡಿದ್ದು, ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಆ ಮೂಲಕ ಕಾಂಗ್ರೆಸ್ ನುಡಿದಂತೆ ನಡೆಯುವ ಸರ್ಕಾರ ಎನ್ನುವುದು ಸಾಬೀತಾಗಿದೆ ಎಂದು ಹೇಳಿದರು.
ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಮ್ ಪಾಶಾ, ಜಿಲ್ಲಾ ಎನ್.ಎಸ್.ಯು.ಐ ಅಧ್ಯಕ್ಷ ವಿಜಯ್, ಆರಿಫ್, ರವಿ ಕಾಟಿಕೆರೆ, ಹರ್ಷಿತ್, ಗಿರೀಶ್, ಮಲಗೊಪ್ಪ ಶಿವು, ಅಕ್ಬರ್, ಚಂದ್ರೋಜಿ ರಾವ್, ರವಿ, ಚರಣ್, ಸಾಗರ್, ಆಕಾಶ್, ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್, ಯುವ ಕಾಂಗ್ರೆಸ್ ಮುಖಂಡ ಮಧುಸೂದನ್, ಅಬ್ದುಲ್ ಸತ್ತರ್, ಅನ್ನು, ಹುಸೇನ್, ಬಸವರಾಜ್, ಅಭಿ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.