ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಸೊರಬ ತಾಲೂಕಿನ ಶಿಡ್ಡಿಹಳ್ಳಿ 140 ಜನರ ಮೇಲೆ ಮೊಕದ್ದಮೆ ದಾಖಲಿಸಿರುವುದು ಸರಿಯಲ್ಲ. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಪುನರ್ ಪರಿಶೀಲಿಸಿ ಮೊಕದ್ದಮೆಯನ್ನು ರದ್ದುಪಡಿಸಲು ಕ್ರಮ ಕೈಗೊಳ್ಳುವಂತೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿಯ ಸಹ್ಯಾದ್ರಿ ಸಭಾಂಗಣದಲ್ಲಿ ಶರಾವತಿ ಸಂತ್ರಸ್ತರ ಪುನರ್ವಸತಿ ಮತ್ತು ಸಮಸ್ಯೆಗೆ ಶಾಶ್ವತ ಒದಗಿಸುವ ಕುರಿತು ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಮಾಲೋಚನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
READ | ಎಪಿಪಿ, ವಕೀಲರ ಹುದ್ದೆ, ಗ್ರಾಮೀಣ ಅಂಚೆ ಸೇವಕರ ನೇಮಕ, ಕೂಡಲೇ ಅರ್ಜಿ ಸಲ್ಲಿಸಿ
ಮಧು ಬಂಗಾರಪ್ಪ ನೀಡಿದ ಸೂಚನೆಗಳಿವು
- ಜಿಲ್ಲೆಯಲ್ಲಿನ ಶರಾವತಿ ಸಂತ್ರಸ್ಥರ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಬಹು ದಿನಗಳ ಈ ಸಮಸ್ಯೆಯನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಉತ್ಸುಕರಾಗಿದ್ದಾರೆ.
- ಈ ಸಂಬಂಧ ಕಳೆದ ವರ್ಷ ಶರಾವತಿ ಸಂತ್ರಸ್ತರ ಪ್ರತಿನಿಧಿಗಳು, ಪರಿಸರಾಸಕ್ತರು, ತಜ್ಞರು, ಹಾಗೂ ಬುದ್ದಿಜೀವಿಗಳನ್ನೊಳಗೊಂಡ ಹಲವು ಸದಸ್ಯರ ಸಮಿತಿಯನ್ನು ರಚಿಸಿ, ಹೋರಾಟ ರೂಪಿಸಿ, ಸರ್ಕಾರಕ್ಕೆ ಮನವಿ ಸಲ್ಲಿಸಿ ಅಂದಿನ ಸರ್ಕಾರದ ಗಮನ ಸೆಳೆಯಲಾಗಿತ್ತು.
- ಹಲವು ದಶಕಗಳ ಹಿಂದೆಯೆ ಸರ್ಕಾರದಿಂದ ಹಕ್ಕುಪತ್ರಗಳನ್ನು ಪಡೆದುಕೊಂಡಿದ್ದು ಸಾಗುವಳಿ ಮಾಡುತ್ತಿರುವವರನ್ನು ಹಾಗೂ ವಸತಿ ವ್ಯವಸ್ಥೆ ಕಲ್ಪಿಸಿಕೊಂಡಿರುವವರನ್ನು ಒಕ್ಕಲೆಬ್ಬಿಸುವ ಮೊದಲು ಅವರು ಹೊಂದಿರುವ ದಾಖಲಾತಿಗಳು ಪರಿಶೀಲಿಸಬೇಕು. ಅಲ್ಲದೆ ಕಂದಾಯ ಇಲಾಖೆಯ ದಾಖಲೆಗಳಲ್ಲಿಯೂ ಬದಲಾವಣೆ ಮಾಡಿಕೊಡಬೇಕು.
- ಅಧಿಕಾರಿಗಳು ಕ್ರಮ ವಹಿಸುವ ಮುನ್ನ ಶರಾವತಿ ಸಂತ್ರಸ್ತರ ಸಮಸ್ಯೆ ಹೋರಾಟ ಸಮಿತಿಯ ಸದಸ್ಯರ ಸಲಹೆಯನ್ನು ಪಡೆದುಕೊಳ್ಳಬೇಕು.
ಅರಣ್ಯ ಇಲಾಖೆಯ ರಾಜ್ಯಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ, ಶರಾವತಿ ಹೋರಾಟ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.