ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಪೋಕ್ಸೋ ಪ್ರಕರಣದಲ್ಲಿ ನಗರದ ಖಾಸಗಿ ಶಾಲೆಯೊಂದರ ಪ್ರಾಂಶುಪಾಲರಿಗೆ ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ & ವಿಶೇಷ ಸತ್ರ ನ್ಯಾಯಾಲಯ (ಎಫ್ ಟಿಎಸ್ಸಿ-1) ಜಾಮೀನು ನಿರಾಕರಣೆ ಮಾಡಿ ಆದೇಶಿಸಿದೆ.
ಶಾಲೆಯ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಕೋಟೆ ಪೊಲೀಸ್ ಠಾಣೆಯಲ್ಲಿ ಇತ್ತೀಚೆಗೆ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನದಲ್ಲಿರಿಸಲಾಗಿತ್ತು. ಆರೋಪಿಯು ತನಗೆ ಜಾಮೀನು ನೀಡುವಂತೆ ಕೋರಿ ಅರ್ಜಿಯನ್ನು ಸಲ್ಲಿಸಿಕೊಂಡಿದ್ದು, ಈ ಅರ್ಜಿಯ ವಿಚಾರಣೆ ನಡೆಸಿ, ಅರ್ಜಿಯನ್ನು ವಜಾಗೊಳಿಸಿ ಆದೇಶ ನೀಡಿದೆ.
READ | ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಐದು ದಿನವಷ್ಟೇ ಬಾಕಿ
ಕಿಶೋರ ಕಾರ್ಮಿಕ ಪತ್ತೆ
SAGAR: ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಸಾಗರ ತಾಲ್ಲೂಕಿನಲ್ಲಿ ಅನಿರೀಕ್ಷಿತ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿದ್ದು, ಓರ್ವ ಕಿಶೋರ ಕಾರ್ಮಿಕ ಪತ್ತೆಯಾಗಿರುತ್ತಾನೆ.
ತಪಾಸಣೆಯಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರಡಿ ಇತರೆ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು, ಬೀದಿ ಬದಿ ವ್ಯಾಪಾರಿಗಳಿಗೆ, ಮಂಡಕ್ಕಿ ಭಟ್ಟಿಗಳಲ್ಲಿ, ಬಾಲಕಾರ್ಮಿಕ ಕಾಯ್ದೆಯ ಕುರಿತು ಅರಿವು ಮೂಡಿಸಲಾಯಿತು. ನಂತರ ಆಟೋಕಾಂಪ್ಲೆಕ್ಸ್, ಬಿ.ಹೆಚ್ ರಸ್ತೆ, ಗಾಂಧಿನಗರ ಮುಂತಾದ ಪ್ರದೇಶಗಳಲ್ಲಿ ತಪಾಸಣೆ ನಡೆಸಲಾಯಿತು.
ತಪಾಸಣೆಯಲ್ಲಿ ಸಾಗರ ಕಾರ್ಮಿಕ ನಿರೀಕ್ಷಕರಾದ ಶಿಲ್ಪ, ಯೋಜನಾ ನಿರ್ದೇಶಕರಾದ ರಘುನಾಥ ಎ.ಎಸ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಾಂತಾಬಾಯಿ, ಪೊಲೀಸ್ ಇಲಾಖೆ ಮೀರಾಬಾಯಿ ಸದರಿ ತಂಡದಲ್ಲಿ ಹಾಜರಿದ್ದರು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.